ETV Bharat / state

ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಪ್ರಧಾನಿಗೆ ಪತ್ರ; ಪ್ರಧಾನಿಗಳು ಉತ್ತರ ಕೊಡಬೇಕು ಎಂದ ಡಿಕೆಶಿ

author img

By

Published : Nov 10, 2022, 7:47 PM IST

ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆಯದೆ ವಚನಭ್ರಷ್ಟವಾಗಿರುವುದು ಹಾಗೂ ಸರ್ಕಾರದ ಲೋಪಗಳ ಬಗ್ಗೆ ನಾವು ಪ್ರಧಾನಿ ಅವರಿಗೆ ಪತ್ರ ಬರೆಯುತ್ತಿದ್ದು, ರಾಜ್ಯಕ್ಕೆ ಆಗಮಿಸುತ್ತಿರುವ ಅವರು ಇದಕ್ಕೆ ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ದೇವನಹಳ್ಳಿ(ಬೆಂಗಳೂರು): ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆಯ ಪತ್ರ ಬರೆದಿದ್ದು, ರಾಜ್ಯಕ್ಕೆ ಬರುವ ಪ್ರಧಾನಿಯವರು ಪತ್ರದ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾವು 2013ರಲ್ಲಿ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದೆವು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು

ನಾಳೆ ಅಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುತ್ತಿದ್ದಾರೆ. ಸರ್ಕಾರದಿಂದ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಉದ್ದೇಶಕ್ಕೆ 2 ಸಾವಿರ ಎಕರೆ ಜಮೀನು ನೀಡಲಾಗಿತ್ತು. ಹೀಗಾಗಿ ಈ ಪ್ರತಿಮೆಯನ್ನು ಸರ್ಕಾರದ ಬದಲು ವಿಮಾನ ನಿಲ್ದಾಣದ ಆಡಳಿತ ಸಂಸ್ಥೆಯೇ ನಿರ್ಮಾಣ ಮಾಡಬಹುದಾಗಿತ್ತು. ಇದಕ್ಕಾಗಿ ಸರ್ಕಾರ ಹಣ ಹಾಕುವ ಅಗತ್ಯ ಇರಲಿಲ್ಲ. ಆದರೂ ಸರ್ಕಾರದ ಹಣದಲ್ಲಿ ಪ್ರತಿಮೆ ಮಾಡಲಾಗಿದೆ.

ಪ್ರಧಾನಿ ಕಾರ್ಯಕ್ರಮದ ದುರುಪಯೋಗ: ಪ್ರಧಾನಿಗಳು ರಾಜ್ಯಕ್ಕೆ ಆಗಮಿಸುತ್ತಿರುವುದಕ್ಕೆ ನಮಗೆ ಯಾವುದೇ ತಕರಾರಿಲ್ಲ. ಆದರೆ, ಅವರ ಕಾರ್ಯಕ್ರಮಕ್ಕೆ ಅಧಿಕಾರ ದುರುಪಯೋಗ ಮಾಡಿಕೊಂಡು ಕಾಲೇಜು ವಿದ್ಯಾರ್ಥಿಗಳು, ಅಂಗನವಾಡಿ, ಸ್ವಸಹಾಯ ಗುಂಪಿನ ಸದಸ್ಯರನ್ನು ಕರೆ ತರಲು ಮುಂದಾಗಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರಕ್ಕೆ ಜನ ಬೆಂಬಲ ಇಲ್ಲ ಎಂಬುದು ಸ್ಪಷ್ಟವಾಗುತ್ತಿದೆ.

ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಪ್ರಧಾನಿಗೆ ಪತ್ರ : ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆಯದೇ ವಚನ ಭ್ರಷ್ಟವಾಗಿರುವುದು ಹಾಗೂ ಸರ್ಕಾರದ ಲೋಪಗಳ ಬಗ್ಗೆ ನಾವು ಪ್ರಧಾನಿ ಅವರಿಗೆ ಪತ್ರ ಬರೆಯುತ್ತಿದ್ದು, ರಾಜ್ಯಕ್ಕೆ ಆಗಮಿಸುತ್ತಿರುವ ಅವರು ಇದಕ್ಕೆ ಉತ್ತರಿಸಬೇಕು. ಕಳೆದ ಚುನಾವಣೆ ಸಮಯದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳಲ್ಲಿ ಶೇ.90 ರಷ್ಟು ಈಡೇರಿಸಿಲ್ಲ. ಈ ಬಗ್ಗೆ ನಾವು ನಿತ್ಯ ಒಂದೊಂದು ಪ್ರಶ್ನೆಗಳನ್ನು ಕೇಳುತ್ತಾ ಬಂದಿದ್ದು, ಇದುವರೆಗೂ ಸರ್ಕಾರ ಯಾವುದಕ್ಕೂ ಉತ್ತರ ನೀಡಿಲ್ಲ.

ಚುನಾವಣೆ ಸಂದರ್ಭದಲ್ಲಿ ಮೋದಿ ಅವರು ಯಾವುದೇ ದಾಖಲಾತಿ ಇಲ್ಲದೇ ನಮ್ಮ ಸರಕಾರವನ್ನು 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಗೂಬೆ ಕೂರಿಸಿದರು. ಅದನ್ನು ಸಾಬೀತುಪಡಿಸಲು ನಮ್ಮ ಮೇಲೆ ಯಾವುದೇ ತನಿಖೆ ಮಾಡಲಿಲ್ಲ. ಆದರೆ, ಇವರ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರು ದಯಾಮರಣ ಅರ್ಜಿ ಬರೆದಿದ್ದಾರೆ. ಈ ಬಗ್ಗೆ ಮೋದಿ ಅವರು ಉತ್ತರಿಸಬೇಕು.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ನಿರುದ್ಯೋಗಿ ಯುವಕರು, ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದರು. ಇದಾವುದೂ ಆಗಿಲ್ಲ. ಬದಲಿಗೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕರ್ನಾಟಕ ರಾಜ್ಯ ಭ್ರಷ್ಟಾಚಾರದ ಕಳಂಕ ಹೊತ್ತಿರುವ ಬಗ್ಗೆ ಮಾಧ್ಯಮಗಳೇ ಬರೆದಿವೆ. ಚುನಾವಣೆ ಸಮಯದಲ್ಲಿ ನಾನು ತಿನ್ನುವುದಿಲ್ಲ ಬೇರೆಯವರಿಗೂ ತಿನ್ನಲು ಬಿಡಲ್ಲ ಎಂದು ಹೇಳಿದ್ದಿರಿ. ಈಗ ನಿಮ್ಮವರು ಏನು ತಿನ್ನುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಕೇಳುತ್ತಿದ್ದೇವೆ.

ರೈತರ ಕೃಷಿ ವೆಚ್ಚ ಡಬಲ್ ಆಗಿದೆ: ನೀವು ವಚನಭ್ರಷ್ಟರಾಗಿದ್ದು, ಕೊಟ್ಟ ಮಾತು ಉಳಿಸಿಕೊಂಡಿಲ್ಲ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರಿಗೆ 1 ಲಕ್ಷದವರೆಗೂ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಿರಿ. ಈವರೆಗೂ ಮಾಡಿಲ್ಲ. ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದಿರಿ. ರೈತರ ಆದಾಯ ಡಬಲ್ ಆಗುವ ಬದಲಾಗಿ ರೈತರ ಕೃಷಿ ವೆಚ್ಚ ಡಬಲ್ ಆಗಿದೆ. ಹೀಗೆ ಹತ್ತು ಹಲವು ವಿಚಾರಗಳನ್ನು ಪತ್ರದ ಮೂಲಕ ಕೇಂದ್ರ ಸರ್ಕಾರದ ಮುಂದೆ ಇಡುತ್ತಿದ್ದೇವೆ. ಇದಕ್ಕೆ ಮೋದಿ ಅವರು ಉತ್ತರಿಸಬೇಕು.

ಕೃಷ್ಣ ಆಣೆಕಟ್ಟು ಎತ್ತರ 524 ಅಡಿಗೆ ಹೆಚ್ಚಿಸುತ್ತೇವೆ ಎಂದಿದ್ದಿರಿ. ಅದಕ್ಕೆ ಅನುದಾನ ನೀಡುತ್ತೇವೆ. ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದಿರಿ. ಯಾವುದೂ ಆಗಿಲ್ಲ. ಪರಿಶಿಷ್ಟ ಜಾತಿ ಹಾಗೂ ಪಂಗಡವರಿಗೆ 4,500 ಕೋಟಿ ಸ್ಕಾಲರ್ ಶಿಪ್ ನೀಡುತ್ತೇವೆ ಎಂದಿದ್ದಿರಿ. ಅದನ್ನೂ ನೀಡಿಲ್ಲ. ಹೀಗೆ ನೀವು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ.

ಜಾಗತಿಕ ಬಂಡವಾಳ ಹೂಡಿಕೆಯಲ್ಲಿ 10 ಲಕ್ಷ, ಸರ್ಕಾರ ಪ್ರಚಾರ ಅಷ್ಟೇ: ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಸರ್ಕಾರ ಕೇವಲ ಪ್ರಚಾರಕ್ಕಾಗಿ 10 ಲಕ್ಷ ಕೋಟಿ ರೂ. ಒಪ್ಪಂದ ಮಾಡಿಕೊಂಡಿದೆ. ಇದರಲ್ಲಿ ಶೇ.10 ರಷ್ಟು ಜಾರಿ ಆಗುವುದಿಲ್ಲ. ನಮ್ಮ ಸರ್ಕಾರ ಬಂದ ನಂತರ ಇದೆಲ್ಲವನ್ನು ಪುನರ್ ಪರಿಶೀಲನೆ ಮಾಡುತ್ತೇವೆ. ಸರ್ಕಾರ ಈಗ ತರಾತುರಿಯಲ್ಲಿ 20 ಸಾವಿರ ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಕರೆಯಲು ಹೊರಟಿದೆ. ಈಗ ಆಗಿರುವ ಕೆಲಸಗಳಿಗೆ ಸರ್ಕಾರ ಬಿಲ್ ನೀಡಿಲ್ಲ. ಆರ್ಥಿಕ ಶಿಸ್ತು ಪಾಲನೆ ಆಗದೇ ಆರ್ಥಿಕ ಇಲಾಖೆಯ ಜತೆ ಚರ್ಚೆ ಮಾಡದೇ ಯಾವುದೇ ಟೆಂಡರ್ ನೀಡಬಾರದು.

ಈಗ ಎಲ್ಲ ಕಾಮಗಾರಿಗಳ ಅಂದಾಜು ವೆಚ್ಚ ಡಬಲ್ ಮಾಡಿ ಸರ್ಕಾರ ಕಲೆಕ್ಷನ್​ಗೆ ಮುಂದಾಗಿದೆ. ನಾವು ಈ ಟೆಂಡರ್ ಪ್ರಕ್ರಿಯೆ ಪ್ರಶ್ನಿಸಿ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದು, ಈ ವಿಚಾರದಲ್ಲಿ ಗುತ್ತಿಗೆದಾರರು ಎಚ್ಚರವಾಗಿರಬೇಕು. ಯಾವ ಮೂಲ ಯೋಜನೆ ಪೂರ್ಣಗೊಂಡಿದೆ ಎಂದು ಹೇಳಿ 10 ಲಕ್ಷ ಕೋಟಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಸರ್ಕಾರಕ್ಕೆ ರಸ್ತೆ ಗುಂಡಿ ಮುಚ್ಚಲು ಸಾಧ್ಯವಾಗುತ್ತಿಲ್ಲ. ಈಗ ಯಾವ ಹಣವಿದೆ ಎಂದು ಟೆಂಡರ್ ಕರೆಯಲಾಗುತ್ತಿದೆ? ಈ ಹಿಂದೆ ಮಾಡಲಾಗಿರುವ ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡಲು ಆಗಿಲ್ಲ. ಇಂತಹ ಸಮಯದಲ್ಲಿ ಹೊಸ ಟೆಂಡರ್ ನೀಡುತ್ತಿರುವುದೇಕೆ? ಹೀಗೆ ಆರ್ಥಿಕ ಶಿಸ್ತು ಉಲ್ಲಂಘನೆ ಮಾಡಬಾರದು ಎಂದು ಪ್ರಧಾನಿಗಳಿಗೆ ಪತ್ರ ಬರೆಯುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ ಎಂದಿದ್ದಾರೆ.

ಓದಿ: ಕೆಂಪೇಗೌಡರ ಪ್ರತಿಮೆ ಅನಾವರಣದಲ್ಲೂ ಬಿಜೆಪಿ ರಾಜಕೀಯ ಗಿಮಿಕ್ ಮಾಡುತ್ತಿದೆ: ಸಿ ಎಂ ಇಬ್ರಾಹಿಂ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.