ETV Bharat / state

ಒಳಮೀಸಲಾತಿಗಾಗಿ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಿ: ಸಚಿವ ಕೆ.ಹೆಚ್.ಮುನಿಯಪ್ಪ ಕರೆ

author img

By ETV Bharat Karnataka Team

Published : Nov 7, 2023, 9:07 AM IST

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ತೀವ್ರ ಸ್ವರೂಪದ ಹೋರಾಟ ನಡೆಸಬೇಕಿದೆ. ಒಳ ಮೀಸಲಾತಿ ಸಂಬಂಧ ಆಯಾಯ ಕ್ಷೇತ್ರಗಳ ಶಾಸಕರ ಮನೆಗೆ ಮುತ್ತಿಗೆ ಹಾಕಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

lay-siege-to-the-houses-of-mlas-for-internal-reservation-says-minister-k-h-muniyappa
ಒಳಮೀಸಲಾತಿಗಾಗಿ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಿ, ತೀವ್ರ ಸ್ವರೂಪದ ಹೋರಾಟ ನಡೆಸಿ: ಸಚಿವ ಮುನಿಯಪ್ಪ

ಬೆಂಗಳೂರು: ಒಳ ಮೀಸಲಾತಿ ಕಲ್ಪಿಸುವ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕ್ಷೇತ್ರಗಳ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಕರೆ ನೀಡಿದರು. ಮುಂದಿನ ಅಧಿವೇಶನದಲ್ಲಿ ನ್ಯಾ.ಸದಾಶಿವ ಆಯೋಗ ಹಾಗೂ ಕಾಂತರಾಜ್ ಆಯೋಗದ ವರದಿ ಸ್ವೀಕರಿಸಬೇಕು ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಸೋಮವಾರ ಬೆಂಗಳೂರಿನ ಮಹಾರಾಣಿ ಕಾಲೇಜ್ ಸಮೀಪದ ಸ್ಕೌಟ್ ಆ್ಯಂಡ್ ಗೈಡ್ಸ್​ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾದಿಗ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಲಾಯಿತು.

ಈ ಸಭೆ ಉದ್ದೇಶಿಸಿ ಮಾತನಾಡಿದ ಕೆ.ಹೆಚ್.ಮುನಿಯಪ್ಪ, ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ತೀವ್ರ ಸ್ವರೂಪದ ಹೋರಾಟ ನಡೆಸಬೇಕಿದೆ. ನಿಮ್ಮ ಕ್ಷೇತ್ರಗಳ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಬೇಕು. ಅವರಿಗೆ ಕಾರ್ಯಕ್ರಮಗಳನ್ನು ಮಾಡಲು ಬಿಡಬಾರದು. ಸಚಿವನಾಗಿ ನಾನು ಈ ಮಾತು ಹೇಳುತ್ತಿದ್ದೇನೆ. ಹೀಗೆ ಹೇಳುವ ಸಂದರ್ಭ ಒದಗಿಬಂದಿದೆ ಎಂದು ಹೇಳಿದರು.

ಇದೇ ತಿಂಗಳ 20ರ ಒಳಗೆ ನಿಮ್ಮ ಕ್ಷೇತ್ರದ ಶಾಸಕರ ಮನೆಗೆ 100 ಜನ, ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ 1,000 ಜನ ತೆರಳಿ ಮನವಿ ಕೊಡಿ. ಡಿ. 4ರಿಂದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ಈ ಕೆಲಸ ಆಗಬೇಕು. ಆಗ ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ. ಯಾರ ಹಕ್ಕನ್ನೂ ನಾವು ಕಸಿದುಕೊಳ್ಳುವುದಿಲ್ಲ. ನಮ್ಮ ಹಕ್ಕನ್ನು ಯಾರಿಂದಲೂ ತಡೆಯಲೂ ಆಗುವುದಿಲ್ಲ ಎಂದು ಆಕ್ರೋಶಭರಿತ ಕರೆ ಕೊಟ್ಟರು.

ಕಾಂತರಾಜ್ ಆಯೋಗ ಸಿದ್ದಪಡಿಸಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಇಲ್ಲಿಯವರೆಗೂ ಈ ಎರಡು ವರದಿ ಅನುಷ್ಠಾನ ವಿಷಯದಲ್ಲಿ ಎಲ್ಲ ಸರ್ಕಾರಗಳು ನಿರ್ಲಕ್ಷ್ಯವಹಿಸಿವೆ. ಪ್ರಸ್ತುತ ನಮ್ಮ ಸರ್ಕಾರದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಹಾಗೂ ಕಾಂತರಾಜ್ ಆಯೋಗ ವರದಿ ಸ್ವೀಕರಿಸಲಾಗುವುದು ಎಂದರು. ನಿಗಮ-ಮಂಡಳಿ, ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರು, ವಿಶ್ವವಿದ್ಯಾಲಯಗಳಲ್ಲಿ ಕುಲಪತಿ, ಕುಲಸಚಿವರು, ಸಿಂಡಿಕೇಟ್ ಸದಸ್ಯರ ನೇಮಕಾತಿಯಲ್ಲಿ ಮಾದಿಗ ಸಮುದಾಯಕ್ಕೆ ಹೆಚ್ಚು ಪ್ರಾಧಾನ್ಯತೆಯನ್ನು ನೀಡುವಂತೆ ಒತ್ತಾಯಿಸಿದರು‌.

6ನೇ ಗ್ಯಾರಂಟಿಯಾಗಿ ಒಳಮೀಸಲಾತಿ ಕೊಡಲಿ: ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಹೆಚ್‌.ಆಂಜನೇಯ, ನಮಗೆ ಅನ್ಯಾಯ ಆಗಿದೆ. ನಾವೆಲ್ಲರೂ ಬೀದಿಗಿಳಿದು ಹೋರಾಟ ಮಾಡಬೇಕು. ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವ ಮೂಲಕ ಆರನೇ ಗ್ಯಾರಂಟಿಯಾಗಿ ನಮಗೆ ಒಳ ಮೀಸಲಾತಿ ಕೊಡಲಿ ಎಂದು ಆಗ್ರಹಿಸಿದರು.

ಕರ್ನಾಟಕ ಆದಿಜಾಂಭವ ಸಾಂಸ್ಕ್ರತಿಕ ಸಮಿತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ರಾಜ್ಯಸಭೆ ಸದಸ್ಯರಾದ ಎಲ್.ಹನುಮಂತಯ್ಯ, ಮಾಜಿ ಸಚಿವ ಹೆಚ್.ಆಂಜನೇಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಶಾಸಕ ಮಾಯಕೊಂಡದ ಕೆ.ಎಸ್.ಬಸವಂತಪ್ಪ, ಎಂಎಲ್ಸಿ ಡಾ.ತಿಮ್ಮಯ್ಯ, ಕೆಪಿಸಿಸಿ ಪರಿಶಿಷ್ಡ ಜಾತಿ ವಿಭಾಗದ ಅಧ್ಯಕ್ಷ ಧರ್ಮಸೇನ್, ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಸೇರಿದಂತೆ ಸಮುದಾಯದ ಅನೇಕ ಪ್ರಮುಖ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ: 2ಎ ಮೀಸಲಾತಿಗೆ ಒತ್ತಾಯಿಸಿ ನ. 10ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ಬಸವ ಜಯಮೃತ್ಯುಂಜಯ ಶ್ರೀ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.