ETV Bharat / state

Lokayuktha Raid: ಕೆಎಸ್​​ಡಿಎಲ್ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

author img

By

Published : Jun 19, 2023, 3:17 PM IST

Updated : Jun 19, 2023, 3:51 PM IST

ಕರ್ನಾಟಕ ಸಾಬೂನು ಹಾಗೂ ಮಾರ್ಜಕ‌ ನಿಗಮದ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

karnataka-soaps-and-detergents-limited-office-raid-by-lokayuktha-police
ಕೆಎಸ್​​ಡಿಲ್ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ಬೆಂಗಳೂರು : ಕರ್ನಾಟಕ ಸಾಬೂನು ಹಾಗೂ ಮಾರ್ಜಕ‌ ನಿಗಮದಲ್ಲಿ (ಕೆಎಸ್​ಡಿಎಲ್) ವ್ಯಾಪಕ‌ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು ಇಂದು ಲೋಕಾಯುಕ್ತ ಅಧಿಕಾರಿಗಳು ಸರ್ಚ್ ವಾರೆಂಟ್ ಪಡೆದು ತನಿಖೆ ನಡೆಸುತ್ತಿದ್ದಾರೆ. ನಿಗಮದ ಮಾಜಿ ಅಧ್ಯಕ್ಷ ಹಾಗೂ ಮಾಜಿ‌ ಶಾಸಕರಾಗಿರುವ ಮಾಡಾಳ್ ವಿರುಪಾಕ್ಷಪ್ಪ ಅವರ ಅವಧಿಯಲ್ಲಿ ಸಾಬೂನು ಹಾಗೂ ಮಾರ್ಜಕ ತಯಾರಿಸಲು ರಾಸಾಯನಿಕವನ್ನು ಆಮದು ಮಾಡಿಕೊಳ್ಳಲು ಕರೆಯಲಾಗಿದ್ದ ಟೆಂಡರ್​ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು.

ಶಿವಶಂಕರ್ ಸೇರಿದಂತೆ ಹಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯದಿಂದ ದಾಳಿಗೆ ಅನುಮತಿ ಪಡೆಯಲಾಗಿತ್ತು. ಓರ್ವ ಡಿವೈಎಸ್ಪಿ ಹಾಗೂ 10 ಮಂದಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಕೆಎಸ್​​ಡಿಎಲ್‌ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಮಾಡಾಳ್ ವಿರುಪಾಕ್ಷಪ್ಪ ಆಡಳಿತ ಅವಧಿಯಲ್ಲಿ ಟೆಂಡರ್‌ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದವು.‌ ಅಲ್ಲದೇ ಮಾಡಾಳ್ ಪುತ್ರ ಪ್ರಶಾಂತ್ ಮಾಡಾಳ್ ಕೂಡ ಟೆಂಡರ್ ನೀಡಲು ಗುತ್ತಿಗೆದಾರರಿಂದ ಲಕ್ಷಾಂತರ ರೂಪಾಯಿ ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ತನಿಖೆಯಲ್ಲಿ ತಂದೆ ಮಾಡಾಳ್ ವಿರುಪಾಕ್ಷಪ್ಪ ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಖಚಿತ ಮಾಹಿತಿ ಆಧರಿಸಿ ಕಳೆದ ಏಪ್ರಿಲ್‌ನಲ್ಲಿ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಟೆಂಡರ್, ಕಚ್ಚಾವಸ್ತು ಸೇರಿ ಹಲವು ವಸ್ತುಗಳು ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು ಗೊತ್ತಾಗಿತ್ತು.‌

ಇದನ್ನೂ ಓದಿ : ಮಾಡಾಳ್ ವಿರುಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಲು ಲೋಕಾಯಕ್ತ ಚಿಂತನೆ

ಪ್ರಕರಣದ ಹಿನ್ನೆಲೆ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್​ಡಿಎಲ್‌) ರಾಸಾಯನಿಕ ವಸ್ತುಗಳನ್ನು ಪೂರೈಸುವ ಟೆಂಡರ್ ನೀಡಲು ಆ ಸಂದರ್ಭದಲ್ಲಿ ಕೆಎಸ್​ಡಿಎಲ್‌ ಅಧ್ಯಕ್ಷರಾಗಿದ್ದ ಹಾಗೂ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮಾಡಾಳ್ ಟೆಂಡರ್ ಆಕಾಂಕ್ಷಿಯೊಬ್ಬರಿಂದ 80 ಲಕ್ಷ ರೂ ಹಣಕ್ಕೆ ಬೇಡಿಕೆಯಿಟ್ಟು 40 ಲಕ್ಷ ರೂ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಪ್ರಕರಣದಲ್ಲಿ ಮಾಡಾಳ್​ ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದರು. ಸದ್ಯ ಲಂಚ ಪ್ರಕರಣದಲ್ಲಿ ಜಾಮೀನಿನ ಮೇರೆಗೆ ಹೊರಗಿದ್ದಾರೆ.

ಎಫ್ಎಸ್ಎಲ್ ವರದಿ ಬಳಿಕ ಚಾರ್ಜ್‌ಶೀಟ್: ಈಗಾಗಲೇ ಲಂಚ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ. ವಾಯ್ಸ್ ಸ್ಯಾಂಪಲ್, ಹ್ಯಾಂಡ್ ರೈಟಿಂಗ್ ಕುರಿತಂತೆ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದ ಬಳಿಕ ಇನ್ನೊಂದು ತಿಂಗಳ ಒಳಗಾಗಿ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆ. ವಿರುಪಾಕ್ಷಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಲಂಚ ಸ್ವೀಕಾರ ಪ್ರಕರಣ: ಮಾಡಾಳ್ ಪ್ರಶಾಂತ್​ಗೆ ಷರತ್ತುಬದ್ಧ ಜಾಮೀನು

Last Updated :Jun 19, 2023, 3:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.