ETV Bharat / state

Independence Day: ಅದ್ಧೂರಿ ಸ್ವಾತಂತ್ರ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು

author img

By

Published : Aug 13, 2023, 4:07 PM IST

Independence Day: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯಲಿರುವ ಪಂಥಸಂಚಲನದಲ್ಲಿ ಭಾಗವಹಿಸುವವರು ಪರ್ಸ್ ಮತ್ತು ಮೊಬೈಲ್ ಹೊರತುಪಡಿಸಿ ಬೇರಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರುವುದನ್ನು ನಿಷೇಧಿಸಲಾಗಿದೆ.

manik-shah-parade-ground-is-ready-for-independence-day-says-tushar-girinath
ಅದ್ಧೂರಿ ಸ್ವಾತಂತ್ರ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು:ತುಷಾರ್ ಗಿರಿನಾಥ್

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಆಗಸ್ಟ್ 15ರಂದು ಬೆಳಗ್ಗೆ 8:58ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, 9:00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡುವರು. ನಂತರ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ. ಪಂಥಸಂಚಲನದಲ್ಲಿ ಕೆಎಸ್​ಆರ್​ಪಿ, ಸಿಆರ್​ಪಿಎಫ್, ಬಿಎಸ್​ಎಫ್, ಸಿಎಆರ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್​ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡ ಕವಾಯತು ಸೇರಿ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

manik-shah-parade-ground-is-ready-for-independence-day-says-tushar-girinath
ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ

ಪದ ದೇವರಾಜ್ ತಂಡದಿಂದ ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯದ ಜೆ.ಪಿ.ನಗರದ ಕರ್ನಾಟಕ ಪಬ್ಲಿಕ್ ಶಾಲೆಯ 750 ಮಕ್ಕಳು 'ವೀರ ನಮನ' ನೃತ್ಯ ಪ್ರದರ್ಶಿಸಲಿದ್ದಾರೆ. ಬೆಂಗಳೂರು ಉತ್ತರ ವಲಯದ ಹಾರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳಿಂದ 'ವೀರ ಭೂಮಿ ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ' ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ಮಕ್ಕಳಿಂದ 'ರೋಪ್ ಸ್ಕಿಪಿಂಗ್' ಕಾರ್ಯಕ್ರಮಗಳನ್ನು ನಡೆಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಎಂಇಜಿ ಸೆಂಟರ್ ತಂಡದವರು 'ಕಲಾರಿಪಯಟ್ಟು', ಎಎಸ್​ಸಿ ತಂಡದವರಿಂದ 'ಟೆಂಟ್ ಪೆಗ್ಗಿಂಗ್' ಹಾಗೂ ಎಎಸ್​ಸಿ ತಂಡ ಇವರಿಂದ 'ಮೊಟರ್ ಸೈಕಲ್' ಸಾಹಸ ಪ್ರದರ್ಶನ ಮಾಡಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕಿಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದರು.

ಬೆಂಗಳೂರು ನಗರದ ಪೊಲೀಸ್ ಆಯುಕ್ತ ಬಿ. ದಯಾನಂದ್​ ಮಾತನಾಡಿ, "ಸ್ವಾತಂತ್ರ್ಯ ದಿನಾಚರಣೆಗಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಬೆಂಗಳೂರು ನಗರದ ಎಲ್ಲ ವಿಭಾಗಗಳಿಂದ 9 ಡಿಸಿಪಿ, 15 ಎಸಿಪಿ, 43 ಪಿಐ, 110 ಪಿಎಸ್​ಐ/ ಮಹಿಳಾ ಪಿಎಸ್​ಐ, 72 ಎಎಸ್​ಐ, 554 ಹೆಷ್​ಸಿ/ಪಿಸಿ ಮತ್ತು 70 ಮಹಿಳಾ ಸಿಬ್ಬಂದಿಗಳೊಂದಿಗೆ 157 ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು 56 ಕ್ಯಾಮರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮೈದಾನದ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆಎಸ್​ಆರ್​ಪಿ, ಸಿಎಆರ್ ತುಕಡಿಗಳು, 2 ಅಗ್ನಿಶಾಮಕ ವಾಹನಗಳು, 2 ಆಂಬುಲೆನ್ಸ್, 4 ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ (ಕ್ಯೂಆರ್​ಟಿ), 1 ಡಿ ಸ್ವಾಟ್, 1 ಆರ್​ಐವಿಗಳನ್ನು ಭದ್ರತ ವ್ಯವಸ್ಥೆ. ಒಂದು ಗರುಡ ಫೋರ್ಸ್ ಕಾಯ್ದಿರಿಸಲಾಗಿದೆ.

manik-shah-parade-ground-is-ready-for-independence-day-says-tushar-girinath
ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ

ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮರಾ ವ್ಯವಸ್ಥೆ ಹಾಗೂ 3 ಬ್ಯಾಗೇಜ್ ಸ್ಕ್ಯಾನರ್, 20 ಡಿಎಫ್ಎಂಡಿ ಮತ್ತು 40 ಹೆಚ್ ಹೆಚ್​ಎಂಡಿ ಗಳನ್ನು ಅಳವಡಿಸಲಾಗಿದೆ. ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರೂ ಪಾಸು ಮತ್ತು ಗುರುತಿನ ಚೀಟಿ ಹೊಂದಿರಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತಾ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ.ದಯಾನಂದ್​, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಆರ್. ಶ್ರೀನಿವಾಸ್ ಗೌಡ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಹಾಗೂ ಇತರೆ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: Independence day: ಸ್ವಾತಂತ್ರ್ಯೋತ್ಸವದಂದು ಮಾಣಿಕ್ ಷಾ ಮೈದಾನದಲ್ಲಿ ಕವಾಯತು: ಬೆಂಗಳೂರಿನ ಸಂಚಾರ ಮಾರ್ಗಗಳಲ್ಲಿ ಬದಲಾವಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.