ETV Bharat / state

ಯತ್ನಾಳ್ ಆರೋಪದ ಸತ್ಯಾಂಶಕ್ಕೆ ಬಿಜೆಪಿ ಬೆದರಿದೆ: ಎಂ.ಬಿ.ಪಾಟೀಲ್

author img

By ETV Bharat Karnataka Team

Published : Dec 29, 2023, 10:15 PM IST

MB Patil
ಎಂ.ಬಿ. ಪಾಟೀಲ್

ಬಸನಗೌಡ ಪಾಟೀಲ‌ ಯತ್ನಾಳ್ ಅವರು ಬಿಜೆಪಿ ವಿರುದ್ಧ ನೀಡುವ ಹೇಳಿಕೆಗಳಲ್ಲಿ ಸತ್ಯಾಂಶವಿರಬಹುದು. ಇದರಿಂದಾಗಿಯೇ ಬಿಜೆಪಿ ಅವರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ.

ಎಂ.ಬಿ. ಪಾಟೀಲ್ ಹೇಳಿಕೆ

ಬೆಂಗಳೂರು: ಬಿಜೆಪಿಯ ಬಸನಗೌಡ ಪಾಟೀಲ‌ ಯತ್ನಾಳ್​ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದರು.

ಯತ್ನಾಳ್​ ಕಾಂಗ್ರೆಸ್​ ಏಜೆಂಟ್​ ಎಂದು ಬಿಜೆಪಿ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಯತ್ನಾಳ್ ಐದು ವರ್ಷಗಳಿಂದಲೂ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಆದರೆ, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ದುರ್ಬಲವಾಗಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಅವರ ಮೇಲೆ ಕ್ರಮ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ ಎಂದರು.

ಯತ್ನಾಳ್​ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್​​ ಏಜೆಂಟ್​ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ, ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್​​​ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು. ಬಿಜೆಪಿ ಸರ್ಕಾರವಿದ್ದಾಗ ಕೊರೊನಾ ಸಂದರ್ಭದಲ್ಲಿ ನಡೆದ ಖರೀದಿ ಮತ್ತಿತರ ವ್ಯವಹಾರಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಿ ವಾಸ್ತವವನ್ನು ಜನರ ಮುಂದಿಡುವ ಕೆಲಸ ಮಾಡುತ್ತದೆ. ಯಾರಿಂದಲಾದರೂ ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಅಂಗಡಿ-ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ಕನ್ನಡ ನಾಮಫಲಕ ಬಳಸಬೇಕೆಂದು ಕ.ರ.ವೇ. ಕಾರ್ಯಕರ್ತರು ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ನಿಯಮದ ಪ್ರಕಾರ ಕನ್ನಡ ಬಳಸಬೇಕು ಎಂಬುದರಲ್ಲಿ ಎರಡು ಮಾತೇ ಇಲ್ಲ. ಆದರೆ, ಯಾರೂ ಏಕಾಏಕಿ ಕಾನೂನನ್ನು ತಮ್ಮ ಕೈಗೆ ಎತ್ತಿಕೊಳ್ಳಬಾರದು ಎಂದರು. ಮೊದಲಿಗೆ, ಕನ್ನಡ ನಾಮಫಲಕಗಳನ್ನು ಹಾಕಲು ಒಂದು ಗಡುವು ನಿಗದಿಪಡಿಸುವ ನಿರ್ಧಾರ ಆಗಲಿ. ಅದಾದ ಮೇಲೆ ನಿಯಮ ಪಾಲಿಸದವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

ಉದ್ಯಮಗಳ ಸ್ಥಾಪನೆಗೆ ಭಾರತದ ರಾಜ್ಯಗಳೂ ಸೇರಿದಂತೆ ಜಗತ್ತಿನೆಲ್ಲೆಡೆ ಪೈಪೋಟಿ ಇದೆ. ಉದ್ಯಮಿಗಳಿಗೆ ಯಾವುದೇ ರಾಜ್ಯವೂ ಅನಿವಾರ್ಯವಲ್ಲ. ಇಂತಹ ಘಟನೆಗಳು ನಡೆದಾಗ ಅವು ಎಲ್ಲಾ ಕಡೆ ವೈರಲ್ ಆಗಿ ನಮ್ಮಲ್ಲಿ ಬಂಡವಾಳ ಹೂಡಲು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಕನ್ನಡಪರ ಹೋರಾಟಗಾರರು ಇದರ ಬಗ್ಗೆಯೂ ಗಮನಹರಿಸಬೇಕು ಎಂದರು.

ನಮ್ಮ ಇಲಾಖೆಗೆ ಒಳಪಟ್ಟ ವ್ಯಾಪ್ತಿಯಲ್ಲಿ ಕೈಗಾರಿಕೆಗಳಲ್ಲಿ ಕನ್ನಡ ಬಳಕೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಸಲಹಾಸೂಚಿ (ಅಡ್ವೈಸರಿ) ಹೊರಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಮೂವರು ಡಿಸಿಎಂಗಳನ್ನು ಮಾಡುವ ಸಾಧ್ಯತೆ ಬಗ್ಗೆ ಕೇಳಿದಾಗ, ಇದರ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ನಾಯಕರ ಮುಂದೆ ನಮ್ಮ ಅಭಿಪ್ರಾಯ ಹೇಳುತ್ತೇವೆ. ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಅಗತ್ಯವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ: ಪ್ರಹ್ಲಾದ್ ಜೋಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.