ರಾಜ್ಯದಲ್ಲಿ 47 ಸಾವಿರ ಶಿಕ್ಷಕರ ಹುದ್ದೆ ಖಾಲಿ, 15 ಸಾವಿರ ಶಿಕ್ಷಕರ ನೇಮಕ: ಸಚಿವ ನಾಗೇಶ್

author img

By

Published : Sep 15, 2022, 4:41 PM IST

minister-nagesh-talks-on-teachers-recruitment

ಸರ್ಕಾರಿ ಪ್ರೌಢಶಾಲೆಗಳ ವಿವಿಧ ವೃಂದಗಳ 2,500 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ಆರ್ಥಿಕ ಸಂಪನ್ಮೂಲಗಳನ್ನು ಆಧರಿಸಿ ಖಾಲಿ ಇರುವ ಮತ್ತು ಖಾಲಿಯಾಗುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಬೆಂಗಳೂರು: ರಾಜ್ಯದಲ್ಲಿ 47 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅದರಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 27 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. 1:2 ಅಭ್ಯರ್ಥಿಗಳ ಪರಿಶೀಲನೆ 15 ದಿನಗಳಲ್ಲಿ ನಡೆಯಲಿದೆ. ಆನಂತರ ಪ್ರಾಥಮಿಕ ಶಾಲೆಗಳ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರನ್ನು ಖಾಲಿ ಇರುವ ಶಾಲೆಗಳಿಗೆ ನಿಯೋಜಸಲಾಗುವುದು ಎಂದು ಹೇಳಿದರು.

ಸರ್ಕಾರಿ ಪ್ರೌಢಶಾಲೆಗಳ ವಿವಿಧ ವೃಂದಗಳ 2,500 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ಆರ್ಥಿಕ ಸಂಪನ್ಮೂಲಗಳನ್ನು ಆಧರಿಸಿ ಖಾಲಿ ಇರುವ ಮತ್ತು ಖಾಲಿಯಾಗುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ ವಿವೇಕ ಯೋಜನೆಯಡಿ 990 ಕೋಟಿ ರೂ. ವೆಚ್ಚದಲ್ಲಿ 6,601 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಐಹೊಳೆ ಡಿ.ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳಗಾವಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಿಗೆ 533 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ ಎಂದು ಹೇಳಿದರು.

ಎರಡು ಶೈಕ್ಷಣಿಕ ಜಿಲ್ಲೆಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗ ದುರಸ್ತಿಗಾಗಿ 540 ಲಕ್ಷ ಅನುದಾನ ಒದಗಿಸಲಾಗಿದೆ. ಹಂತ ಹಂತವಾಗಿ ರಾಜ್ಯಾದ್ಯಂತ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಶತಮಾನದ ಶಾಲೆಯ ಎರಡು ಕೊಠಡಿಗಳು ಮಳೆಯಿಂದ ಹಾನಿಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು, ಆ ಕೊಠಡಿಗಳನ್ನು ದುರಸ್ತಿ ಮಾಡಿಕೊಡುವ ಭರವಸೆ ನೀಡಿದರು.

ಶಾಲಾ ಕೊಠಡಿ ನಿರ್ಮಾಣ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ 8,100 ಹೊಸ ಶಾಲಾ - ಕಾಲೇಜುಗಳ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಅವರು, ಶಾಸಕ ವೈ.ರಾಮಪ್ಪ ಅವರ ಪ್ರಶ್ನೆಗೆ ಉತ್ತರಿಸಿದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಶಾಲಾ ಕೊಠಡಿಗಳು ಕುಸಿದು ಬಿದ್ದಿವೆ. ಹೀಗಾಗಿ 8,100 ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಆಯಾ ಸರ್ಕಾರಗಳು ಅಗತ್ಯಕ್ಕೆ ತಕ್ಕಂತೆ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದರೆ ಈ ಸಮಸ್ಯೆ ಉಂಟಾಗುತ್ತಿರಲಿಲ್ಲ. ಮಾಜಿ ಸಿಎಂ ಯಡಿಯೂರಪ್ಪನವರು ಕೊರೊನಾದಂತಹ ಕಾಲದಲ್ಲೂ 9,199 ಕೊಠಡಿಗಳನ್ನು ನಿರ್ಮಿಸಲು ಅನುಮತಿ ಕೊಟ್ಟಿದ್ದರು. ಹಿಂದಿನ ಸಮ್ಮಿಶ್ರ ಸರ್ಕಾರವು 3,125 ಕೊಠಡಿಗಳನ್ನು 2013-18ರವರೆಗೆ 4684 ಹಾಗೂ 2008-13ರವರೆಗೆ 9,715 ಕೊಠಡಿಗಳನ್ನು ನಿರ್ಮಿಸಲಾಗಿತ್ತು ಎಂದು ತಿಳಿಸಿದರು.

ಇದನ್ನೂ ಓದಿ: ಮುಂದಿನ ವರ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ: ಸಿ ಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.