ETV Bharat / state

ಕನ್ನಡ ಶಿಕ್ಷಕರನ್ನು ನೇಮಿಸುವ ಕೇರಳ ಹೈಕೋರ್ಟ್‌ ಆದೇಶ ಸಂತಸ ತಂದಿದೆ: ಸಚಿವ ಶಿವರಾಜ ತಂಗಡಗಿ

author img

By ETV Bharat Karnataka Team

Published : Aug 25, 2023, 7:50 PM IST

minister-shivraj-thandagi-reaction-on-kerala-high-court-order-over-recruiting-kannada-teacher
ಕನ್ನಡ ಶಿಕ್ಷಕರನ್ನು ನೇಮಿಸುವ ಕೇರಳ ಹೈಕೋರ್ಟ್‌ ಆದೇಶ ಸಂತಸ ತಂದಿದೆ: ಸಚಿವ ಶಿವರಾಜ ತಂಗಡಗಿ

ಕೇರಳ ಸರ್ಕಾರಕ್ಕೆ ಕನ್ನಡ ಶಿಕ್ಷಕರನ್ನು ನೇಮಿಸುವಂತೆ ಅಲ್ಲಿನ ಹೈಕೋರ್ಟ್‌ ನಿರ್ದೇಶನ ನೀಡಿರುವುದು ಮಾತೃಭಾಷಾ ಶಿಕ್ಷಣದ ವಾದಕ್ಕೆ ಕಾನೂನು ಮಾನ್ಯತೆ ದೊರೆತಂತಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: "ಗಡಿನಾಡು ಕಾಸರಗೋಡು ಜಿಲ್ಲೆಯ ಅಡೂರು ಕನ್ನಡ ಶಾಲೆಗೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರ್ಕಾರಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿರುವುದು ಅತ್ಯಂತ ಸಂತೋಷ ತಂದಿದೆ" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಇದರ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನಸಾಮಾನ್ಯರ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಅಡೂರು ಶಾಲೆಗೆ ಮಲಯಾಳ ಶಿಕ್ಷಕಿ ನೇಮಕದಿಂದಾಗಿ ಕಳೆದ ವರ್ಷ ಉದುಮ ಮತ್ತು ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೆ ಮಲಯಾಳ ಭಾಷೆ ಮಾತ್ರ ತಿಳಿದಿರುವ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ಉದುಮ ಪ್ರೌಢಶಾಲೆಗೆ ಕೂಡ ಇದೇ ರೀತಿ ಶಿಕ್ಷಕಿ ನೇಮಕಗೊಂಡಿದ್ದರು. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸೇರಿದಂತೆ ಗಡಿನಾಡಿನ ಕನ್ನಡ ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್‌ ತೀರ್ಪು ನೀಡಿರುವುದರಿಂದ ಗಡಿನಾಡ ಕನ್ನಡಿಗರ ಹೋರಾಟಕ್ಕೆ ಜಯ ಸಿಕ್ಕಿದೆ.

"ಕಾಸರಗೋಡಿನ ಕನ್ನಡಿಗರ ಹೋರಾಟಕ್ಕೆ ಕೇರಳ ಹೈಕೋರ್ಟ್‌ನಲ್ಲಿ ಮಹತ್ವದ ಜಯ ಲಭಿಸಿದ್ದು ಸಮಸ್ತ ಕನ್ನಡಿಗರಿಗೆ ಸಂತೋಷ ತಂದಿದೆ. ಮಲಯಾಳಂ ಭಾಷಿಕ ಶಿಕ್ಷಕಿಗೆ ಕನ್ನಡದಲ್ಲಿ ವ್ಯವಹರಿಸಲು ತಿಳಿಯದು ಎಂಬುದನ್ನು ಅರ್ಥೈಸಿಕೊಂಡಿರುವ ನ್ಯಾಯಾಲಯ, ಕೂಡಲೇ ಆ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾಯಿಸಿ ತಕ್ಷಣವೇ ಅವರ ಸ್ಥಾನಕ್ಕೆ ಕನ್ನಡ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವುದು ಮಾತೃ ಭಾಷಾ ಶಿಕ್ಷಣದ ವಾದಕ್ಕೆ ಕಾನೂನು ಮಾನ್ಯತೆ ದೊರೆತಂತಾಗಿದೆ" ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಕ್ರೀಡಾ ದಿನ: ಆ.29ರಂದು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಆಟೋಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.