ETV Bharat / state

ಪಿಎಂ ಆವಾಸ್‌ ಸೂರು: 'ಫಲಾನುಭವಿ ₹1 ಲಕ್ಷ ಕಟ್ಟಿದರೆ ಸಾಕು ಉಳಿದಿದ್ದು ಸರ್ಕಾರ ಭರಿಸಲಿದೆ'- ಸಚಿವ ಜಮೀರ್

author img

By ETV Bharat Karnataka Team

Published : Dec 21, 2023, 10:49 PM IST

ಸಚಿವ ಜಮೀರ್ ಅಹ್ಮದ್ ಖಾನ್
ಸಚಿವ ಜಮೀರ್ ಅಹ್ಮದ್ ಖಾನ್

ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಫಲಾನುಭವಿಗಳ 3.5 ಲಕ್ಷ ರೂ. ಅನ್ನು ರಾಜ್ಯ ಸರ್ಕಾರವೇ ಭರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ (ನಗರ) ಸರ್ವರಿಗೂ ಸೂರು ಅಭಿಯಾನದ ಮೂಲಕ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿರುವ 1.80 ಲಕ್ಷ ಮನೆಗಳಿಗೆ ಫಲಾನುಭವಿಗಳು ಪಾವತಿಸಬೇಕಿದ್ದ 4.5 ಲಕ್ಷ ರೂ.ಗಳಲ್ಲಿ ಕೇವಲ ಒಂದು ಲಕ್ಷ ರೂ. ಭರಿಸಿದರೆ ಸಾಕು ಉಳಿದ 3.5 ಲಕ್ಷ ರು.ಗಳನ್ನು ರಾಜ್ಯ ಸರ್ಕಾರವೇ ಭರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌, ಈ ಯೋಜನೆಯಡಿ ಮೊದಲ ಹಂತದಲ್ಲಿ 48,796 ಮನೆಗಳನ್ನು ಪೂರ್ಣಗೊಳಿಸಲು 500 ಕೋಟಿ ರೂ. ಬಿಡುಗಡೆ ಮಾಡಲು ಇಂದಿನ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಉಳಿದ 1.30 ಸಾವಿರ ಮನೆಗಳನ್ನು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಪೂರ್ಣಗೊಳಿಸಲು ಸಂಪುಟ ಸಭೆ ಸಮ್ಮತಿ ನೀಡಿದೆ ಎಂದರು.

ಯೋಜನೆಯಡಿ 2018ರಿಂದ 2023ರವರೆಗೆ ರಾಜ್ಯಕ್ಕೆ 1,80,253 ಮನೆಗಳು ಮಂಜೂರಾಗಿದ್ದರೂ ಫಲಾನುಭವಿಗಳಿಗೆ ನಿಗದಿಪಡಿಸಿದ್ದ 4.5 ಲಕ್ಷ ರೂ. ಹಣವನ್ನು ಪಾವತಿಸಲು ಬಹುತೇಕರಿಗೆ ಸಾಧ್ಯವಾಗದೆ ಪೂರ್ಣಗೊಳಿಸಲಾಗಿರಲಿಲ್ಲ. ಈ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಲು ಕೊಳಗೇರಿಗಳಲ್ಲಿನ ಶೆಡ್‌, ಗುಡಿಸಲುಗಳನ್ನು ತೆರವುಗೊಳಿಸಲಾಗಿದೆ. ಅಲ್ಲಿನ ನಿವಾಸಿಗಳು ಮನೆಗಳಿಲ್ಲದೆ ತೊಂದರೆಯಲ್ಲಿದ್ದಾರೆ. ಹಾಗಾಗಿ ಸರ್ವರಿಗೂ ಸೂರು ಕಲ್ಪಿಸುವ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಪ್ರತಿ ಮನೆಗೆ ಅರ್ಜಿದಾರರು 4.5 ಲಕ್ಷ ರೂ. ಬದಲಿಗೆ ಒಂದು ಲಕ್ಷ ರೂ. ಪಾವತಿಸಿದರೆ ಸಾಕು ಎಂದು ಜಮೀರ್​ ತಿಳಿಸಿದರು.

ಈ ಯೋಜನೆಗೆ ಒಟ್ಟು 6,170 ಕೋಟಿ ರೂ. ಬೇಕಾಗಲಿದೆ. ಪ್ರತಿ ಮನೆ ನಿರ್ಮಾಣಕ್ಕೆ 7.5 ಲಕ್ಷ ರೂ. ವೆಚ್ಚವಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದವರಿಗೆ 1.20, ಎಸ್​ಸಿ, ಎಸ್​ಟಿಗಳಿಗೆ 2 ಲಕ್ಷ ರೂ. ಸಹಾಯಧನ ಹಾಗೂ ಕೇಂದ್ರ ಸರ್ಕಾರದಿಂದ ಉಳಿದ ಸಹಾಯಧನ ಸೇರಿ ಒಟ್ಟು 3 ಲಕ್ಷ ರೂ. ಭರಿಸುವುದು. ಉಳಿದ 4.5 ಲಕ್ಷ ರೂ. ಹಣವನ್ನು ಫಲಾನುಭವಿಗಳು ಭರಿಸಬೇಕೆಂಬ ನಿಯಮ ಇತ್ತು. ಆದರೆ, ಈ ಹಣವನ್ನು ಬಹುತೇಕ ಅರ್ಜಿದಾರರು ಭರಿಸಲಾಗಿಲ್ಲ. ಹಾಗಾಗಿ ಇದೀಗ ಸರ್ಕಾರ ಫಲಾನುಭವಿ ತಲಾ ಕೇವಲ 1 ಲಕ್ಷ ರೂ. ಪಾವತಿಸಿದರೆ ಸಾಕು ಎಂದು ತೀರ್ಮಾನಿಸಲಾಗಿದೆ. ಇದರಿಂದ ಫಲಾನುಭವಿಗಳಿಂದ 480 ಕೋಟಿ ರೂ. ಬರಲಿದೆ. ಉಳಿದ 4932 ಕೋಟಿ ರೂ.ಗಳನ್ನು ಸರ್ಕಾರವೇ ಬರಿಸಲಿದೆ ಎಂದು ಜಮೀರ್​ ಮಾಹಿತಿ ನೀಡಿದರು.

ಇದನ್ನೂ ಓದಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ ಮಾಡಿದ ಸಚಿವ ಜಮೀರ್ ಅಹ್ಮದ್:​ ಅನುದಾನ ಬಿಡುಗಡೆಗೆ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.