ETV Bharat / state

ಕರ್ನಾಟಕದ ಸಾರ್ವಕಾಲಿಕ 'ಮುಖ್ಯಮಂತ್ರಿ' ಈಗ ಆಮ್​ ಆದ್ಮಿ.. AAP​ ಸೇರ್ಪಡೆಯಾದ ಹಿರಿಯ ನಟ ಚಂದ್ರು

author img

By

Published : Jun 7, 2022, 1:41 PM IST

Mukhyamantri chandru Joins AAP in Bengaluru
Mukhyamantri chandru Joins AAP in Bengaluru

ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನಟ ಮುಖ್ಯಮಂತ್ರಿ ಚಂದ್ರು ಇಂದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಟ್ವಿಟರ್​ನಲ್ಲಿ ಎಎಪಿ ಮಾಹಿತಿ ಹಂಚಿಕೊಂಡಿದೆ.

ಬೆಂಗಳೂರು: ರಾಜ್ಯಸಭೆ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಹಿರಿಯ ಚಿತ್ರನಟ, ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ಇಂದು 'ಆಮ್ ಆದ್ಮಿ' ಪಕ್ಷ ಸೇರ್ಪಡೆಯಾಗಿದ್ದಾರೆ. ಖಾಸಗಿ ಹೋಟೆಲ್​​​ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಪ್​​ನ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರಿದ್ದಾರೆ.

ಮುಖ್ಯಮಂತ್ರಿ ಚಂದ್ರು ಆಮ್​ ಆದ್ಮಿ ಪಕ್ಷ ಸೇರ್ಪಡೆಯಾಗಿರುವುದಕ್ಕೆ ಸಂಬಂಧಿಸಿದಂತೆ ಎಎಪಿ ಬೆಂಗಳೂರು ಘಟಕ ಟ್ವೀಟ್​ ಮಾಡಿದ್ದು, ಕರ್ನಾಟಕದ ಸಾರ್ವಕಾಲಿಕ ಮುಖ್ಯಮಂತ್ರಿ ಈಗ ಆಮ್​​ ಆದ್ಮಿ ಆಗಿದ್ದಾರೆ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ! ಎಂದು ಆಪ್​ ಬರೆದುಕೊಂಡಿದೆ. ಪಕ್ಷ ಸೇರ್ಪಡೆ ವೇಳೆ ಎಎಪಿ ಪಕ್ಷದ ಸಿದ್ಧಾಂತಗಳನ್ನ ಮೆಚ್ಚಿ ತಾವು ಸೇರ್ಪಡೆಯಾಗುತ್ತಿರುವುದಾಗಿ ಚಂದ್ರು ತಿಳಿಸಿದ್ದಾರೆ. ಈ ವೇಳೆ ಮಾಜಿ ಐಪಿಎಸ್ ಅಧಿಕಾರಿ, ಆಪ್ ಮುಖಂಡ ಭಾಸ್ಕರ್ ರಾವ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಮುಖ್ಯಮಂತ್ರಿ ಚಂದ್ರು ಅವರನ್ನು ಆಪ್​​ನ ಪೃಥ್ವಿ ರೆಡ್ಡಿ ಮತ್ತು ಇತರ ಪ್ರಮುಖರು ಭೇಟಿ ಮಾಡಿ ಪಕ್ಷ ಸೇರಲು ಮನವೊಲಿಸಿದ್ದರು. ಇದಕ್ಕೆ ಸ್ಪಂದಿಸಿ ಪಕ್ಷ ಸೇರುವ ಭರವಸೆ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಲ್ಲಿ ಆಟೋ ಓಡಿಸುತ್ತಲೇ ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಕುಮ್ಮಕ್ಕು..​ ಹಿಜ್ಬುಲ್​ ಉಗ್ರನ 'ಸ್ಫೋಟಕ' ಮಾಹಿತಿ ಬಹಿರಂಗ​

‌‌ಈ ಹಿಂದೆ ಬಿಜೆಪಿಯಲ್ಲಿ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಮುಖ್ಯಮಂತ್ರಿ ಚಂದ್ರು, 2008ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿದ್ದರು. ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಪಕ್ಷ ಆಡಳಿತದ ಚುಕ್ಕಾಣಿ ಹಿಡಿದಾಗ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮಾತನಾಡಿ ಕಾಂಗ್ರೆಸ್ ಪಕ್ಷ ಸೇರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಒಂದು ವರ್ಷದ ಅವಧಿಗೆ ಮುಂದುವರೆದಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಸ್ಥಾನಮಾನದ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರು ಅವರು ರಾಜ್ಯಸಭೆ ಅಥವಾ ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಂತಿಮವಾಗಿ ರಾಜ್ಯಸಭೆ ಮತ್ತು ವಿಧಾನ ಪರಿಷತ್​​ನಲ್ಲಿ ಟಿಕೆಟ್ ನೀಡದಿರುವುದಕ್ಕೆ ಬೇಸತ್ತು ಪಕ್ಷಕ್ಕೆ ಗುಡ್ ಬೈ ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.