ETV Bharat / state

ಮೈಸೂರು ವಿವಿ ಅತಿಥಿ ಉಪನ್ಯಾಸಕರಿಗೆ ಗೌರವಧನ ಪ್ರಕರಣ: ನ್ಯಾಯಾಂಗ ನಿಂದನೆ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

author img

By

Published : Mar 1, 2023, 8:07 PM IST

ಮೈಸೂರು ವಿವಿಯ ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಾಗೂ ವಿವಿಯ ಮೇಲಿನ ನ್ಯಾಯಾಂಗ ನಿಂದನೆ ಪ್ರಕಿಯೆಯನ್ನು ಹೈಕೋರ್ಟ್​ ಕೈಬಿಟ್ಟಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯ ಹಾಗೂ ಅದರ ಸಂಯೋಜಿತ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಯುಜಿಸಿ ಮಾರ್ಗಸೂಚಿಗಳ ಅನ್ವಯ ಗೌರವಧನ ಪಾವತಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯದ ಮೇಲಿನ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಹೈಕೋರ್ಟ್ ಕೈಬಿಟ್ಟಿದೆ. ಡಾ ಎಸ್ ಶ್ವೇತಾ ಸೇರಿದಂತೆ ಮೈಸೂರು ವಿಶ್ವವಿದ್ಯಾಲಯ, ಮಹಾರಾಜ ಮತ್ತು ಯುವರಾಜ ಕಾಲೇಜಿನ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 10 ಮಂದಿ ಅತಿಥಿ ಉಪನ್ಯಾಸಕರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಕಿಣಗಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) 2019ರ ಜನವರಿ 28 ರಂದು ಪ್ರಕಟಿಸಿದ ಮಾರ್ಗಸೂಚಿಗಳ ಅನುಸಾರ ಅರ್ಜಿದಾರರಿಗೆ ಗೌರವಧನ ಪಾವತಿಸುವ ವಿಚಾರವನ್ನು ಮೈಸೂರು ವಿಶ್ವವಿದ್ಯಾಲಯವು ಮೂರು ವಾರದಲ್ಲಿ ಪರಿಗಣಿಸಬೇಕು. ಈ ವೇಳೆ ಯುಜಿಸಿ ಮಾರ್ಗಸೂಚಿಗಳ ಬಗ್ಗೆ ಗಮನ ಹರಿಸಬೇಕು. ಒಂದೊಮ್ಮೆ ಗೌರವಧನ ಪಡೆಯಲು ಅರ್ಜಿದಾರರು ಅರ್ಹರಾಗಿದ್ದಾರೆ ಎಂಬ ತೀರ್ಮಾನಕ್ಕೆ ಬಂದಲ್ಲಿ, ಕೂಡಲೇ ಗೌರವಧನ ಪಾವತಿಗೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಏಕ ಸದಸ್ಯಪೀಠ 2022ರ ಸೆಪ್ಟೆಂಬರ್​​ 28ರಂದು ಮಧ್ಯಂತರ ಆದೇಶ ಹೊರಡಿಸಿತ್ತು ಎಂದು ವಿಭಾಗೀಯ ಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಜನವಸತಿ ಇಲ್ಲದ ಗ್ರಾಮಗಳ ಪಟ್ಟಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನ್ಯಾಯಾಂಗ ನಿಂದನೆ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್​: ಅಲ್ಲದೇ, ಗೌರವಧನ ಪಾವತಿ ವಿಚಾರವನ್ನು ವಿಶ್ವವಿದ್ಯಾಲಯವು ಪರಿಗಣಿಸಿದ್ದು, ಅರ್ಜಿದಾರರು ಯುಜಿಸಿ ಮಾರ್ಗಸೂಚಿಗಳ ಪ್ರಕಾರ, ಗೌರವಧನ ಪಡೆಯಲು ಅರ್ಹರಿಲ್ಲ ಎಂದು ತೀರ್ಮಾನಿಸಿದೆ. ಆ ಮೂಲಕ ವಿಶ್ವವಿದ್ಯಾಲಯವು ಏಕ ಸದಸ್ಯ ನ್ಯಾಯಪೀಠದ ಆದೇಶವನ್ನು ಪಾಲಿಸಿದೆ. ಇದರಿಂದ ಪ್ರತಿವಾದಿಗಳಾಗಿರುವ ಸರ್ಕಾರ, ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ), ಮೈಸೂರು ವಿಶ್ವವಿದ್ಯಾಲಯ, ಮಹಾರಾಜ ಮತ್ತು ಯುವರಾಜ ಕಾಲೇಜು ಪ್ರಾಂಶುಪಾಲರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಮುಂದುವರಿಸಲಾಗದು ಎಂದು ತಿಳಿಸಿದ ವಿಭಾಗೀಯ ಪೀಠ ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ : ಬಿಬಿಎಂಪಿ ಕಾಯ್ದೆ 2020 ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ: ಸರ್ಕಾರಕ್ಕೆ ನೋಟಿಸ್ ಜಾರಿ

ಅರ್ಜಿದಾರರಿಂದ ಸೂಕ್ತ ಕ್ರಮಕ್ಕೆ ಒತ್ತಾಯ: ಯುಜಿಸಿ ಮಾರ್ಗಸೂಚಿಗಳನ್ವಯ ಗೌರವಧನ ಪಾವತಿಸಲು ತಾವು ಅರ್ಹರಿಲ್ಲ ಎಂದು ವಿಶ್ವವಿದ್ಯಾಲಯ ಹೇಳಿದೆ. ತನ್ಮೂಲಕ ಹೈಕೋರ್ಟ್ ಏಕ ಸದಸ್ಯ ಪೀಠವು 2022ರ ಸೆಪ್ಟೆಂಬರ್​​​ 28ರಂದು ಹೊರಡಿಸಿದ ಆದೇಶವನ್ನು ಉಲ್ಲಂಘಿಸಿದೆ. ಹಾಗಾಗಿ, ಪ್ರತಿವಾದಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದಡಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ : ಸ್ಥಳೀಯ ಸಂಸ್ಥೆ ಚುನಾವಣೆ: ಕ್ಷೇತ್ರ ಪುನರ್ವಿಂಗಡಣೆ ಗೆಜೆಟ್ ಅಧಿಸೂಚನೆ ಪ್ರಕಟಿಸಿರುವುದಾಗಿ ಹೈಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.