ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ಸಿಗದ ನಿರೀಕ್ಷಿತ ಆರಂಭಿಕ ಜನಸ್ಪಂದನೆ

author img

By

Published : Oct 2, 2022, 10:32 PM IST

Punyakoti Dattu Yojana

ಗೋ ಸಂಕುಲವನ್ನು ಸಂರಕ್ಷಿಸಲು ರಾಜ್ಯ ಸರ್ಕಾರವು ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದಿದೆ. ಆದರೆ ಗೋ ಶಾಲೆಗಳಲ್ಲಿನ ಹಸುಗಳನ್ನು ದತ್ತು ಪಡೆಯುವ ಈ ಯೋಜನೆಗೆ ನಿರೀಕ್ಷಿತ ಆರಂಭಿಕ ಜನಸ್ಪಂದನೆ ಸಿಕ್ಕಿಲ್ಲ.

ಬೆಂಗಳೂರು: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರ ಗೋ ಸಂಕುಲವನ್ನು ಸಂರಕ್ಷಿಸಲು ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಗೋ ಶಾಲೆಗಳಲ್ಲಿನ ಹಸುಗಳನ್ನು ದತ್ತು ಪಡೆಯುವ ಈ ಯೋಜನೆಗೆ ನಿರೀಕ್ಷಿತ ಆರಂಭಿಕ ಜನಸ್ಪಂದನೆ ಸಿಕ್ಕಿಲ್ಲ.

ಪುಣ್ಯಕೋಟಿ ದತ್ತು ಯೋಜನೆಯು ಬೊಮ್ಮಾಯಿ‌ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆ. ಇದೇ ವರ್ಷ ಜುಲೈ 28ಕ್ಕೆ ರಾಜ್ಯ ಸರ್ಕಾರ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ ನೀಡಲಾಗಿತ್ತು. ಸ್ಥಳೀಯ ದೇಶಿ ತಳಿಗಳ ಸಂರಕ್ಷಣೆ ಮತ್ತು ರಕ್ಷಣೆ, ಗೋಶಾಲೆಗಳ ಆರ್ಥಿಕ ಸಬಲೀಕರಣ ಹಾಗೂ ಹಸುಗಳ ಆರೈಕೆಯಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ದತ್ತು ಪಡೆದ ಹಸುವಿನ ಜೊತೆ ಉಂಟಾಗುವ ಭಾವನಾತ್ಮಕ ಬಂಧದಿಂದ ದಾನಿಗಳ ಮನಸ್ಸಿನ ಕ್ಷೇಮ ಸುಧಾರಣೆಯ ಉದ್ದೇಶದೊಂದಿಗೆ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸಿಎಂ ಬೊಮ್ಮಾಯಿ‌ 11 ಹಸುಗಳನ್ನು ದತ್ತು ಪಡೆದು ಯೋಜನೆಗೆ ಚಾಲನೆ‌ ನೀಡಿದ್ದರು. ವಾರ್ಷಿಕ 11 ಸಾವಿರ ಮೊತ್ತಕ್ಕೆ ಗೋವುಗಳನ್ನು ಗೋ ಶಾಲೆಗಳಿಂದ ದತ್ತು ಪಡೆಯುವ ಯೋಜನೆ ಇದಾಗಿದೆ.

ರಾಜ್ಯದಲ್ಲಿ ಗೋವುಗಳನ್ನು ಗೋಮಾತೆ ಎಂದು ಪೂಜಿಸುವ ಲಕ್ಷಗಟ್ಟಲೆ ಜನರಿದ್ದಾರೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರ್ಕಾರ ರೂಪಿಸಿದೆ. ಆದರೆ ಸಾರ್ವಜನಿಕರಿಂದ ಈ ಯೋಜನೆಗೆ ಸದ್ಯಕ್ಕಂತೂ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ.

ಪುಣ್ಯ ಕೋಟಿಗೆ ಸಿಗದ ನಿರೀಕ್ಷಿತ ಸ್ಪಂದನೆ: ಬಹಳ ನಿರೀಕ್ಷೆಯೊಂದಿಗೆ ಜಾರಿ ಮಾಡಲಾಗಿದ್ದ ಪುಣ್ಯಕೋಟಿ ದತ್ತು ಯೋಜನೆಗೆ ಸಾರ್ವಜನಿಕರಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. ಯೋಜನೆ ಜಾರಿಯಾಗಿ ಎರಡು ತಿಂಗಳು ದಾಟಿದೆ. ಆದರೆ, ಆರಂಭದಲ್ಲಿ ನಿರೀಕ್ಷಿಸಿದಷ್ಟು ಹಸುಗಳನ್ನು ದತ್ತು ಪಡೆಯಲು ಜನರು ಮುಂದೆ ಬಂದಿಲ್ಲ.

ಪಶು ಸಂಗೋಪನೆ ಇಲಾಖೆ ನೀಡಿದ ಅಂಕಿಅಂಶದ ಪ್ರಕಾರ ಪುಣ್ಯಕೋಟಿ ದತ್ತು ಯೋಜನೆಗೆ ಆರಂಭಿಕ ಹಿನ್ನಡೆಯಾಗಿರುವುದು ಸ್ಪಷ್ಟವಾಗುತ್ತದೆ. ಈವರೆಗೆ ಕೇವಲ 167 ಹಸುಗಳನ್ನು ದತ್ತು ಪಡೆಯಲಾಗಿದೆ. ರಾಜ್ಯದಲ್ಲಿ ಒಟ್ಟು 208 ನೋಂದಾಯಿತ ಗೋಶಾಲೆಗಳಿವೆ. ಈ ಗೋಶಾಲೆಗಳಲ್ಲಿ 22,219 ಸಕ್ರಿಯ ಗೋವುಗಳನ್ನು ನೋಂದಾಯಿಸಲಾಗಿದೆ. ಈವರೆಗೆ ದತ್ತು ಹಾಗೂ ದಾನದ ಮೂಲಕ ಸುಮಾರು 19,06,138 ರೂ. ಸ್ವೀಕರಿಸಲಾಗಿದೆ.

ದತ್ತು ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಮಾಡದ ಕಾರಣ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ ಎಂದು ಇಲಾಖೆ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಜನರಿಗೆ ಪುಣ್ಯಕೋಟಿ ದತ್ತು ಯೋಜನೆ ಬಗ್ಗೆ ಅರಿವಿನ ಕೊರತೆ ಇದೆ. ಹೀಗಾಗಿ ಸಾರ್ವಜನಿಕರು ಗೋವುಗಳನ್ನು ದತ್ತು ಪಡೆಯಲು ಮುಂದೆ ಬರುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಪ್ರಚಾರ ಕಾರ್ಯಕ್ಕೆ ಮುಂದಾದ ಇಲಾಖೆ: ಯೋಜನೆ ಸಂಬಂಧ ಹೆಚ್ಚಿನ ಪ್ರಚಾರ ಕಾರ್ಯ ನಡೆಸಲು ಇದೀಗ ಪಶು ಸಂಗೋಪನೆ ಇಲಾಖೆ ಮುಂದಾಗಿದೆ.‌ ಈಗಾಗಲೇ ನಟ ಕಿಚ್ಚ ಸುದೀಪ್​​ ಅವರನ್ನು ಯೋಜನೆಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಅವರ ಮೂಲಕ ಹೆಚ್ಚಿನ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಲು ಮುಂದಾಗಿದೆ.

ಗೋವುಗಳನ್ನು 3 ತಿಂಗಳು, 6 ತಿಂಗಳು, 9 ತಿಂಗಳು ಅಥವಾ ಒಂದು ವರ್ಷದಂತೆ ಐದು ವರ್ಷದವರೆಗೆ ದತ್ತು ಪಡೆಯಬಹುದಾಗಿದೆ‌. ದತ್ತು ಪಡೆದವರಿಗೆ ತೆರಿಗೆಯಲ್ಲೂ ವಿನಾಯಿತಿ ಸಿಗಲಿದೆ. ಈ ಎಲ್ಲಾ ಅಂಶಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುವ ಮೂಲಕ ಪುಣ್ಯಕೋಟಿ ದತ್ತು ಯೋಜನೆಗೆ ಹೆಚ್ಚಿನ ಜನಸ್ಪಂದನೆ ಸಿಗುವಂತೆ ಮಾಡಲು ಇಲಾಖೆ ಮುಂದಾಗಿದೆ.

ಇದನ್ನೂ ಓದಿ : ಬೆಳಗಾವಿಯ ಸುವರ್ಣಸೌಧದಲ್ಲಿ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.