ETV Bharat / state

ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ: ಡಿಕೆಶಿಗೆ ಈಶ್ವರಪ್ಪ ತಿರುಗೇಟು

author img

By

Published : Mar 3, 2023, 6:10 PM IST

ಬಿಜೆಪಿ ಶಾಸಕ ಲಂಚ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದಕ್ಕೆ ಇಡೀ ಸರ್ಕಾರವನ್ನೇ ದೂರಿ ಮಾತನಾಡಿರುವ ಡಿಕೆಶಿ ವಿರುದ್ಧ ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

Former Minister K S Eshwarappa
ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ

ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ

ಮೈಸೂರು: ಬಿಜೆಪಿ ಶಾಸಕ ಮಾಡ್ನಾಳ್ ವಿರೂಪಾಕ್ಷಪ್ಪ ಪುತ್ರನ ಪ್ರಕರಣದಲ್ಲಿ, ಬಿಜೆಪಿ ಸರ್ಕಾರ 40% ಕಮಿಷನ್ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ, ಇದಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜಿನಾಮೆ ನೀಡಬೇಕು ಎಂಬ ಡಿ ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಇಂತವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ. ಯಾರೇ ಆದರೂ ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು ಎಂದು ತಿರುಗೇಟು ನೀಡಿದ್ದಾರೆ.

ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಈಶ್ವರಪ್ಪ, ಡಿಕೆಶಿ ಮನೆಯ ಮೇಲೆ ದಾಳಿ ಮಾಡಿದಾಗ ಕೊಟ್ಯಂತರ ರೂಪಾಯಿ ಹಣ ಸಿಕ್ಕಿದೆ. ಇಂತವರ ಮಾತಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಡಿಕೆಶಿ ಹೇಳಿಕೆಗೆ ಮಾಜಿ ಸಚಿವ ಹಾಗೂ ಶಾಸಕ ಈಶ್ವರಪ್ಪ ತಿರುಗೇಟು ನೀಡಿದರು.

ಸೋಮಣ್ಣ ಗೈರಿಗೆ ವಿಶೇಷ ಅರ್ಥ ಬೇಡ: ಮೊನ್ನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಚಾಲನೆ ನೀಡಿದ್ದರು. ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಸೋಮಣ್ಣ ಕಾರ್ಯಕ್ರಮಕ್ಕೆ ಗೈರಾಗಿದ್ದು. ಅವರಿಗೆ ಪೂರ್ವ ನಿಗದಿತ ಕಾರ್ಯಕ್ರಮ ಹಾಗೂ ಆರೋಗ್ಯ ಸಮಸ್ಯೆಯಿಂದ ಕಾರ್ಯಕ್ರಮಕ್ಕೆ ಭಾಗವಹಿಸಲಿಲ್ಲ‌. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಯಾವುದೇ ಭಿನ್ನಮತ, ಅಸಮಾಧಾನ ಇಲ್ಲ ಎಂದರು.

ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್​ಸಿ, ಎಸ್ಟಿ ಮಿಸಲಾತಿ ಪ್ರಮಾಣವನ್ನು ಹೆಚ್ಚು ಮಾಡಿದೆ. ಬಿಜೆಪಿ ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ಜನ ನಿರೀಕ್ಷೆಗೂ ಮೀರಿ ಬರುತ್ತಿದ್ದಾರೆ‌. ರಾಜ್ಯದ ಜನ ನಮ್ಮ ಜೊತೆ ಇರುವುದು ಸ್ಪಷ್ಟವಾಗಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ದುಡ್ಡು ಕೊಟ್ಟು ಜನರನ್ನು ಕರೆಸುವುದು ಕಾಂಗ್ರೆಸ್ ಸಂಸ್ಕೃತಿ: ಕಾಂಗ್ರೆಸ್​ನವರಿಗೆ ಹಣ ಕೊಟ್ಟು ಜನರನ್ನು ಕರೆಸುವ ಅಭ್ಯಾಸವಿದೆ. ಆದರೆ, ಈ ಅಭ್ಯಾಸ ಬಿಜೆಪಿಗೆ ಇಲ್ಲ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಸಿಗುತ್ತಿರುವ ಆಪಾರ ಬೆಂಬಲದಿಂದ ಕಾಂಗ್ರೆಸ್ ನಾಯಕರು ವಿಚಲಿತರಾಗಿ, ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. 500 ರೂಪಾಯಿ ಕೊಟ್ಟು ಜನರನ್ನು ಸಭೆಗೆ ಕರೆತರುವಂತೆ ಸಿದ್ದರಾಮಯ್ಯ ಹೇಳಿರುವ ವಿಡಿಯೋ ಅನ್ನು ಇಡೀ ದೇಶದ ಜನ ನೋಡಿದ್ದಾರೆ. ಅವರ ತಪ್ಪನ್ನು ಮುಚ್ಚಿಕೊಳ್ಳಲು ಈ ರೀತಿ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ನಾವು ನಾಲ್ಕು ಅಂಶಗಳ ಮೇಲೆ ಮತ ಕೇಳುತ್ತಿದ್ದೇವೆ.‌ ಜೊತೆಗೆ ಪಿಎಫ್​ಐ, ಎಸ್​ಡಿಪಿಐ ಹಾಗೂ‌ ಭಯೋತ್ಪಾದನೆಗೆ ಬೆಂಬಲ ನೀಡುವ ಸಂಘಟನೆಗಳ ಮತ ಬೇಕಿಲ್ಲ, ರಾಷ್ಟ್ರೀಯವಾದಿ ಮುಸ್ಲಿಮರ ಮತ ನಮಗೆ ಬೇಕು ಎಂದು ಪ್ರಶ್ನೆಯೊಂದಕ್ಕೆ ಕೆ ಎಸ್ ಈಶ್ವರಪ್ಪ ಉತ್ತರಿಸಿದರು.

ಇನ್ನೂ ಕುಮಾರಸ್ವಾಮಿ ಅವರ ಬಿಜೆಪಿಯವರ ಭ್ರಷ್ಟಾಚಾರಕ್ಕೆ 15 ಜೈಲುಗಳನ್ನು ಕಟ್ಟಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, 15 ರಿಂದ 50 ರವರೆಗೆ ಜೈಲುಗಳನ್ನು ಅವರ ಕುಟುಂಬದ ವಿರುದ್ಧ ತನಿಖೆ ಮಾಡಿಸಿದರೆ, ಅವರ ಕುಟುಂಬದ ಸದಸ್ಯರಿಗೆ ಕಟ್ಟಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಲೋಕಾ ದಾಳಿ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ1 ಆರೋಪಿ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.