ETV Bharat / state

’ನಾ ನಾಯಕಿ’ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿ: ಕೈ ಪಡೆಯಲ್ಲಿ ಸಂಚಲನ

author img

By

Published : Jan 9, 2023, 7:55 PM IST

Updated : Jan 9, 2023, 8:05 PM IST

ಕಾಂಗ್ರೆಸ್​ ಪಕ್ಷ ಅರಮನೆ ಮೈದಾನದಲ್ಲಿ ಮಹಿಳೆಯರಿಗಾಗಿ ’ನಾ ನಾಯಕಿ’ ಕಾರ್ಯಕ್ರಮವನ್ನು ಏರ್ಪಡಿಸದ್ದು, ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ.

na-nayaki-program
ನಾ ನಾಯಕಿ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿ

ಬೆಂಗಳೂರು: ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ ನಾ ನಾಯಕಿ ಸಮಾವೇಶ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದಾರೆ. ಹೀಗಾಗಿ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಅವರ ಬದುಕಿನಲ್ಲಿ ಕಾಂಗ್ರೆಸ್ ಪಕ್ಷ ಕೊಡುಗೆ ನೀಡಿ, ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ನಾಯಕತ್ವ, ಶಕ್ತಿ ನೀಡುತ್ತಾ ಬಂದಿದೆ. ಈ ಹಿಂದೆ ಅಂಗನವಾಡಿ ಕಾರ್ಯಕ್ರಮ, ಆಶಾಕಾರ್ಯಕರ್ತರು, ಸ್ತ್ರೀಶಕ್ತಿ ಸ್ವಸಹಾಯ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ಮಾತ್ರ ಮಾಡಿಕೊಂಡು ಬಂದಿದೆ ಎಂದರು.

ಚುನಾವಣೆಗೂ ಮುನ್ನ ಮಹಿಳೆಯರ ಸಬಲೀಕರಣಕ್ಕೆ ಮಹಿಳೆಯರಿಗೆ ನೀಡುವ ಭರವಸೆ ಬಿಡುಗಡೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಜ.15ರ ಒಳಗೆ ಎಲ್ಲ ಹೆಣ್ಣು ಮಕ್ಕಳು ಹಾಗೂ ನಾಯಕರುಗಳು ತಮ್ಮ ಸಲಹೆ ನೀಡಬಹುದು. ಮಹಿಳೆಯರ ಆಚಾರ, ವಿಚಾರ, ಅಭಿಪ್ರಾಯ ನಮ್ಮ ಧ್ವನಿ ಆಗಬೇಕು. ಮಹಿಳೆಯರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮಹಿಳೆಯರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಸಾಮಾಜಿಕ ಜಾಲತಾಣ, ಇಮೇಲ್, ವಾಟ್ಸ್​​ಆ್ಯಪ್​ ಹಾಗೂ ಪತ್ರದ ಮೂಲಕ ತಮ್ಮ ಸಲಹೆ ನೀಡಬಹುದು.

ಪಂಚಾಯಿತಿ ಮಹಿಳಾ ಸದಸ್ಯರು ಭಾಗಿ: ಇದಕ್ಕಾಗಿ ಜ.16ರಂದು ಅರಮನೆ ಮೈದಾನದಲ್ಲಿ ಮಹಿಳೆಯರ ನಾ ನಾಯಕಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶದಲ್ಲಿ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಸ್ಪರ್ಧೆ ಮಾಡಿದ ಮಹಿಳಾ ನಾಯಕಿಯರು ಭಾಗವಹಿಸುತ್ತಾರೆ. ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಬೂತ್, ಪಂಚಾಯಿತಿಗಳಿಂದ ಕನಿಷ್ಠ 3-10 ಹೆಣ್ಣು ಮಕ್ಕಳು ಈ ಸಮಾವೇಶಕ್ಕೆ ಆಗಮಿಸಬೇಕು ಎಂದು ಕರೆ ನೀಡಿದರು. ಈಗಾಗಲೇ ಸಾವಿರಾರು ಸಲಹೆಗಳು ಬಂದಿದ್ದು, ಇವುಗಳನ್ನು ಒಂದು ಸಮಿತಿ ಪರಿಶೀಲನೆ ನಡೆಸುತ್ತಿವೆ ಎಂದರು.

ಇನ್ನು ಮಹಿಳೆಯರಿಗೆ ನೀಡಲಾಗುವ ಘೋಷಣೆಗಳನ್ನು ಈಡೇರಿಸುವ ಕುರಿತು ಕೇಳಿದ ಪ್ರಶ್ನೆಗೆ, ನಾವು ನುಡಿದಂತೆ ನಡೆಯುತ್ತೇವೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆ ನೀಡಿದ್ದು, 550 ಭರವಸೆ ಈಡೇರಿಸಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಬರುವ ಮುನ್ನ ನಾವು ಕೊಟ್ಟ ಭರವಸೆಗಳಲ್ಲಿ ಶೇ.95ರಷ್ಟು ಪೂರ್ಣಗೊಳಿಸಿ ನಂತರ ಹೆಚ್ಚುವರಿ ಕಾರ್ಯಕ್ರಮ ನೀಡಲಾಗಿತ್ತು ಎಂದು ಹೇಳಿದರು.

ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡಲು ಬದ್ಧ: ಮಹಿಳೆಯರಿಗೆ ರಾಜಕೀಯ ಪ್ರಾತಿನಿದ್ಯ ನೀಡುವ ಬಗ್ಗೆ ಕೇಳಿದಾಗ, ‘ನಾವು ಸೋನಿಯಾ ಗಾಂಧಿ ಅವರ ಮುಖಂಡತ್ವದಲ್ಲಿ ಮಹಿಳೆಯರಿಗೆ ರಾಯಕೀಯದಲ್ಲಿ ಶೇ.33ರಷ್ಟು ಮೀಸಲಾತಿ ಬಗ್ಗೆ ರಾಜ್ಯಸಭೆಯಲ್ಲಿ ಮಂಡಿಸಿದ್ದೇವೆ. ಎರಡೂ ಪಕ್ಷಗಳು ಈ ಬಗ್ಗೆ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿವೆ. ನಾವು ಅಧಿಕಾರದಲ್ಲಿಲ್ಲ. ಅವರು ಅಧಿಕಾರದಲ್ಲಿ ಇದ್ದರೂ ನೀಡುತ್ತಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಮೀಸಲಾತಿ ನೀಡಬೇಕು ಎಂದಿದ್ದು ಕಾಂಗ್ರೆಸ್. ರಾಜೀವ್ ಗಾಂಧಿ ಅವರು ಸಂವಿಧಾನದ 73-74ನೇ ತಿದ್ದುಪಡಿಯಲ್ಲಿ ಈ ವಿಚಾರ ತಂದರು ಎಂದು ತಿಳಿಸಿದರು.

ನಾವು ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಶಕ್ತಿ ತುಂಬಲು ಕಾರ್ಯಕ್ರಮ ನೀಡುತ್ತಾ ಬಂದಿದ್ದು, ಇದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಇಂದಿರಾ ಗಾಂಧಿ ಅವರು ಅಂಗನವಾಡಿ ಕಾರ್ಯಕ್ರಮ, ಮನಮೋಹನ್ ಸಿಂಗ್ ಅವರು ಆಶಾ ಕಾರ್ಯಕರ್ತರ ಕಾರ್ಯಕ್ರಮ, ಎಸ್.ಎಂ ಕೃಷ್ಣಾ ಅವರ ಸರ್ಕಾರದಲ್ಲಿ ಸ್ತ್ರೀಶಕ್ತಿ ಕಾರ್ಯಕ್ರಮ ನೀಡಿದ್ದೆವು. ಬಿಜೆಪಿ ಇಂತಹ ಒಂದು ಕಾರ್ಯಕ್ರಮವನ್ನು ಇಡೀ ದೇಶದಲ್ಲಿ ನೀಡಿಲ್ಲ ಎಂದು ಉತ್ತರಿಸಿದರು.

ದೆಹಲಿಯಂತೆ ರಾಜ್ಯದಲ್ಲೂ ಮಹಿಳೆಯರಿಗೆ ಉಚಿತ ಕೊಡುಗೆಗಳನ್ನು ನೀಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಇದು ಕರ್ನಾಟಕ ರಾಜ್ಯ, ನಮ್ಮ ಆಡಳಿತ ಇಡೀ ದೇಶಕ್ಕೆ ಮಾದರಿ. ನಮ್ಮ ಆರ್ಥಿಕ ಶಕ್ತಿ, ನಮ್ಮ ನೀತಿಯನ್ನು ದೆಹಲಿಗೆ ಹೋಲಿಕೆ ಮಾಡುವುದು ಬೇಡ ಎಂದರು. ಸಿದ್ದರಾಮಯ್ಯ ಅವರ ನಿಜ ಕನಸುಗಳು ಎಂಬ ಪುಸ್ತಕವನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡುತ್ತಿರುವ ಬಗ್ಗೆ ಕೇಳಿದಾಗ, ಬಿಜೆಪಿ ಭಾವನೆ ವಿಚಾರವಾಗಿ ರಾಜಕೀಯ ಮಾಡುತ್ತದೆ.

ನನ್ನ ಕ್ಷೇತ್ರದಲ್ಲಿ 300ಕ್ಕೂ ಹೆಚ್ಚು ದೇವಾಲಯ ಕಟ್ಟಲು ನಾನು ನೆರವು ಮಾಡಿದ್ದು, ಆ ಬಗ್ಗೆ ಯಾರೂ ಮಾತನಾಡಲ್ಲ. ಆದರೆ, ನಮ್ಮ ಕ್ಷೇತ್ರದ ಒಂದು ಗ್ರಾಮದಲ್ಲಿ ಕ್ರೈಸ್ತರ ಶಿಲುಬೆ ನಿರ್ಮಿಸಲು ಮುಂದಾದಾಗ ನನ್ನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಷ್ಟ್ರಪತಿಗಳಾಗಿದ್ದ ರಾಮನಾಥ್ ಕೋವಿಂದ್ ಅವರು ಟಿಪ್ಪು ಅವರ ಬಗ್ಗೆ ನಮ್ಮ ಸದನದಲ್ಲಿ ಭಾಷಣ ಮಾಡಿ ಹೋಗಿದ್ದಾರೆ. ಬಿಜೆಪಿ ಅವರು ಜನರಿಗೆ ಬದುಕು ಕಟ್ಟಿಕೊಟ್ಟಿರುವ ಬಗ್ಗೆ ಮಾತನಾಡಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ: ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ ಸಿದ್ದರಾಮಯ್ಯ!

Last Updated :Jan 9, 2023, 8:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.