ETV Bharat / state

ಸಿದ್ದರಾಮಯ್ಯ ಅನರ್ಹತೆ ಕೋರಿ ಅರ್ಜಿ: ಸಿಎಂಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

author img

By

Published : Jul 28, 2023, 3:55 PM IST

Updated : Jul 28, 2023, 4:59 PM IST

High Court Notice to CM Siddaraiamaih: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮುಖ್ಯಮಂತ್ರಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

petition-seeking-disqualification-of-siddaramaiah-high-court-issued-notice-to-cm
ಸಿದ್ದರಾಮಯ್ಯ ಅನರ್ಹ ಕೋರಿ ಅರ್ಜಿ: ಸಿಎಂಗೆ ತುರ್ತು ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

ಬೆಂಗಳೂರು : ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಮುಖ್ಯಮಂತ್ರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ನಿವಾಸಿ ಕೆ.ಎಂ. ಶಂಕರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ನೋಟಿಸ್ ಜಾರಿ ಮಾಡಿ ಸೆಪ್ಟೆಂಬರ್​ 1ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4) ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹಾಗಾಗಿ, ಅಕ್ರಮಗಳನ್ನು ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು'' ಎಂದು ಕೋರಿದರು.

ಅಲ್ಲದೇ, ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಅವರು ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ್ದಾರೆ. ಮತದಾರರಿಗೆ ಆಮಿಷ ಒಡ್ಡುವುದು ಲಂಚ ಮತ್ತು ಭ್ರಷ್ಟಾಚಾರಕ್ಕೆ ಸಮಾನವಾಗಿದೆ. ಅಲ್ಲದೇ, ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಅಪರಾಧವಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯೂ ಆಗಿದೆ. ಆದ್ದರಿಂದ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಅನರ್ಹತೆಗೆ ಕೋರಿ ಕಳೆದ ಕೆಲ ದಿನಗಳ ಹಿಂದೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯನ್ನು ಜುಲೈ 21ರಂದು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ನ್ಯಾಯಪೀಠವು ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ (ಇಂದು ಶುಕ್ರವಾರ) ಮುಂದೂಡಿತ್ತು.

ಇದನ್ನೂ ಓದಿ: ಸರ್ಕಾರದ ಅಂಗಸಂಸ್ಥೆಗಳ ವ್ಯಾಜ್ಯಗಳನ್ನು ತಾವೇ ಬಗೆಹರಿಸಿಕೊಳ್ಳಬೇಕು: ಹೈಕೋರ್ಟ್

Last Updated : Jul 28, 2023, 4:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.