ETV Bharat / state

ಜೂನ್ 20ಕ್ಕೆ ರಾಜ್ಯಕ್ಕೆ ಪ್ರಧಾನಿ: ಸಬ್ ಅರ್ಬನ್ ರೈಲ್ವೆ ಸೇರಿ ಹಲವು ಯೋಜನೆಗಳಿಗೆ ಚಾಲನೆ

author img

By

Published : Jun 16, 2022, 8:11 PM IST

pm modi to Karnataka
ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಅರ್ಬನ್ ರೈಲ್ವೆ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್​ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ 15 ಸಾವಿರ ಕೋಟಿ ವೆಚ್ಚದ ಸಬ್ ಅರ್ಬನ್ ರೈಲ್ವೆ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ, ಮೋದಿ ಕಾರ್ಯಕ್ರಮವನ್ನು ಪ್ರಚಾರ ಕಾರ್ಯದಂತೆ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಅದಕ್ಕಾಗಿಯೇ ಬೃಹತ್ ಸಾರ್ವಜನಿಕ ಸಮಾರಂಭ ಆಯೋಜಿಸಿದೆ.

ಸಬ್ ಅರ್ಬನ್ ರೈಲ್ವೆ ಯೋಜನೆಗೆ ಶಿಲಾನ್ಯಾಸ: ಜೂನ್​ 20ರಂದು ಬೆಳಗ್ಗೆ 9.20ಕ್ಕೆ ನವದೆಹಲಿಯಿಂದ ಪ್ರಯಾಣಿಸಲಿರುವ ಪ್ರಧಾನಿ ನರೇಂದ್ರ ಮೋದಿ 11.55ಕ್ಕೆ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದು, 12ಗಂಟೆಗೆ ಹೆಲಿಕಾಫ್ಟರ್​​ ಮೂಲಕ ಕೊಮ್ಮಘಟ್ಟಕ್ಕೆ ಪ್ರಯಾಣಿಸಲಿದ್ದಾರೆ. 12.30ಕ್ಕೆ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಏನಿದು ಯೋಜನೆ? ಪಿಪಿಪಿ ಮಾದರಿಯಡಿ 15,767 ಕೋಟಿ ರೂ. ವೆಚ್ಚದಲ್ಲಿ ಈ ಉಪನಗರ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 148.17 ಕಿ.ಮೀ. ವ್ಯಾಪ್ತಿಯಲ್ಲಿ ನಾಲ್ಕು ಪ್ರತ್ಯೇಕ ಕಾರಿಡಾರ್‌ಗಳನ್ನು ನಿರ್ಮಿಸಲಾಗುತ್ತಿದೆ. ಬೆಂಗಳೂರು- ದೇವನಹಳ್ಳಿ (41.40 ಕಿ.ಮೀ), ಬೈಯ್ಯಪ್ಪನಹಳ್ಳಿ-ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿ-ಬೆಂಗಳೂರು ಕಂಟೋನೆಂಟ್ (35.52 ಕಿ.ಮೀ) ಮತ್ತು ಹೀಲಲಿಗೆ-ರಾಜಾನುಕುಂಟೆ (46.24 ಕಿ.ಮೀ) ನಾಲ್ಕು ಕಾರಿಡಾರ್‌ನಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಯೋಜನೆಯಡಿ 62 ನಿಲ್ದಾಣಗಳು, 22 ಎಲಿವೇಟೆಡ್ ಮಾರ್ಗ ಇರಲಿದ್ದು, 2026ರಲ್ಲಿ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಹಲವು ಯೋಜನೆಗಳಿಗೆ ಚಾಲನೆ: ಇದೇ ವೇಳೆ ದೇಶದ ಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಸರ್.ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಉದ್ಘಾಟನೆ, ರೈಲ್ವೆ ಮತ್ತು ರಸ್ತೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮತ್ತು ಮಲ್ಟಿ ಮೊಡಲ್ ಲಾಜಿಸ್ಟಿಕ್ ಪಾರ್ಕ್​​ಗೆ ಚಾಲನೆ ನೀಡಲಿದ್ದಾರೆ.

ಬೃಹತ್ ಕಾರ್ಯಕ್ರಮ: ಸುಮಾರ 60 ಸಾವಿರ ಜನರನ್ನು ಸೇರಿಸಿ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಆಯೋಜನೆ ಮಾಡಲು ಬಿಜೆಪಿ ಸಿದ್ಧತೆ ಮಾಡಿದ್ದು, ಬೆಂಗಳೂರು ಸಚಿವರು, ಶಾಸಕರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಮೋದಿ ಅವರಿಗೆ ಸಾರ್ವಜನಿಕರಿಂದ ಬೃಹತ್ ಬೆಂಬಲ ವ್ಯಕ್ತವಾಗುವಂತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಸರ್ಕಾರಿ ಯೋಜನೆಗಳು, ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸದ ಮೂಲಕ ಜನರನ್ನು ತಲುಪುವ ಪ್ರಯತ್ನಕ್ಕೆ ಬಿಜೆಪಿ ಮುಂದಾಗಿದೆ.

ಮೈಸೂರಿಗೆ ಪ್ರಯಾಣ: ಮಧ್ಯಾಹ್ನ 2 ಗಂಟೆಗೆ ಕೊಮ್ಮಘಟ್ಟದಿಂದ ಹೆಲಿಕಾಪ್ಟರ್​ ಮೂಲಕ ಬಿಎಎಸ್ಇ ಹೆಲಿಪ್ಯಾಡ್​ಗೆ ಆಗಮಿಸಲಿದ್ದು, ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ, ಬಿಎಸ್ಇ ವಿಶ್ವವಿದ್ಯಾಲಯ ಉದ್ಘಾಟನೆ ನಡೆಸಲಿದ್ದಾರೆ. ಐಐಎಸ್ಸಿಯಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ಸಂಜೆ 4 ಗಂಟೆಗೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ಇಡಿ ವಿರುದ್ದ ಪ್ರಭಾವ ಬೀರುವಂತೆ ಕಾಂಗ್ರೆಸ್ ಪ್ರತಿಭಟನೆ ದುರಂತ: ಸಿಎಂ

ಸಂಪುಟ ವಿಸ್ತರಣೆ ಕುರಿತು ಚರ್ಚೆ? ಮಧ್ಯಾಹ್ನ 3.30 ರಿಂದ 3.45ರವರೆಗೆ ಸಮಯಾವಕಾಶ ಕಾಯ್ದಿರಿಸಿರುವ ಪ್ರಧಾನಿ ಮೋದಿ ರಾಜಕೀಯ ವಿಷಯಗಳ ಚರ್ಚೆಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದು ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆಗೆ ಅವಕಾಶ ಸಿಕ್ಕಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೋದಿ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.