ETV Bharat / state

ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ

author img

By

Published : Feb 24, 2023, 8:02 AM IST

Assembly
ವಿಧಾನಸಭೆ

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ 2023 ರ ಮಂಡನೆ ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022 ರ ಅಂಗೀಕಾರ ವಿಧಾನಸಭೆಯಲ್ಲಿ ನಿನ್ನೆ ನಡೆದಿದೆ.

ಬೆಂಗಳೂರು: ವಕೀಲರ ಬಹುಬೇಡಿಕೆಯ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ 2023 ವಿಧಾನಸಭೆಯಲ್ಲಿ ಮಂಡಿಸಲಾಗಿರುತ್ತದೆ ಜೊತೆಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022 ಕೂಡ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು. ರಾಜ್ಯದಲ್ಲಿ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿ ಮಾಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡನೆಗೆ ಆಗ್ರಹಿಸಲಾಗಿತ್ತು. ಆದರೆ, ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡನೆಯಾಗಿರಲಿಲ್ಲ. ಹೀಗಾಗಿ ವಕೀಲರು ತಮ್ಮ ಹೋರಾಟವನ್ನು ತೀವ್ರ ಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದೀಗ ವಕೀಲರ ಒತ್ತಡಕ್ಕೆ ಮಣಿದು ಸರ್ಕಾರ ನ್ಯಾಯವಾದಿಗಳ ಸಂರಕ್ಷಣೆಯ ವಿಧೇಯಕವನ್ನು ನಿನ್ನೆ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ 2023ರ ಪ್ರಕಾರ, ಯಾವುದೇ ವ್ಯಕ್ತಿ ನ್ಯಾಯವಾದಿ ಮೇಲೆ ಹಲ್ಲೆ ನಡೆಸುವಂತಿಲ್ಲ. ಹಲ್ಲೆ ಮಾಡಿದವರಿಗೆ ಆರು ತಿಂಗಳಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಒಂದು ಲಕ್ಷದವರೆಗೂ ದಂಡ ವಿಧಿಸುವ ನಿಯಮ ರೂಪಿಸಲಾಗಿದೆ. ಇನ್ನು ಅಪರಾಧದ ಸಂದರ್ಭದಲ್ಲಿ ನ್ಯಾಯವಾದಿಯನ್ನು ಪೊಲೀಸರು ಬಂಧನ ಮಾಡಿದಲ್ಲಿ ಆ ಮಾಹಿತಿಯನ್ನು 24 ಗಂಟೆಯೊಳಗೆ ನ್ಯಾಯವಾದಿಗಳ ಅಸೋಸಿಯೇಷನ್‌ಗೆ ನೀಡಬೇಕು. ವಕೀಲರು ಬೆದರಿಕೆ, ಅಡ್ಡಿ, ಕಿರುಕುಳ, ಅನುಚಿತ ಹಸ್ತಕ್ಷೇಪರಹಿತವಾಗಿ ತಮ್ಮ ವೃತ್ತಿಪರ ಕೆಲಸ ನಿರ್ವಹಿಸಲು ಅನುವಾಗಿಸಲು, ವಕೀಲರು ದೇಶ ವಿದೇಶಗಳಲ್ಲಿ ಮುಕ್ತವಾಗಿ ಪ್ರಯಾಣಿಸಲು ಪೂರಕವಾಗುವ ನಿಯಮವನ್ನು ವಿಧೇಯಕದಲ್ಲಿ ಸೇರಿಸಲಾಗಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಬಿಲ್ 2022 ಅಂಗೀಕಾರ: ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಒದಗಿಸುವ 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಿಧೇಯಕ ಮಂಡಿಸಿ, ಅಂಗೀಕಾರ ಪಡೆದರು.

ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನಗೊಳಿಸುವಲ್ಲಿ ಸೂಕ್ತ ಕ್ರಮಗಳನ್ನು ಮತ್ತು ಚಟುವಟಿಕೆಗಳನ್ನು ಸಂಯೋಜಿಸಲು ಕಾನೂನಿನ ಅಗತ್ಯವಿದೆ. ಜೊತೆಗೆ ರಾಜ್ಯದಲ್ಲಿ ಜಮೀನು, ತೆರಿಗೆ ರಿಯಾಯಿತಿ, ಅನುದಾನ ಹಾಗೂ ಇತರ ಸೌಲಭ್ಯಗಳನ್ನು ಪಡೆಯುತ್ತಿರುವ ಎಲ್ಲ ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಮತ್ತು ಇತರ ಕೈಗಾರಿಕೆ ಮತ್ತು ಕಾರ್ಯಸಂಸ್ಥೆಗಳಲ್ಲಿಯೂ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸಲು ಪೂರಕವಾದ ಕಾನೂನು ಅಗತ್ಯ ಇದೆ ಎಂದು ವಿವರಿಸಿದರು.

ವಿಧೇಯಕದ ಪ್ರಮುಖಾಂಶಗಳು: ಉನ್ನತ, ತಾಂತ್ರಿಕ, ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಪರಿಚಯಿಸಲಾಗುವುದು. ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದವರಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ಒದಗಿಲಾಗುವುದು.ಅಧೀನ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ, ಬ್ಯಾಂಕುಗಳಲ್ಲಿ ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು ಬಳಸುವ ಅಂಶಗಳನ್ನು ವಿಧೇಯಕದಲ್ಲಿ ಸೇರಿಸಲಾಗಿದೆ.

ಬ್ಯಾಂಕುಗಳಲ್ಲಿ ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಉದ್ಯೋಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿ ಸಾರ್ವಜನಿಕರೊಂದಿಗೆ ತನ್ನ ಎಲ್ಲ ಸಂಪರ್ಕ ಹಾಗೂ ಪತ್ರ ವ್ಯವಹಾರದಲ್ಲಿ ಕನ್ನಡ ಭಾಷೆಯನ್ನು ಬಳಸಬೇಕು. ತಪ್ಪಿದಲ್ಲಿ ಮೊದಲನೆ ಅಪರಾಧಕ್ಕಾಗಿ 5 ಸಾವಿರ ರೂ., ಎರಡನೇ ಅಪರಾಧಕ್ಕಾಗಿ 10 ಸಾವಿರ ರೂ., ನಂತರದ ಅಪರಾಧಕ್ಕಾಗಿ 20 ಸಾವಿರೂ.ವರೆಗೆ ವಿಸ್ತರಿಸಬಹುದಾದ ದಂಡ ಮತ್ತು ಪರವಾನಗಿಯನ್ನು ರದ್ದುಗೊಳಿಸುವ ನಿಯಮ ರೂಪಿಸಲಾಗಿದೆ.

ರಾಜ್ಯಮಟ್ಟದ ಜಾರಿ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರು, ಉಪಾಧ್ಯಕ್ಷರಾಗಿ ಸರಕಾರದ ಮುಖ್ಯ ಕಾರ್ಯದರ್ಶಿ, ಸದಸ್ಯರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯನ್ನು ನೇಮಿಸಲಾಗುತ್ತದೆ. ಇನ್ನು ಜಿಲ್ಲಾ ಮಟ್ಟದ ಸಮಿತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಮಟ್ಟದ ಸಮಿತಿಗೆ ಉಪ ವಿಭಾಗಾಧಿಕಾರಿ ಅಧ್ಯಕ್ಷರಾಗಿರುತ್ತಾರೆ. ಗ್ರಾಮ ಪಂಚಾಯತಿ ಮಟ್ಟದ ಸಮಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನೇತೃತ್ವ ಇರಲಿದೆ.

ಇದನ್ನೂ ಓದಿ: ಜೆಡಿಎಸ್ ಸದಸ್ಯರ ಸಭಾತ್ಯಾಗದ ಮಧ್ಯೆ ಬಿಎಂಎಸ್ ವಿವಿ ವಿಧೇಯಕಕ್ಕೆ ಅಂಗೀಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.