ETV Bharat / state

ನವೆಂಬರ್, ಡಿಸೆಂಬರ್​​ನಲ್ಲಿ ನಭಕ್ಕೆ ಪುನೀತ್ ಉಪಗ್ರಹ

author img

By

Published : Aug 25, 2022, 10:19 PM IST

Etv Bharatನವೆಂಬರ್/ಡಿಸೆಂಬರ್​​ನಲ್ಲಿ ನಭಕ್ಕೆ ಪುನೀತ್ ಉಪಗ್ರಹ
Etv Bharatನವೆಂಬರ್/ಡಿಸೆಂಬರ್​​ನಲ್ಲಿ ನಭಕ್ಕೆ ಪುನೀತ್ ಉಪಗ್ರಹ

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ಪುನೀತ್ ಉಪಗ್ರಹ ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಆಗಲಿದೆ.

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ಪುನೀತ್ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು ಎಂದರು.

ಸ್ಪರ್ಧೆಯ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್‌ಲೈನ್‌ ರಸಪ್ರಶ್ನೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.

ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಈ ಪೈಕಿ, ಬೆಂಗಳೂರು ವಲಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು 'ಕೆಜಿಎಸ್3ಸ್ಯಾಟ್' ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದು, ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಇವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ಅವರ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ ಎಂದು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಲದು. ಬದಲಿಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿಗಳ ಬಗ್ಗೆ ತಿಳಿದುಕೊಂಡು, ಸಂಭ್ರಮಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಹೀಗಾಗಿ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸ್ಪರ್ಧೆಯ ವಿವರ ಹೀಗಿದೆ:

  • ನೋಂದಣಿಗೆ ಕೊನೆ ದಿನ: ಸೆ.10
  • ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ: ಸೆ.19ರಿಂದ 23
  • ಪ್ರಬಂಧಗಳನ್ನು ಅಪ್‌ಲೋಡ್‌ ಮಾಡಲು ಕೊನೆ ದಿನ: ಸೆ.20
  • ಜಿಲ್ಲಾ ಮಟ್ಟದ ವಿಜ್ಞಾನ ಚಿತ್ರಕಲೆ ಸ್ಪರ್ಧೆ: ಸೆ.26ರಿಂದ 30
  • ವಿಭಾಗ ಮಟ್ಟದ ಪೋಸ್ಟರ್ ಸ್ಪರ್ಧೆ: ಅಕ್ಟೋಬರ್ 3ರಿಂದ 7
  • ಜಿಲ್ಲಾ ಮಟ್ಟದ ಫಲಿತಾಂಶ ಪ್ರಕಟಣೆ: ಅಕ್ಟೋಬರ್ ಮಧ್ಯ ಭಾಗ
  • ರಾಜ್ಯ ಮಟ್ಟದ ಕ್ವಿಜ್‌: ಅ.17ರಿಂದ 19
  • ರಾಜ್ಯ ಮಟ್ಟದ ಪೋಸ್ಟರ್ ಸ್ಪರ್ಧೆ (ಆನ್‌ಲೈನ್‌): ಅ.18ರಿಂದ 20
  • ರಾಜ್ಯ ಮಟ್ಟದ ಫಲಿತಾಂಶ ಘೋಷಣೆ: ಅಕ್ಟೋಬರ್ ಕೊನೆಯ ವಾರ

ಇದನ್ನೂ ಓದಿ: ಕರ್ನಾಟಕ ಕಲಾಶ್ರೀ ವಾರ್ಷಿಕ ಪ್ರಶಸ್ತಿ ಪ್ರಕಟ: 18 ಕಲಾವಿದರಿಗೆ ಗೌರವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.