ETV Bharat / state

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕು: ಸಿಎಂ

author img

By ETV Bharat Karnataka Team

Published : Jan 16, 2024, 7:10 PM IST

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ‌. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗಿಯಾದ ಬಳಿಕ ಅವರು ಮಾತನಾಡಿದರು.

ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ದಲಿತರ ವಿರುದ್ಧದ ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಕಡಿಮೆ ಇತ್ತು, ಈಗ ಸ್ವಲ್ಪ ಹೆಚ್ಚಿದೆ. ಆದರೆ ಆ ವಿಚಾರದಲ್ಲಿ ರಾಷ್ಟ್ರದ ಸರಾಸರಿಗಿಂತ ರಾಜ್ಯದಲ್ಲಿ ಹೆಚ್ಚಾಗಬೇಕು ಎಂದು ಸೂಚಿಸಿದ್ದೇನೆ.

ಕೆಲವೊಮ್ಮೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ವಿಳಂಬವಾಗುವುದೂ ಸಹ ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ಕಾರಣವಾಗುತ್ತದೆ. ಆದ್ದರಿಂದ 60 ದಿನದೊಳಗೆ ಪೊಲೀಸರು ದೋಷಾರೋಪಣೆ ಒಟ್ಟಿ ಸಲ್ಲಿಸಬೇಕು. ಅಗತ್ಯ ಇದ್ದಲ್ಲಿ ಕಾನೂನು ಸೌಲಭ್ಯಗಳನ್ನ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. ಅಲ್ಲದೇ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು.

ಈ ಸಂಧರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಉದ್ಯೋಗ ಸೃಷ್ಟಿ ಸುಲಭ: ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಆ ರಾಜ್ಯದ ಅಭಿವೃದ್ಧಿಯಾಗುತ್ತದೆ. ಅಭಿವೃದ್ಧಿಯಾದರೆ ಬಂಡವಾಳ ಹೂಡಿಕೆ ಹರಿದು ಬರುತ್ತದೆ. ಎಂದು ಅದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪೊಲೀಸರು ಜನಸಾಮಾನ್ಯರಿಗೆ ಸ್ಪಂದಿಸುವ ಹಾಗೂ ಜನಸ್ನೇಹಿಯಾಗಿರಬೇಕು. ಠಾಣೆಗೆ ಹೋಗುವವರಿಗೆ ಪೊಲೀಸರ ಮೇಲೆ ನಂಬಿಕೆ ಬರುವಂತಿರಬೇಕು. ಜತೆಗೆ ಗುಣಮಟ್ಟದ ತನಿಖೆಯಾದರೆ ಶಿಕ್ಷೆಯ ಪ್ರಮಾಣ ಕೂಡ ಹೆಚ್ಚಾಗುತ್ತದೆ. ಎಲ್ಲೆಲ್ಲಿ ಲೋಪಗಳಿವೆ ಅದನ್ನ ಸರಿಪಡಿಸಿಕೊಳ್ಳಬೇಕು. ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಹಾಗೆ ಮಾಡಬೇಡಿ ಎಂದು ಇದೇ ವೇಳೆ, ಸಿಎಂ ತಿಳಿಸಿದರು.

ಇದನ್ನೂ ಓದಿ: ಆಧುನಿಕ ತಂತ್ರಜ್ಞಾನ ಆಧಾರಿತ ಉಪಕರಣಗಳನ್ನ ಬಳಸಿ ಅಪರಾಧಿಗಳಿಗೆ ಶಿಕ್ಷಿಸುವ ಕೆಲಸವಾಗಬೇಕು: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.