ETV Bharat / state

ಮಂಡ್ಯ ಉಸ್ತುವಾರಿ ಸ್ಥಾನದಿಂದ ಆರ್.ಅಶೋಕ್‌ ಬಿಡುಗಡೆ: ಸಿಎಂ ಬೊಮ್ಮಾಯಿ

author img

By

Published : Feb 10, 2023, 4:28 PM IST

Updated : Feb 10, 2023, 5:01 PM IST

ಆರ್ ಅಶೋಕ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ
ಆರ್ ಅಶೋಕ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ

ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತಗೊಳಿಸಬೇಕೆಂದು ಸಚಿವ ಆರ್. ಅಶೋಕ್ ಸಿಎಂಗೆ ಪತ್ರ ಬರೆದಿದ್ದರು.‌

ಬೆಂಗಳೂರು: ಕಾರ್ಯಭಾರದಿಂದಾಗಿ ಮಂಡ್ಯಕ್ಕೆ ಸಮಯ ನೀಡಲಾಗುತ್ತಿಲ್ಲ. ಹಾಗಾಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ವಿಮುಕ್ತಗೊಳಿಸಿ ಎಂದು ಕಂದಾಯ ಸಚಿವ ಆರ್.ಅಶೋಕ್ ಪತ್ರದ ಮೂಲಕ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿಯಿಂದ ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಅಶೋಕ್ ಪತ್ರ ಬರೆದು ಈಗಾಗಲೇ ದಾವಣಗೆರೆಯಲ್ಲಿ ಹಕ್ಕು ಪತ್ರ ನೀಡುವ ಕೆಲಸ, ಗ್ರಾಮ ವಾಸ್ತವ್ಯ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಅವರು ಮಂಡ್ಯ ಜಿಲ್ಲೆಯ ಉಸ್ತುವಾರಿಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಹೀಗಾಗಿ ಉಸ್ತುವಾರಿಯಿಂದ ಅವರನ್ನು ಕೈಬಿಡಲಾಗಿದೆ ಎಂದರು.

ಇದೇ ವೇಳೆ, ಸರ್ಕಾರದ ಯೋಜನೆಗಳು ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೆ ಮುಟ್ಟಬೇಕೆಂಬ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಅಭಿಯಾನ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಮೇಲೆ ಬಹಳಷ್ಟು ಪಾರದರ್ಶಕತೆ ಸಾಧ್ಯವಾಗಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ನೇರವಾಗಿ ಮುಟ್ಟಿಸಲು ಡಿಬಿಟಿ ವ್ಯವಸ್ಥೆಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಿದ್ದು, ಜನರು ಕಚೇರಿಗಳಿಗೆ ಒಡಾಡುವುದನ್ನು ತಪ್ಪಿಸಲಾಗಿದೆ. ಪಿಎಂ ಸ್ವನಿಧಿ, ರೈತ ವಿದ್ಯಾ ನಿಧಿ, ರೈತ ಶಕ್ತಿ ಯೋಜನೆಗಳು ಡಿಬಿಟಿ ಮುಖಾಂತರವಾಗಿ ಪಾವತಿಯಾಗುತ್ತಿದೆ. ಈ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಫಲಾನುಭವಿಗಳಿಗೆ ನೇರವಾಗಿ ಮುಟ್ಟಲು ಹಾಗೂ ಸೌಲಭ್ಯ ವಂಚಿತರಾದವರಿಗೆ ಕಾರ್ಯಕ್ರಮ ಮುಟ್ಟಿಸಲು ಕೂಡಲೇ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸ್ತ್ರೀ ಶಕ್ತಿ, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ, ಅಮೃತ ಯೋಜನೆಗಳನ್ನು ಜಾರಿಗೆ ತರಬೇಕಿದ್ದು, ಇದಕ್ಕೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಬಾಕಿ ಇರುವ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸವಾಗಬೇಕು. ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನ ಕೈಗೊಂಡು ಒಂದು ಸಮ್ಮೇಳನ ಮಾಡುವ ಮುಖಾಂತರ ಯೋಜನೆಗಳನ್ನು ಮುಟ್ಟಿಸಲಾಗುವುದು. ಇದರಿಂದ ಅತ್ಯಂತ ತಳಸ್ತರದಲ್ಲಿರುವ ಜನರಿಗೆ ಮಾಹಿತಿ ತಲುಪಿದಂತಾಗುತ್ತದೆ ಎಂದು ಸಿಎಂ ಹೇಳಿದರು.

ಆರ್. ಅಶೋಕ್ ಪತ್ರದಲ್ಲೇನಿದೆ?: ಮಂಡ್ಯ ಉಸ್ತುವಾರಿ ಬೇಡ ಎನ್ನಲು ಸಚಿವ ಆರ್.ಅಶೋಕ್ ಐದು ಕಾರಣ ಕೊಟ್ಟಿದ್ದಾರೆ. ಮುಂದಿನ 30 ದಿನಗಳಲ್ಲಿ ದಾವಣಗೆರೆಯಲ್ಲಿ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಕೊಡಬೇಕಿದೆ. ಬಡವರು ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಿ, 94ಸಿ ಮತ್ತು 94ಸಿಸಿ ರಡಿಯಲ್ಲಿ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿದ ಸುಮಾರು 10,000 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿ ನಡೆಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕಂದಾಯ ಇಲಾಖೆ ಪ್ರಾರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಸರ್ಕಾರದ ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ. ಪಕ್ಷದ ಶಾಸಕರು ಅವರ ಕ್ಷೇತ್ರದಲ್ಲಿ ನಾನು ವಾಸ್ತವ್ಯ ಹೂಡಬೇಕೆಂದು ಒತ್ತಡ ಹೇರುತ್ತಿದ್ದು, ಇನ್ನೂ ಕನಿಷ್ಠ 2-3 ಜಿಲ್ಲೆಗಳಲ್ಲಿ ನಾನು ಗ್ರಾಮ ವಾಸ್ತವ್ಯ ಮಾಡಬೇಕಿರುತ್ತದೆ. ವಿಧಾನಸೌಧದ ಹೊರ ಆವರಣದ ಪೂರ್ವದಿಕ್ಕಿನ ಜಾಗದಲ್ಲಿ ಜಗಜ್ಯೋತಿ ಬಸವೇಶ್ವರರ ಹಾಗೂ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪಿಸುವ ಸಲುವಾಗಿ ರಚಿಸಿರುವ ಉಸ್ತುವಾರಿ ಸಮಿತಿಗೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ.

ಸದರಿ ಕಾರ್ಯವನ್ನು 30 ದಿನಗಳಲ್ಲಿ ಪೂರ್ಣಗೊಳಿಸಿ ಪುತ್ಥಳಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಬೇಕಾಗಿರುತ್ತದೆ. 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿಗೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಿಸಿದ್ದು, ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಯಶಸ್ವಿಯಾಗಿ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವಿಕೇಂದ್ರೀಕರಣಕ್ಕೆ ಶಿಫಾರಸು: ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗದ ವರದಿ

Last Updated :Feb 10, 2023, 5:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.