ಗ್ರಾಮೀಣ ಸೇವೆಯಡಿ 4 ಸಾವಿರ ವೈದ್ಯರ ನೇಮಕ : ಸಚಿವ ಸುಧಾಕರ್

author img

By

Published : Sep 22, 2022, 7:31 PM IST

recruitment-of-4-thousand-doctors-under-rural-service

ರಾಜ್ಯದಲ್ಲಿ ಗ್ರಾಮೀಣ ಸೇವೆಯಡಿಯಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಕೆ ಸುಧಾಕರ್ ವಿಧಾನಸಭೆಯಲ್ಲಿ ತಿಳಿಸಿದರು.

ಬೆಂಗಳೂರು : ರಾಜ್ಯದಲ್ಲಿ ಕಡ್ಡಾಯ ಗ್ರಾಮೀಣ ಸೇವೆಯಡಿಯಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ತಾಲೂಕು ಆಸ್ಪತ್ರೆಗಳಲ್ಲಿ ಕೊರತೆಯಿರುವ ತಜ್ಞ ವೈದ್ಯರನ್ನು ನೇಮಕ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಕೆ ಸುಧಾಕರ್ ವಿಧಾನಸಭೆಯಲ್ಲಿ ತಿಳಿಸಿದರು.

4 ಸಾವಿರ ವೈದ್ಯರ ನೇಮಕಾತಿ : ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಯು. ರಾಜೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೇಮಕಗೊಂಡ ವೈದ್ಯರನ್ನು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯೋಜನೆ ಮಾಡಲಾಗುತ್ತದೆ. ಕೊರತೆಯಿರುವ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ನಿಯೋಜಿಸಲಾಗುವುದು ಎಂದರು. ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞರ ಹುದ್ದೆ ಖಾಲಿಯಿದ್ದು, ಅನ್ಯತಾ ಸೇವೆ ಮೇಲೆ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ 400 ಫಾರ್ಮಾಸಿಸ್ಟ್, 150 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 8 ಕ್ಷ-ಕಿರಣ ತಂತ್ರಜ್ಞರ ಹುದ್ದೆಗಳನ್ನು ಭರ್ತಿ ಮಾಡಲು ಸೆ.7ರಂದು ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು.

ಚನ್ನರಾಯಪಟ್ಟಣದಲ್ಲಿ ತಾಯಿ ಮಗು ಆಸ್ಪತ್ರೆ : ಚನ್ನರಾಯಪಟ್ಟಣ ತಾಲೂಕಿನಲ್ಲಿ ತಾಯಿ-ಮಗು ಆಸ್ಪತ್ರೆ ಆರಂಭಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಅವಕಾಶವಿಲ್ಲ. ರಾಜ್ಯ ಸರ್ಕಾರದ ಅನುದಾನದಿಂದ ತಾಯಿ-ಮಗು ಆಸ್ಪತ್ರೆ ನಿರ್ಮಾಣದ ಬಗ್ಗೆ ಆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲನೆ ಆಗದಿದ್ದರೆ ಅನುದಾನ ದೊರೆಯುವುದಿಲ್ಲ. ಚನ್ನರಾಯಪಟ್ಟಣ ತಾಲೂಕಿನಲ್ಲಿ 30 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆ ನಿರ್ಮಾಣ ಕಾಮಗಾರಿಯ 13 ಕೋಟಿ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆಗಾಗಿ ಸ್ವೀಕೃತವಾಗಿದೆ ಎಂದು ಹೇಳಿದರು.

ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ : ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಬಿಗ್ಗೆವಾಡಿ ಹಾಗೂ ಬೆಡವಾಡ ಗ್ರಾಮಗಳಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಐಹೊಳೆ ಡಿ.ಮಹಲಿಗಪ್ಪ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಯಭಾಗ ತಾಲೂಕು ಆಸ್ಪತ್ರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.

100 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ: ರಾಜ್ಯದಲ್ಲಿ ಈ ವರ್ಷ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆ ಬಿಜೆಪಿಯ ಭರತ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಪ್ರಸ್ತುತ 800 ಆರೋಗ್ಯ ಕೇಂದ್ರಗಳು ಇವೆ. ಹೊಸದಾಗಿ ಪಿಎಚ್‌ಸಿಗಳನ್ನು ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪುತ್ತಿಲ್ಲ. ಈ ಹಿಂದೆ ಪಿಎಚ್‌ಸಿಗಳನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಪ್ರಾದೇಶಿಕ ಅಸಮತೋಲನವಾಗಿದೆ. ಅದರಂತೆ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಿಎಚ್‌ಸಿಗಳ ಅವಶ್ಯಕತೆ ಹೆಚ್ಚಿದೆ. ಈ ಭಾಗದಲ್ಲಿ 107 ಪಿಎಚ್‌ಸಿಗಳ ಕೊರತೆ ಇದೆ ಎಂದರು.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 100 ಪಿಎಚ್‌ಸಿಗಳನ್ನು ಮೇಲ್ದರ್ಜೆಗೇರಿಸುವ ಘೋಷಣೆ ಮಾಡಿದ್ದಾರೆ. ಅದರಂತೆ 100 ಪಿಎಚ್‌ಸಿಗಳನ್ನು ಈ ವರ್ಷ ಮೇಲ್ದರ್ಜೆಗೇರಿಸಲಾಗುವುದು ಎಂದರು.

ಇದಕ್ಕೂ ಮೊದಲು ಪ್ರಶ್ನೆ ಕೇಳಿದ ಎ.ಎಸ್. ಪಾಟೀಲ್ ನಡಹಳ್ಳಿ ಅವರು ಸಚಿವರು ಹೊಸ ಪಿಎಚ್‌ಸಿಗಳ ಆರಂಭಕ್ಕೆ ಇಂತಿಷ್ಟು ಜನಸಂಖ್ಯೆ ಇರಬೇಕು ಎಂದು ಹೇಳುತ್ತಿದ್ದಾರೆ. ಆದರೆ ಹಳೇ ಮೈಸೂರು ಭಾಗದಲ್ಲಿ ರಾಜಕೀಯ ಪ್ರಭಾವದಿಂದ ಹೆಚ್ಚು ಪಿಎಚ್‌ಸಿಗಳಿವೆ. ಉತ್ತರ ಕರ್ನಾಟಕದಲ್ಲಿ ಪಿಎಚ್‌ಸಿಗಳ ಕೊರತೆಯಿದೆ. ಈ ಭಾಗಕ್ಕೂ ಹೆಚ್ಚು ಪಿಎಚ್‌ಸಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಹಾನಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಮಸ್ಯೆ : ಹಾನಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಮಸ್ಯೆಯಿಂದಾಗಿ ರೋಗಿಗಳಿಗೆ ವ್ಯಾಪಕ ಸಮಸ್ಯೆಯಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಸರ್ಕಾರದ ಗಮನ ಸೆಳೆದರು. ಹಾನಗಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳು ಕೈಕೊಟ್ಟಿರುವುದರಿಂದ ಬಡ ರೋಗಿಗಳು ಶಿರಸಿ ಅಥವಾ ಹುಬ್ಬಳ್ಳಿ ಆಸ್ಪತ್ರೆಗೆ ಹೋಗುವುದು ಅನಿವಾರ್ಯವಾಗಿದೆ. ಬೇರೆ ಊರಿಗೆ ಹೋಗಲಾರದ ರೋಗಿಗಳು ಪ್ರಾಣ ಕಳೆದುಕೊಳ್ಳುವಂತಾಗಿದೆ. ಅಲ್ಲದೇ ಶಿರಸಿ ಮತ್ತು ಹುಬ್ಬಳ್ಳಿ ಆಸ್ಪತ್ರೆಗಳಲ್ಲೂ ರೋಗಿಗಳ ಒತ್ತಡ ಇರುವುದರಿಂದ ಇಲ್ಲಿನ ರೋಗಿಗಳಿಗೆ ಚಿಕಿತ್ಸೆ ದೊರೆಯುವುದು ಕಷ್ಟವಾಗಿದೆ ಎಂದು ಹೇಳಿದರು.

ಹಾನಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿ ಕಾವಲುಗಾರರಿಗೆ ಸೂಕ್ತ ಸಂಭಾವನೆ ನೀಡದೇ ಇರುವುದರಿಂದ, ಮಹಿಳಾ ವೈದ್ಯರು ರಾತ್ರಿ ವೇಳೆ ಚಿಕಿತ್ಸೆ ನೀಡುವುದಕ್ಕೆ ತುಂಬ ತೊಂದರೆಯಾಗುತ್ತಿದೆ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು, ಇನ್ನೊಂದು ವಾರದಲ್ಲಿ ಡಯಾಲಿಸಿಸ್ ಯಂತ್ರಗಳನ್ನು ಸುಸ್ಥಿತಿಗೆ ತರುವ ಕ್ರಮ ತೆಗೆದುಕೊಳ್ಳಲಾಗುತ್ತದೆ' ಎಂದು ಭರವಸೆ ನೀಡಿದರು.

ಐಟಿಐ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ಬಗ್ಗೆ ಪರಿಶೀಲನೆ : ಮುಂದಿನ ದಿನಗಳಲ್ಲಿ ಕೆಪಿಟಿಸಿಎಲ್‌ನಲ್ಲಿ ಸಹಾಯಕ ಪವರ್ ಮ್ಯಾನ್, ಸ್ಟೇಷನ್ ಅಟೆಂಡೆಂಟ್, ಹೆಲ್ಪರ್ ಮತ್ತಿತರ ಹುದ್ದೆಗಳನ್ನು ತುಂಬುವಾಗ ಐಟಿಐ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನೀಲ್‌ಕುಮಾರ್ ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ರಮೇಶ್ ಬೂಸನೂರು ಅವರ ಪ್ರಶ್ನೆಗೆ ಉತ್ತರಿಸಿದರು.

2015 ರಲ್ಲಿ 281 ಜನರನ್ನು ನೇಮಕಾತಿ ಮಾಡಿಕೊಂಡ ಸಂದರ್ಭದಲ್ಲಿ ಐಟಿಐ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲೂ ಇದನ್ನು ಗಮನದಲ್ಲಿಟ್ಟುಕೊಂಡು ನೇಮಕಾತಿಗಳನ್ನು ಮಾಡಿ, ಐಟಿಐ ವಿದ್ಯಾರ್ಹತೆ ಹೊಂದಿರುವವರಿಗೂ ನ್ಯಾಯ ಒದಗಿಸುವುದಾಗಿ ಹೇಳಿದರು.

ಈ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಶೇ. 50 ರಷ್ಟು ಹುದ್ದೆಗಳನ್ನು ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗುವುದು. ಸದ್ಯಕ್ಕೆ ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು.

ಇದನ್ನೂ ಓದಿ : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ: ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ, ಕಾಯ್ದೆ ಉಲ್ಲಂಘಿಸಿದ್ರೆ ದಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.