ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸೆ.10ರ ಒಳಗೆ ಚುನಾವಣೆ ನಡೆಸಬೇಕಿದ್ದು, ಮೀಸಲು ಪಟ್ಟಿ ನೀಡದ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಏ.1ರ ಒಳಗೆ ಪಟ್ಟಿ ನೀಡುವಂತೆ ತಾಕೀತು ಕೂಡ ಮಾಡಿದೆ. ಪಾಲಿಕೆಗೆ ಚುನಾವಣೆ ಹತ್ತಿರವಾಗುತ್ತಿದ್ದರೂ ಮೀಸಲು ಕ್ಷೇತ್ರ ಮತ್ತು ವಾರ್ಡ್ ಮರು ವಿಂಗಡನೆ ಕ್ಷೇತ್ರಗಳ ಪಟ್ಟಿ ಒದಗಿಸಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಸಲ್ಲಿಸಿರುವ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲ ಶ್ರೀನಿಧಿ ಪೀಠಕ್ಕೆ ಮಾಹಿತಿ ನೀಡಿ, ಮಾರ್ಚ್ 3ರಂದು ವಾರ್ಡ್ ಮರುವಿಂಗಡಣೆ ಕರಡು ಅಧಿಸೂಚನೆ ಪ್ರಕಟಿಸಿದ್ದು, ಸಾರ್ವಜನಿಕ ಆಕ್ಷೇಪಣೆ ಆಹ್ವಾನಿಸಲಾಗಿದೆ. ಇದಕ್ಕೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ಪ್ರಕ್ರಿಯೆ ಪೂರ್ಣಗೊಳ್ಳುತ್ತಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಇನ್ನು ಕ್ಷೇತ್ರ ಮೀಸಲು ಪಟ್ಟಿ ಸಿದ್ದಪಡಿಸುವ ಕೆಲಸ ಚಾಲ್ತಿಯಲ್ಲಿದೆ. ಅದನ್ನು ಕೂಡಲೇ ಅಂತಿಮಗೊಳಿಸಲಾಗುವುದು ಎಂದು ವಿವರಿಸಿದರು.
ಸರ್ಕಾರಿ ವಕೀಲರ ಹೇಳಿಕೆ ದಾಖಲಿಸಿಕೊಂಡ ಪೀಠವು, ಮೀಸಲು ಪಟ್ಟಿ ನೀಡುವ ಕುರಿತು ಕಾಲಮಿತಿ ನಿಗದಿಪಡಿಸಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತು. ಏಪ್ರಿಲ್ 1ರೊಳಗೆ ಮೀಸಲಾತಿ ಪಟ್ಟಿ ನೀಡಲು ತಾಕೀತು ಮಾಡಿ, ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿತು.