ETV Bharat / state

ನಿವೃತ್ತ ಐಎಎಸ್ ಅಧಿಕಾರಿ ಮನೆಯಿಂದ ವಶಪಡಿಸಿಕೊಂಡಿದ್ದ ಹಣ ಹಿಂದಿರುಗಿಸಿ : ಹೈಕೋರ್ಟ್ ಆದೇಶ

author img

By

Published : Feb 7, 2023, 6:49 AM IST

ಲೋಕಾಯುಕ್ತ ದಾಳಿ ಪ್ರಕರಣ - ನಿವೃತ್ತ ಐಎಎಸ್​ ಅಧಿಕಾರಿ ಮನೆಯಿಂದ ವಶಪಡಿಸಿಕೊಂಡ ಹಣ ವಾಪಸ್​ ನೀಡಿ- ಹೈಕೋರ್ಟ್​ ಆದೇಶ

High Court order
ಹೈಕೋರ್ಟ್ ಆದೇಶ

ಬೆಂಗಳೂರು : ಭ್ರಷ್ಟಾಚಾರ ಆರೋಪ ಸಂಬಂಧ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿವೃತ್ತ ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 12.15 ಲಕ್ಷ ರೂ .ಗಳನ್ನು ಹಿಂದಿರುಗಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಪ್ರಸ್ತುತ ಸೇವೆಯಿಂದ ನಿವೃತ್ತರಾಗಿರುವ 67ವರ್ಷದ ಶಿವಲಿಂಗ ಮೂರ್ತಿ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಜೊತೆಗೆ ಅರ್ಜಿದಾರರಿಂದ ವಶಪಡಿಸಿಕೊಂಡ ಹಣ ಆದಾಯಕ್ಕೂ ಮೀರಿದ್ದಾಗಿದೆ ಎಂದು ಸಾಬೀತು ಪಡಿಸಲು ಲೋಕಾಯುಕ್ತ ಪೊಲೀಸರು ಯಾವುದೇ ತನಿಖೆ ನಡೆಸಿಲ್ಲ. ಹೀಗಾಗಿ ಅರ್ಜಿದಾರರಿಗೆ ಸೇರಬೇಕಾದ 12.15 ಲಕ್ಷ ಮೊತ್ತವನ್ನು ಹಿಂದಿರುಗಿಸಬೇಕು ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ. ಈ ನಡುವೆ ಅರ್ಜಿದಾರರು ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದು, ಅವರ ವಿರುದ್ಧ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರವಾದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ, ಯಾವುದೇ ರೀತಿಯ ಮನವಿಯನ್ನು ಅಂಗೀಕರಿಸಿರಲಿಲ್ಲ.

ಪ್ರಕರಣದ ಹಿನ್ನೆಲೆ ಏನು ?: 2003ರಲ್ಲಿ ಐಟಿಐ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸುವುದಕ್ಕಾಗಿ ವಿದ್ಯಾರ್ಥಿಗಳು ಮತ್ತು ಐಟಿಐ ಕಾಲೇಜುಗಳಿಂದ ಲಂಚ ಪಡೆದು, ಅವ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಅಲ್ಲದೆ, ಆವರಣದಲ್ಲಿ ಇಬ್ಬರು ಖಾಸಗಿ ವ್ಯಕ್ತಿಗಳು ಅರ್ಜಿದಾರರ ಪರವಾಗಿ ಹಣ ಸ್ವೀಕರಿಸುತ್ತಿರುವುದಾಗಿ ತಿಳಿದು 7 ಲಕ್ಷ ರೂ.ಗಳನ್ನು ವಶಕ್ಕೆ ಪಡೆದಿದ್ದರು.

ಅಷ್ಟೇ ಅಲ್ಲದೆ, ಅದೇ ಸಂದರ್ಭದಲ್ಲಿ ಅರ್ಜಿದಾರರ ಮನೆ ಮೇಲೆ ದಾಳಿ ನಡೆಸಿ ಆದಾಯ ಮೀರಿ ಆಸ್ತಿ ಹೊಂದಿರುವುದಾಗಿ ಆರೋಪಿಸಿ 12.15 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಆರೋಪ ಪಟ್ಟಿಯನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಬಳಿಕ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಷೇಶ ನ್ಯಾಯಾಲಯ ಅರ್ಜಿದಾರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲ ಆರೋಪಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಆದರೆ ಅರ್ಜಿದಾರರ ಮನೆಯಿಂದ ವಶ ಪಡಿಸಿಕೊಂಡಿದ್ದ 12.15 ಲಕ್ಷ ರೂ.ಗಳ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ಮಾಡಿರಲಿಲ್ಲ.

ಅರ್ಜಿದಾರರನ್ನು ಖುಲಾಸೆಗೊಳಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಮೇಲ್ಮನವಿ ಸಲ್ಲಿಸಿದ್ದರು. ಇದೇ ಸಂದರ್ಭದಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ದು, ತಮ್ಮಿಂದ ವಶಪಡಿಸಿಕೊಂಡ ಹಣವನ್ನು ಹಿಂದಿರುಗಿಸಬೇಕು ಎಂದು ಕೋರಿ ಅರ್ಜಿದಾರ ಶಿವಲಿಂಗ ಮೂರ್ತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ :ವಿಚ್ಛೇದಿತ ಪತ್ನಿಯ ಸುಪರ್ದಿಯಲ್ಲಿರುವ ಎರಡನೇ ಮಗ: ವಿದ್ಯಾಭ್ಯಾಸಕ್ಕಾಗಿ 40 ಲಕ್ಷ ಜೀವನಾಂಶ ನೀಡುವಂತೆ ಹೈಕೋರ್ಟ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.