ETV Bharat / state

ಮಾರ್ಚ್ 1ರಿಂದ ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

author img

By

Published : Feb 27, 2023, 9:51 PM IST

Etv BharatSatyagraha by March 1 from transport workers
ಮಾರ್ಚ್ 1ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಚಂದ್ರಶೇಖರ್

ರಾಜ್ಯ ಸರ್ಕಾರ ತನ್ನ ಕೊನೆಯ ಬಜೆಟ್‌ನಲ್ಲಿ ಬೇಡಿಕೆ ಈಡೇರಿಸದೇ ಸಾರಿಗೆ ಸಂಸ್ಥೆಯ ನೌಕರರಿಗೆ ನಿರಾಸೆ ಉಂಟುಮಾಡಿದೆ ಎಂದು ಆರ್.ಚಂದ್ರಶೇಖರ್ ಹೇಳಿದರು.

ಬೆಂಗಳೂರು: ಸಾರಿಗೆ ನೌಕರರಿಗೆ ನೀಡಿದ್ದ ಲಿಖಿತ ಭರವಸೆಯನ್ನು ಪ್ರಸ್ತುತ ಬಜೆಟ್‌ ಅಧಿವೇಶನದಲ್ಲಿ ಈಡೇರಿಸಿದೇ ಭಾರಿ ನಿರಾಸೆ ಉಂಟು ಮಾಡಿದ್ದಾರೆ ಎಂದು ಸಾರಿಗೆ ನೌಕರರು ಮತ್ತು ಕುಟುಂಬಸ್ಥರು ಮಾರ್ಚ್ 1ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯ ಘಟಕದ ಅಧ್ಯಕ್ಷ ಆರ್.ಚಂದ್ರಶೇಖರ್ ತಿಳಿಸಿದರು.

ಸೋಮವಾರ ಪ್ರೆಸ್ ಕ್ಲಬ್​ನಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಲಕ್ಷ್ಮಣ್ ಸವದಿ ಸಾರಿಗೆ ಸಚಿವ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಸಂಧಾನ ಸಭೆಯಲ್ಲಿ ಸರ್ಕಾರಿ ಸಾರಿಗೆ ನೌಕರರಿಗೂ 6ನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಜೊತೆಗೆ ಮೂರು ತಿಂಗಳೊಳಗೆ ಈಡೇರಿಸುವುದಾಗಿಯೂ ತಿಳಿಸಿದ್ದರು ಎಂದರು.

ಕೆಲವು ತಿಂಗಳ ಹಿಂದೆ ಪ್ರಸ್ತುತ ಸಾರಿಗೆ ಸಚಿವ ಶ್ರೀರಾಮುಲು ಕೂಡಾ ಬಹಿರಂಗ ಸಭೆಯಲ್ಲಿ ಸಾರಿಗೆ ನೌಕರರನ್ನು 7ನೇ ವೇತನ ಆಯೋಗದಲ್ಲಿ ಸೇರ್ಪಡೆ ಮಾಡುವುದು ನನ್ನ ಜವಾಬ್ದಾರಿ ಎಂದು ತಿಳಿಸಿದ್ದರು. ಆದರೂ, ಸರ್ಕಾರದ ಕೊನೆಯ ಬಜೆಟ್‌ನಲ್ಲಿಯೂ ಬೇಡಿಕೆಯನ್ನು ಈಡೇರಿಸದೇ ಸಾರಿಗೆ ಸಂಸ್ಥೆಯ 1.07 ಲಕ್ಷ ಸಾರಿಗೆ ನೌಕರರಿಗೆ ನಿರಾಸೆ ಉಂಟುಮಾಡಿದೆ ಎಂದು ಹೇಳಿದರು.

ಸಾರಿಗೆ ನೌಕರರ ಮೇಲೆ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ, ವೇತನ ಆಯೋಗದ ಮಾದರಿಯಲ್ಲಿ ಸರಿ ಸಮಾನ ವೇತನ, ಸಾರಿಗೆ ನಿಗಮಗಳಲ್ಲಿ ಕೂಡಲೇ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು, ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ನಗರ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.

ಮುಷ್ಕರದ ಸಮಯದಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ನೌಕರರಿಗೆ ಆಗಿರುವ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಿ ಯಥಾಸ್ಥಿತಿ ಕಾಪಾಡಬೇಕು. ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನ ನೀಡಬೇಕು ಎಂದು ತಮ್ಮ ಬೇಡಿಕೆಗಳನ್ನು ಸರ್ಕಾರದ ಮಂದಿಟ್ಟರು. ಈ ವೇಳೆ ಸಾರಿಗೆ ವರ್ಕರ್ಸ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಎನ್.ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಎರಡು ಪ್ರಕರಣಗಳಲ್ಲಿ ಶಿಕ್ಷೆಯಾದಲ್ಲಿ ಒಂದೇ ಅವಧಿಯಲ್ಲಿ ಅನುಭವಿಸಬೇಕು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.