ETV Bharat / state

ಅರೆಬೆಂದ 'ಶಕ್ತಿ' ಯೋಜನೆ ಖಾಸಗಿ ಸಂಚಾರ ವ್ಯವಸ್ಥೆಯನ್ನೇ ಬುಡಮೇಲಾಗಿಸಿದೆ: ಹೆಚ್​ಡಿಕೆ ಆಕ್ರೋಶ

author img

By ETV Bharat Karnataka Team

Published : Sep 11, 2023, 12:29 PM IST

Updated : Sep 11, 2023, 12:51 PM IST

H D Kumaraswamy: ಖಾಸಗಿ ಸಾರಿಗೆಯವರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಮಾನವೀಯತೆಯಿಂದ ಪರಿಶೀಲಿಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

Former C M H D Kumaraswamy
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ 'ಅಡ್ಡ ಪರಿಣಾಮ'ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ 'ಶಕ್ತಿ' ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡ ಮೇಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು X ಖಾತೆಯಲ್ಲಿ (ಹಿಂದಿನ ಟ್ವಿಟ್ಟರ್​) ಸರಣಿಯಾಗಿ ಸಮಸ್ಯೆಗಳನ್ನು ಬರೆದಿರುವ ಅವರು, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರ್ಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರಾಜ್ಯ @INCKarnataka ಸರಕಾರದ ಗ್ಯಾರಂಟಿಗಳ 'ಅಡ್ಡ ಪರಿಣಾಮ'ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ 'ಶಕ್ತಿ' ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ.1/5#ಬದುಕಿಗೆ_ಗ್ಯಾರಂಟಿ_ಕೊಡಿ

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 11, 2023 " class="align-text-top noRightClick twitterSection" data=" ">

ಈ ಬಂದ್​ನಿಂದ ಸರ್ಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ. ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್​ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ಹೆಚ್​ಡಿಕೆ ಹೇಳಿದ್ದಾರೆ.

ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, 'ಗ್ಯಾರಂಟಿ ಬಾಧಿತರ' ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ. ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ವಿರುದ್ಧ ಅಸಮಾಧಾನಗೊಂಡಿರುವ ಖಾಸಗಿ ಸಾರಿಗೆ ವ್ಯವಸ್ಥೆ, ಖಾಸಗಿ ವಾಹನ ಚಾಲಕರಿಗೆ ಪ್ರತಿ ತಿಂಗಳು ₹10 ಸಾವಿರ ಧನಸಹಾಯ, ರಸ್ತೆ ತೆರಿಗೆ ರದ್ದು ಹಾಗೂ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಬಂದ್​ ನಡೆಸುತ್ತಿದೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೆ ಖಾಸಗಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಇಂದು ಬೆಂಗಳೂರಿನಲ್ಲಿ ಆಟೋ, ಟ್ಯಾಕ್ಸಿ, ಗೂಡ್ಸ್​ ವಾಹನಗಳು, ಖಾಸಗಿ ಶಾಲಾ ಬಸ್​ಗಳು, ಕಾರ್ಪೋರೇಟ್​ ಕಂಪೆನಿ ಬಸ್​ಗಳು, ಖಾಸಗಿ ಬಸ್​ಗಳು ಸಂಚಾರ ನಿಲ್ಲಿಸಿವೆ. ಇದರಿಂದ ಜನರು ಸಮಸ್ಯೆ ಎದುರಿಸಬಾರದು ಎನ್ನುವ ದೃಷ್ಟಿಯಿಂದ ಬಿಎಂಟಿಸಿ ನಗರದಲ್ಲಿ ಹೆಚ್ಚುವರಿ 500 ಬಸ್​ಗಳನ್ನು ಓಡಿಸುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್: ಸರ್ಕಾರದಿಂದ ಹೆಚ್ಚುವರಿ ಬಸ್ ವ್ಯವಸ್ಥೆ; ಹಲವೆಡೆ ಆಟೋ, ಕ್ಯಾಬ್ ಸಂಚಾರ

Last Updated :Sep 11, 2023, 12:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.