ETV Bharat / state

ಮಹಾಮಳೆಗೆ ಬೆಳೆ ಹಾನಿ : ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ

author img

By

Published : Oct 14, 2020, 6:31 PM IST

Siddaramaiah letter
ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ

ಕರ್ನಾಟಕದಲ್ಲಿ ವಿಪರೀತ ಮಳೆಯ ಕಾರಣ ಬೆಳೆಹಾನಿ ಉಂಟಾದ ಪರಿಣಾಮ ರೈತರ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಹೀಗಾಗಿ ತುರ್ತಾಗಿ ರಾಜ್ಯಸರ್ಕಾರ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಬೆಂಗಳೂರು:ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಸಾಕಷ್ಟು ಹಾನಿ ಸಂಭವಿಸಿದ್ದು, ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸರ್ಕಾರಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Siddaramaiah letter
ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ
Siddaramaiah letter
ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಕಳೆದ ವರ್ಷದ ಮಹಾಮಳೆಯ ಕಹಿ ನೆನಪುಗಳು ಮರೆಯಾಗುವ ಮೊದಲೇ ಈ ವರ್ಷ ಮತ್ತೆ ಆಗಸ್ಟ್ ತಿಂಗಳಿನಿಂದ ರಾಜ್ಯದ ಉದ್ದಗಲಕ್ಕೂ ಅತಿವೃಷ್ಟಿಯಾಗುತ್ತಿದೆ. ರಾಜ್ಯದ ಕಲ್ಯಾಣ ಕರ್ನಾಟಕದಲ್ಲಂತೂ ಕಳೆದ 50 ವರ್ಷಗಳಲ್ಲಿ ಬೀಳದಷ್ಟು ಮಳೆ ಈ ಬಾರಿ ಸುರಿದಿದೆ. ಹಾಗಾಗಿ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆದು ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿರುವ ಮೊತ್ತಕ್ಕಾದರೂ ರೈತರು ಬೆಳೆದ ಉತ್ಪನ್ನಗಳನ್ನು ಖರೀದಿ ಮಾಡಬೇಕು. ಜೊತೆಗೆ ಅತಿವೃಷ್ಟಿಯಿಂದಾಗಿ ಹಾನಿಯಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ ಅತ್ಯಂತ ತುರ್ತಾಗಿ ವಿಶೇಷ ಪ್ಯಾಕೇಜನ್ನು ಘೋಷಿಸಿ ಪರಿಹಾರ ನೀಡಿ ರೈತರ ನೆರವಿಗೆ ನಿಲ್ಲಬೇಕೆಂದು ಒತ್ತಾಯಿಸಿದ್ದಾರೆ.

Siddaramaiah letter
ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ
Siddaramaiah letter
ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ದರಾಮಯ್ಯ ಆಗ್ರಹ

ಬೆಳೆದ ಬೆಳೆ ಕೊಳೆತು ಹೋಗಿದೆ:
ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಮಳೆಯಾದರೆ ರೈತರ ಪಾಲಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆ. ಈ ವರ್ಷದ ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಹೆಸರು, ಉದ್ದು ಮುಂತಾದ ಬೆಳೆಗಳನ್ನು ಕೊಯ್ಲು ಮಾಡುವ ಸಂದರ್ಭದಲ್ಲಿ ವಿಪರೀತ ಮಳೆ ಸುರಿದು ಗಿಡದಲ್ಲೇ ಮೊಳಕೆ ಬಂದು ಕೊಳೆತು ಹೋದವು. ಈಗ ಈರುಳ್ಳಿ, ಶೇಂಗಾ, ಹತ್ತಿ, ಮೆಣಸಿನ ಕಾಯಿ, ರಾಗಿ, ಮುಸುಕಿನ ಜೋಳ, ಬಿಳಿ ಜೋಳ ಮುಂತಾದ ಬೆಳೆಗಳು ಸಹ ಹೊಲದಲ್ಲೇ ಕೊಳೆತು ಹೋಗುತ್ತಿವೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಧಾನವಾಗಿ ಬೆಳೆಯುವ ತೊಗರಿ ಹೂವು ಕಟ್ಟುವ ಸಮಯವಿದು. ಆಗಸ್ಟ್ ತಿಂಗಳಲ್ಲಿ ಬಿದ್ದ ಮಳೆಯಿಂದಾಗಿ ಕಲಬುರಗಿ ಜಿಲ್ಲೆ ಒಂದರಲ್ಲೇ ಸುಮಾರು 2 ಲಕ್ಷ ಹೆಕ್ಟೇರ್ ತೊಗರಿ ಹಾಳಾಗಿದೆ ಎಂದು ಸರ್ಕಾರವೇ ಅಂದಾಜು ಮಾಡಿದೆ. ವಾಡಿಕೆಗಿಂತ ಸುಮಾರು 250 ಮಿಲಿ ಮೀಟರ್​ಗೂ ಹೆಚ್ಚು ಮಳೆ ಈ ವರ್ಷ ಕಲಬುರಗಿ ಜಿಲ್ಲೆಯೊಂದರಲ್ಲೇ ಸುರಿದಿದೆ. ಇದೇ ಪರಿಸ್ಥಿತಿ ರಾಜ್ಯದ ಉಳಿದ ಜಿಲ್ಲೆಗಳಿಗೂ ಬಂದೊದಗಿದೆ. ದಕ್ಷಿಣ ಕರ್ನಾಟಕದ ಕಥೆಯೂ ಇದಕ್ಕಿಂತ ಭಿನ್ನವಾಗಿಲ್ಲ. ಅವರೆ, ರಾಗಿ, ಅಲಸಂದೆ, ಜೋಳ, ಶೇಂಗಾ ಮುಂತಾದ ಬೆಳೆಗಳು ನೆಲಕಚ್ಚಿ ಕೊಳೆತು ಹೋಗ ತೊಡಗಿವೆ ಎಂದು ವಿವರಿಸಿದ್ದಾರೆ.
ರಾಜ್ಯದ ಕಾಳಜಿ:
ಕರಾವಳಿ ಮತ್ತು ಮಲೆನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಅಡಿಕೆ ಬೆಳೆಗೆ ಹಳದಿ ಎಲೆ ರೋಗದ ಸಮಸ್ಯೆ ಕಾಡುತ್ತಿದೆ. ಕೊಳೆ ರೋಗದಿಂದಾಗಿ ಅಡಿಕೆ, ಮೆಣಸು, ಕಾಫಿ ಮುಂತಾದ ಬೆಳೆಗಳು ಮರ ಗಿಡಗಳಲ್ಲಿರುವುದಕ್ಕಿಂತ ನೆಲಕ್ಕೆ ಉದುರಿ ಕೊಳೆತು ಹೋಗಿರುವ ಪ್ರಮಾಣವೆ ಹೆಚ್ಚಾಗಿದೆ. ಬೆಳೆ ಕೈಗೆ ಬರುತ್ತಿರುವ ಹೊತ್ತಿನಲ್ಲಿ ಸುರಿಯುತ್ತಿರುವ ಮಳೆ ರೈತರನ್ನು ಕಂಗಾಲು ಮಾಡಿದೆ. ಹೈದರಾಬಾದ್ ಮತ್ತು ಮುಂಬೈ ಕರ್ನಾಟಕದ ಭಾಗಗಳಲ್ಲಿ ಬೆಳೆ ಜತೆಗೆ ಸ್ಥಿರಾಸ್ತಿಗಳು ಕೂಡ ನಾಶವಾಗಿವೆ. ಮನೆಗಳು ಉದುರಿ ಬಿದ್ದಿರುವ ಜನ-ಜಾನುವಾರುಗಳು ಮರಣ ಹೊಂದಿರುವ, ದವಸ-ಧಾನ್ಯ, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯಗಳು ದುರಂತದ ಪ್ರಮಾಣವನ್ನು ವಿವರಿಸುತ್ತಿವೆ. ತಗ್ಗಿನ ಪ್ರದೇಶಗಳಲ್ಲಿ ಬೆಳೆ ಜತೆಗೆ ಸ್ಥಿರಾಸ್ತಿಯನ್ನು ಕಳೆದುಕೊಂಡ ಬಡ ರೈತರು ಮತ್ತೆ ತಮ್ಮ ಕುಟುಂಬವನ್ನು ಕಟ್ಟಿ ನಿಲ್ಲಿಸಿಕೊಳ್ಳಲು ಐದಾರು ವರ್ಷಗಳೇ ಬೇಕಾಗಬಹುದು. ಪದೇ ಪದೇ ದುರಂತಗಳಿಗೆ ಬಲಿಯಾಗುತ್ತಿರುವ ರೈತರ ನೆರವಿಗೆ ಬರದ ಸರ್ಕಾರ ಅತ್ಯಂತ ಕ್ರೂರಿ ಸರ್ಕಾರವೆನ್ನಿಸಿಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಬಲ ಬೆಲೆ ನೀಡಿಲ್ಲ:
ಮುಖ್ಯಮಂತ್ರಿಗಳು ಈಗಾಗಲೇ ಈ ವರ್ಷ ಯಾವುದೇ ಬೆಳೆಗೆ ಬೆಂಬಲ ಬೆಲೆ ನೀಡುವುದಿಲ್ಲ, ಖರೀದಿ ಕೇಂದ್ರಗಳನ್ನು ತೆರೆಯುವುದಿಲ್ಲ, ಸಂಪನ್ಮೂಲಗಳ ಸಮಸ್ಯೆ ಇದೆ ಎಂದು ಹೇಳಿದ್ದಾರೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಹಾಗೆ ಹೇಳಲು ಕೇಂದ್ರ ಸರ್ಕಾರದ ನಿರ್ದೇಶನವಿದೆಯೇ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಈಗಾಗಲೇ ರಾಜ್ಯ ಸರ್ಕಾರ ಈ ವರ್ಷ ಒಂದರಲ್ಲೇ ಸುಮಾರು ರೂ.90,000 ಕೋಟಿಗಿಂತ ಹೆಚ್ಚು ಸಾಲ ಪಡೆಯಲು ತೀರ್ಮಾನಿಸಿದೆ. ಸರ್ಕಾರಿ ಆಸ್ತಿ-ಪಾಸ್ತಿಗಳನ್ನೂ ಹರಾಜು ಹಾಕುತ್ತಿದೆ. ಹಾಗೆ ನೋಡಿದರೆ ಆಸ್ತಿಗಳನ್ನು ಹರಾಜು ಹಾಕಿ ಪರಿಸ್ಥಿತಿಯನ್ನು ಸುಧಾರಿಸುವ ಅಗತ್ಯವೇನು ಇರಲಿಲ್ಲ. ಜಿಎಸ್​ಟಿ ಸಂಗ್ರಹದಲ್ಲಿ ಮಹಾರಾಷ್ಟ, ತಮಿಳುನಾಡುಗಳ ನಂತರ ರಾಜ್ಯ 3ನೇ ಸ್ಥಾನದಲ್ಲಿದೆ. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯದಲ್ಲಿ ರೂ.6350 ಕೋಟಿ ಸಂಗ್ರಹವಾಗಿದ್ದರೆ, ಈ ವರ್ಷ 6050 ಕೋಟಿ ರೂ. ಸಂಗ್ರಹವಾಗಿದೆ. ಆಗಸ್ಟ್ ತಿಂಗಳ ಪರಿಸ್ಥಿತಿಯೂ ಹಾಗೆ ಇದೆ. ಇದಲ್ಲದೇ ಡೀಸೆಲ್, ಪೆಟ್ರೋಲ್ ಮತ್ತು ಮದ್ಯದ ಮೇಲೆ ವಿಪರೀತ ತೆರಿಗೆ ವಿಧಿಸಲಾಗುತ್ತಿದೆ. ನಾಡಿನ ರೈತರ ದುಡಿಯುವ ಸಮುದಾಯಗಳ ಕುಶಲ ಕರ್ಮಿಗಳ ಬದುಕನ್ನು ಸುಧಾರಿಸಲು ನೆರವಿಗೆ ಬರುವುದಿಲ್ಲವೆಂದ ಮೇಲೆ ಸರ್ಕಾರ ಸಾಲ ಮಾಡುವುದಾಗಲಿ, ತೆರಿಗೆ ಹೆಚ್ಚಿಸುವುದಾಗಲಿ ಅಮಾನವೀಯವಾಗುತ್ತದೆ.

ಕೇಂದ್ರದ ಮೇಲೆ ಒತ್ತಡ ತಂದು ಪರಿಹಾರವನ್ನು ಪಡೆದುಕೊಳ್ಳಬೇಕಾಗಿರುವುದು ರಾಜ್ಯದ ಸಂವಿಧಾನ ಬದ್ಧ ವಾದ ಹಕ್ಕು ಎಂದಿದ್ದಾರೆ. ಆರಂಭದಿಂದಲೂ ಸಮರ್ಪಕವಾಗಿ ಮಳೆ ಬಂದ ಕಾರಣದಿಂದ ಫಸಲು ಸಹ ಚೆನ್ನಾಗಿ ಬಂದಿದೆ. ಆದರೆ ಬೆಲೆಗಳು ಕುಸಿಯುತ್ತಿವೆ ಜೊತೆಗೆ ಅತಿವೃಷ್ಟಿ ಎಲ್ಲವನ್ನೂ ಹಾನಿ ಮಾಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳಂತೂ ತಮಗೆ ನಿಗದಿಯಾಗಿರುವ ಜಿಲ್ಲೆಗಳ ಕಡೆಗೆ ತಲೆ ಹಾಕುತ್ತಿಲ್ಲ. ಹೀಗಾಗಿ ರೈತರ ಗೋಳು ಕೇಳುವವರೇ ಇಲ್ಲದಂತಾಗಿದೆ ಎಂದು ಸಿದ್ದರಾಮಯ್ಯ ಸಿಎಂಗೆ ಬರೆದ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.