ETV Bharat / state

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ರವಿ ಚನ್ನಣ್ಣನವರ್ ವರ್ಗಾವಣೆ

author img

By ETV Bharat Karnataka Team

Published : Oct 1, 2023, 6:50 AM IST

ರವಿ ಡಿ. ಚನ್ನಣ್ಣನವರ್
ರವಿ ಡಿ. ಚನ್ನಣ್ಣನವರ್

ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ವರ್ಗಾವಣೆಯಾಗಿದ್ದಾರೆ.

ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ.

ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ 14 ರಂದು ಕಿಯೋನಿಕ್ಸ್ ಎಂಡಿಯಾಗಿ ವರ್ಗಾಯಿಸಿತ್ತು. ಇದೇ ವರ್ಷ ಜೂನ್ 7ರಂದು ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ವರ್ಗಾವಣೆ ಆದೇಶವನ್ನು ಆಕ್ಷೇಪಿಸಿದ್ದ ರವಿ ಡಿ ಚನ್ನಣ್ಣನವರ್, ಕಿಯೋನಿಕ್ಸ್ ಎಂಡಿಯಾಗಿ ಬಂದು 6 ತಿಂಗಳಾಗಿದೆ. ಕಾರಣ ನೀಡದೆ ವರ್ಗಾವಣೆ ಮಾಡಿದ್ದು, ಸರಿಯಲ್ಲ ಎಂದು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿದ್ದರು.

ಮತ್ತೊಂದೆಡೆ ಹುದ್ದೆ ನಿರೀಕ್ಷೆಯಲ್ಲಿದ್ದ ಜಯರಾಂ ರಾಯಪುರ್​ ಅವರನ್ನು ಕಾರವಾರದ ಕರ್ನಾಟಕ ಬಂದರು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನಿಯೋಜಿಸಲಾಗಿದೆ. ಹಾಗೂ ಜನನ–ಮರಣ ವಿಭಾಗದ ನೋಂದಣಾಧಿಕಾರಿಯಾಗಿರುವ ಹೆಚ್ಚುವರಿ ನಿರ್ದೇಶಕ ಎಂ. ಮಾದೇಶು ಅವರಿಗೆ ಬಡ್ತಿ ನೀಡಿ, ಎನ್‌. ಮಾಧುರಾಂ ಅವರ ನಿವೃತ್ತಿಯಿಂದ ತೆರವಾದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ನಿರ್ದೇಶಕ ಹುದ್ದೆಗೆ ನೇಮಕಗೊಳಿಸಲಾಗಿದೆ.

ಇದನ್ನೂ ಓದಿ: ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್‌ ನೌಕರ.. ಆರೋಪ ನಿರಾಕರಿಸಿದ ಅಧಿಕಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.