ಬೆಂಗಳೂರು: ದೇಶದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಎಲ್ಲಾ ರಾಜ್ಯಗಳ ಜೊತೆ ವಿಡಿಯೋ ಸಂವಾದ ನಡೆಸುತ್ತಿರುವ ಕೇಂದ್ರ ಆರೋಗ್ಯ ಇಲಾಖೆ ಇಂದು ರಾಜ್ಯದ ತಂಡದ ಜೊತೆ ವಿಡಿಯೋ ಸಂವಾದ ನಡೆಸಿ ಮಾಹಿತಿ ವಿನಿಮಯ ಮಾಡಿಕೊಂಡಿತು.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ ನಿರ್ದೇಶನದಂತೆ ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ವಿಕಾಸಸೌಧದಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭಾಗಿಯಾಗಿದ್ದರು.
ಇದನ್ನು ಓದಿ: ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು... 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ!
ಸಂವಾದ ಆರಂಭಗೊಳ್ಳುತ್ತಿದ್ದಂತೆ ಕೊರೊನಾ ವೈರಸ್ ಹರಡದ ರೀತಿ ರಾಜ್ಯ ಆರೋಗ್ಯ ಇಲಾಖೆ ಮಾಡಿಕೊಂಡಿರುವ ಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ವೈರಸ್ ತಡೆಗೆ ಮತ್ತಷ್ಟು ಎಚ್ಚರಿಕೆ ಕ್ರಮ ಜಾರಿ ಮಾಡುವ ಬಗ್ಗೆ ಗಂಭೀರ ಸಮಾಲೋಚನೆ ನಡೆಸಲಾಯಿತು.
ಇಲ್ಲಿಯವರೆಗೆ ಎಷ್ಟು ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ. ಎಷ್ಟು ಮಾದರಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷಾ ವರದಿಗಳು, ಪ್ರತ್ಯೇಕವಾಗಿಟ್ಟು ಚಿಕಿತ್ಸೆ ಪಡೆದವರ ಸಂಖ್ಯೆ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸಂಬಂಧ ನಡೆಯುತ್ತಿರುವ ಎಲ್ಲಾ ಚಟುವಟಿಕೆಗಳ ಕುರಿತು ಸಮಗ್ರವಾಗಿ ಮಾಹಿತಿ ಪಡೆದುಕೊಳ್ಳಲಾಯಿತು.
ಆರೋಗ್ಯ ಸಚಿವರೇ ಗೈರು:
ಕೊರೊನಾ ಸಂಬಂಧ ಕೇಂದ್ರ ಆರೋಗ್ಯ ಇಲಾಖೆ ನಡೆಸಿದ ವಿಡಿಯೋ ಕಾನ್ಫರೆನ್ಸ್ಗೆ ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಗೈರಾಗಿದ್ದರು. ಬರೀ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಅಧಿಕಾರಿಗಳ ಜೊತೆಯಷ್ಟೇ ಚರ್ಚೆ ನಡೆಸಲಾಯಿತು.
ಇದನ್ನು ಓದಿ: ಗದಗ ಬಳಿ ಡಸ್ಟರ್ ಕಾರು ಪಲ್ಟಿ... ಬಿಜೆಪಿ ನಾಯಕನ ಪತ್ನಿ, ಪುತ್ರ ಸೇರಿ ಮೂವರ ಸಾವು
ಪುತ್ರಿ ಮದುವೆ ಕಾರಣ ನೀಡಿ ಕೊರೊನಾ ಮುನ್ನೆಚ್ಚರಿಕೆ ಸಭೆ ಸೇರಿದಂತೆ ಆರೋಗ್ಯ ಇಲಾಖೆ ಸಭೆಗಳಿಂದ ದೂರ ಇದ್ದ ಸಚಿವ ಶ್ರೀರಾಮುಲು ಮದುವೆ ಮುಗಿದರೂ ಇತ್ತ ಗಮನ ಹರಿಸಿಲ್ಲ. ಹಾಗಾಗಿ ವೈದ್ಯಕೀಯ ಶಿಕ್ಷಣ ಸಚಿವರೇ ಈ ಜವಾಬ್ದಾರಿ ನಿರ್ವಹಿಸುತ್ತಿದ್ದು, ಪ್ರತಿದಿನದ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ, ಅಧಿಕಾರಿಗಳ ಸಭೆ ಮಾಡುತ್ತಿದ್ದಾರೆ.