ETV Bharat / state

ಬೆಂಗಳೂರಿನಲ್ಲಿ ಸೆರೆ ಸಿಕ್ಕ ಐವರು ಶಂಕಿತ ಉಗ್ರರಿಗೆ 15 ದಿನ ಪೊಲೀಸ್‌ ಕಸ್ಟಡಿ: ಪೊಲೀಸ್‌ ಆಯುಕ್ತರಿಂದ ಪ್ರಕರಣದ ವಿವರ

author img

By

Published : Jul 19, 2023, 1:16 PM IST

Updated : Jul 19, 2023, 3:24 PM IST

ಬೆಂಗಳೂರಿನಲ್ಲಿ ಇಂದು ಬಂಧಿಸಲಾಗಿರುವ ಐವರು ಶಂಕಿತ ಉಗ್ರರ ಬಗ್ಗೆ ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್​ ಮಾಹಿತಿ ನೀಡಿದರು.

ನಗರ ಪೊಲೀಸ್​ ಆಯುಕ್ತರ ಮಾದ್ಯಮಗೋಷ್ಠಿ
ನಗರ ಪೊಲೀಸ್​ ಆಯುಕ್ತರ ಮಾದ್ಯಮಗೋಷ್ಠಿ

ಪೊಲೀಸ್‌ ಆಯುಕ್ತರಿಂದ ಪ್ರಕರಣದ ವಿವರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಭಾರಿ ಸ್ಫೋಟ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತುರ್ತು ಮಾಧ್ಯಮಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ.

"ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದ ಐವರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರ ತಂಡ ಯಶಸ್ವಿಯಾಗಿದೆ. ಹೆಬ್ಬಾಳ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಶಂಕಿತರ ಮನೆಗಳ ಮೇಲೆ‌ ದಾಳಿ ನಡೆಸಲಾಗಿತ್ತು. ಬಂಧಿತರಿಂದ ಏಳು ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿ ಸೇರಿದಂತೆ ಮೊಬೈಲ್​ ಫೋನ್​ಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆಯಲ್ಲಿ ಐವರೂ ಸಹ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿರುವುದಾಗಿ ಒಪ್ಪಿಕೊಂಡಿದ್ದಾರೆ." ಎಂದು ದಯಾನಂದ್ ತಿಳಿಸಿದ್ದಾರೆ.

15 ದಿನ ಪೊಲೀಸ್‌ ಕಸ್ಟಡಿಗೆ: "2008ರಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ಸರಣಿ ಬಾಂಬ್​ ಸ್ಫೋಟ ಪ್ರಕರಣದ ರುವಾರಿ ಟಿ.ನಜೀರ್​ ಹಾಗೂ 2017ರ ಕೊಲೆ ಪ್ರಕರಣದ ಆರೋಪಿ ಜುನೈದ್​ ಇಬ್ಬರೂ ಸೇರಿ ಬಂಧಿತ ಸಯ್ಯದ್ ಸೋಹೆಲ್, ಮುದಾಸಿರ್, ಉಮರ್ ಮತ್ತು ಜಾಹಿದ್​ಗೆ ತರಬೇತಿ ನೀಡಿದ್ದಾರೆ. ಸದ್ಯ ನಜೀರ್ ಜೈಲಿನಲ್ಲಿದ್ದಾನೆ. ಮತ್ತೋರ್ವ ಆರೋಪಿ ಜುನೈದ್​​ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ದುಷ್ಕೃತ್ಯ ಎಸಗಲು ಶಂಕಿತರು ಏನೆಲ್ಲ ಪ್ಲಾನ್ ಮಾಡಿದ್ದರು ಎಂಬ ಬಗ್ಗೆ ತನಿಖೆ ಮಾಡಲಾಗುತ್ತದೆ. ಬಂಧಿತರನ್ನು 15 ದಿನ ಕಸ್ಟಡಿಗೆ ಪಡೆಯಲಾಗಿದೆ" ಎಂದರು.

ಬೆಂಗಳೂರಿನಲ್ಲಿ ಯಾವೆಲ್ಲ ಸ್ಥಳಗಳಲ್ಲಿ ಬಾಂಬ್​ ಸ್ಫೋಟಿಸಲು ಯೋಜನೆ ರೂಪಿಸಿದ್ದರು ಎಂಬ ಪ್ರಶ್ನೆಗೆ, "ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸ್ನೇಹಿತ ಜುನೈದ್​ ಎಂಬಾತ ಸಾಧನ ಸಲಕರಣೆಗಳ ಪೂರೈಕೆಗೆ ಸಹಾಯ ಮಾಡಿದ್ದಾನೆ. ಬೆಂಗಳೂರಿನಲ್ಲಿ ಕೃತ್ಯಗಳನ್ನು ಎಸಗಲು ಆತನೇ ನಿರ್ದೇಶನ ಕೊಟ್ಟಿದ್ದ ಎಂದು ಬಂಧಿತರು ತಿಳಿಸಿದ್ದಾರೆ. ಈ ಬಗ್ಗೆ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್​ ಮತ್ತೊಬ್ಬ ವ್ಯಕ್ತಿಯಿಂದ ಇವರಿಗೆ ಸ್ಫೋಟಕಗಳನ್ನು ತಲುಪಿಸಿದ್ದು, ಈ ಬಗ್ಗೆಯೂ ತನಿಖೆ ನಡೆಯುತ್ತದೆ ಎಂದು ಪೊಲೀಸ್ ಆಯುಕ್ತರು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಸ್ಫೋಟಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ, ತನಿಖೆ ತೀವ್ರ

Last Updated : Jul 19, 2023, 3:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.