ETV Bharat / state

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ಕುಮಾರ್ ರೈ ಅಮಾನತು

author img

By

Published : Jul 1, 2023, 9:51 PM IST

tehsildar-ajit-kumar-rai-suspended-for-illegal-property-case
Etv Bharatಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ಕುಮಾರ್ ರೈ ಅಮಾನತು

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಅಮಾನತುಗೊಳಿಸಿ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶಿಸಿದ್ದಾರೆ.

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ಕುಮಾರ್ ರೈ ನ್ಯಾಯಾಂಗ ಬಂಧನದಲ್ಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957ರ ನಿಯಮ 10(1)(A)(A) ಮತ್ತು 10(2(A) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಏನಿದು ಪ್ರಕರಣ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧನಕ್ಕೊಳಗಾಗಿರುವ ಕೆ.ಆರ್. ಪುರ ತಹಶೀಲ್ದಾರ್ ಹಾಗೂ ಕೆಎಎಸ್‌ ಅಧಿಕಾರಿ ಅಜಿತ್ ರೈ ಅವರನ್ನು 7 ದಿನಗಳ ಕಾಲ ಲೋಕಾಯುಕ್ತರ ವಶಕ್ಕೆ ನೀಡಿ ನಗರದ 78ನೇ ಸಿಸಿಹೆಚ್ ನ್ಯಾಯಾಲಯ ಶುಕ್ರವಾರ ಆದೇಶ ನೀಡಿತ್ತು. ಶುಕ್ರವಾರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ತನಿಖೆಯ ಭಾಗವಾಗಿ ಪುತ್ತೂರಿಗೆ ಕರೆದೊಯ್ಯುವ ಅಗತ್ಯ ಇರುವುದರಿಂದ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಜುಲೈ 6ರ ವರೆಗೆ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿತ್ತು.

ಜೂನ್ 28ರಂದು ಅಜಿತ್ ರೈಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ 10 ಕಡೆಗಳಲ್ಲಿ ದಾಳಿ ನಡೆಸಿ ರಾತ್ರಿಯವರೆಗೂ ಪರಿಶೀಲನೆ ಮುಂದುವರೆಸಿದ್ದ ಲೋಕಾಯುಕ್ತ ಪೊಲೀಸರು, ಗುರುವಾರ ಬೆಳಗ್ಗೆ ಅವರನ್ನು ವಶಕ್ಕೆ ಪಡೆದಿದ್ದರು. ಲೋಕಾಯುಕ್ತ ನಗರ ವಿಭಾಗದ ಎಸ್​ಪಿ ಅಶೋಕ್ ಕೆ.ವಿ ನೇತೃತ್ವದ ತಂಡ ಅಜಿತ್ ರೈಗೆ ಸೇರಿದ ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಬೆಂಗಳೂರಿನ ಸಹಕಾರ ನಗರ, ರಾಮಮೂರ್ತಿ ನಗರದಲ್ಲಿರುವ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಶೋಧ ನಡೆಸಲಾಗಿತ್ತು. ಈ ವೇಳೆ ರೈ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಮಹತ್ವದ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಈ ಹಿಂದೆ ಕೆ.ಆರ್.ಪುರದ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಜಿತ್, ರಾಜಕಾಲುವೆ ಒತ್ತುವರಿದಾರರಿಗೆ ಸಹಕಾರ ನೀಡಿ ಹೈಕೋರ್ಟ್​ನಿಂದ ತಡೆಯಾಜ್ಞೆ ತರಲು ನೆರವು ನೀಡಿದ್ದರು ಎಂಬ‌ ಆರೋಪದಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಕೆಲವು ದಿನಗಳ ಹಿಂದೆ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದ್ದರಿಂದ ಮತ್ತೆ ಕೆ.ಆರ್.ಪುರ ತಹಶೀಲ್ದಾರ್ ಆಗಿ ಬಂದಿದ್ದರು.‌‌‌ ಕಳೆದ ಒಂದು ವಾರದ ಹಿಂದಷ್ಟೇ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿತ್ತು.

ಬೆಂಗಳೂರು ನಗರ, ಬಾಗಲಕೋಟೆ, ಬೀಳಗಿ, ಕಲಬುರಗಿ, ತುಮಕೂರು, ಕೊಡಗು, ವಿಜಯಪುರ, ರಾಯಚೂರು ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಮಹತ್ವದ ದಾಖಲಾತಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮನೆ ಮೇಲೆ ನಡೆದ ದಾಳಿ ನಡೆದಿದ್ದು ಎರಡು ನಕ್ಷತ್ರ ಆಮೆಗಳು ಪತ್ತೆಯಾಗಿದ್ದವು. ಅಜಿತ್ ರೈ ಅವರ ಮನೆಯಲ್ಲಿ ವಿದೇಶಿ ಲಿಕ್ಕರ್ ಬಾಟಲ್ ಸಿಕ್ಕಿತ್ತು.

ಇದನ್ನೂ ಓದಿ:ನಿವೇಶನದ ಹೆಸರಿನಲ್ಲಿ ವಂಚನೆ ಆರೋಪ: ಖಾಸಗಿ ಕಂಪನಿಯೊಂದಕ್ಕೆ ಸೇರಿದ ಐದು ಸ್ಥಳಗಳಲ್ಲಿ ಇಡಿ ಶೋಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.