ETV Bharat / state

ಪ್ರೀತಿಸಿದವಳನ್ನು ಮದುವೆಯಾಗಲು ಅಪರಾಧಿಯನ್ನ ಪೆರೋಲ್ ಮೇಲೆ ಬಿಡುಗಡೆಗೆ ಹೈಕೋರ್ಟ್ ಸೂಚನೆ

author img

By

Published : Apr 3, 2023, 6:17 PM IST

ಕೊಲೆ ಪ್ರಕರಣದಲ್ಲಿ 10 ವರ್ಷಗಳವರೆಗೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ವಿವಾಹವಾಗಲು 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್, ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.

High Court
ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ 10 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ವಿವಾಹವಾಗುವುದಕ್ಕಾಗಿ 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.

9 ವರ್ಷಗಳಿಂದ ಪ್ರೀತಿಸುತ್ತಿದ್ದ ಅಪರಾಧಿ: ಅಪರಾಧಿ ಯುವತಿಯೊಬ್ಬಳನ್ನ ಕಳೆದ 9 ವರ್ಷಗಳಿಂದ ಪ್ರೀತಿಸುತ್ತಿದ್ದ, ಹೀಗಾಗಿ ಅವಳನ್ನೇ ವಿವಾಹವಾಗಲು ಪೆರೋಲ್ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿ ಆತನ ಪ್ರಿಯತಮೆ ಮತ್ತು ಆತನ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪಪೀಠ ಈ ಸೂಚನೆ ನೀಡಿದೆ. ಅಪರಾಧಿಗೆ (ಕೈದಿ ಸಂಖ್ಯೆ 11699) ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿ ಇದೇ ಏಪ್ರೀಲ್ 5ರ ಮಧ್ಯಾಹ್ನದ ಒಳಗೆ, 15 ದಿನಗಳ ಅವಧಿವರೆಗೆ ಬಿಡುಗಡೆ ಮಾಡಬೇಕು ಎಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಂಧಿಖಾನೆ ಡಿಐಜಿ ಹಾಗೂ ಪರಪ್ಪನ ಅಗ್ರಹಾರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಅವರಿಗೆ ಆದೇಶಿಸಲಾಗಿದೆ.

ಅಲ್ಲದೇ, ಜೈಲು ಕೈಪಿಡಿಯ ಸಕ್ಷನ್ 636ರ ಸಬ್ ಸೆಕ್ಷನ್ 12ರ ಪ್ರಕಾರ ಅಸಾಧಾರಣ ಸಂದರ್ಭಗಳಲ್ಲಿ ಕೈದಿಗಳಿಗೆ ಪೆರೋಲ್ ನೀಡಲು ಸಂಸ್ಥೆಯ ಮುಖ್ಯಸ್ಥರಿಗೆ ವಿವೇಚನಾಧಿಕಾರವಿದೆ. ಹೀಗಾಗಿ ಅತ್ಯಂತ ಅಪರೂಪದ ಪ್ರಕರಣ ಎಂಬುದಾಗಿ ಪರಿಗಣಿಸಿ ಪೆರೋಲ್ ನೀಡಬಹುದು ಎಂದು ನ್ಯಾಯಪೀಠ ತನ್ನ ಆದೇಶಲ್ಲಿ ತಿಳಿಸಿದೆ.

ಅರ್ಜಿದಾರರ ಪರ ವಕೀಲರು ಹೇಳಿದ್ದೇನು?: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅಪರಾಧಿ 21 ವರ್ಷವಿದ್ದಾಗ ಜೈಲು ಶಿಕ್ಷೆಗೆ ಗುರಿಯಾಗಿದ್ದು, 10 ವರ್ಷ ಶಿಕ್ಷೆ ನಿಗದಿಯಾಗಿದೆ. ಅರ್ಜಿದಾರ ಹೆಣ್ಣು ಮಗಳು ಅಪರಾಧಿಯನ್ನು ಕಳೆದ 9 ವರ್ಷಗಳಿಂದ ಪ್ರೀತಿಸುತ್ತಿದ್ದು, ಪೆರೋಲ್ ನೀಡದಿದ್ದಲ್ಲಿ ಅವರ ಜೀವನದ ಪ್ರೀತಿಯನ್ನು ಕಳೆದುಕೊಂಡಂತಾಗಲಿದೆ. ಅರ್ಜಿದಾರರು ಜೈಲಿನಲ್ಲಿರುವ ಕೈದಿಯನ್ನು ಹೊರತುಪಡಿಸಿ ಬೇರೊಬ್ಬರನ್ನು ಒಲ್ಲದ ಮನಸ್ಸಿನಿಂದ ವಿವಾಹವಾಗಬೇಕಾಗುತ್ತದೆ. ಹೀಗಾಗಿ ಕೈದಿಗೆ ಷರತ್ತುಗಳನ್ನು ವಿಧಿಸಿ ತುರ್ತಾಗಿ ಪೆರೋಲ್ ನೀಡಬೇಕು ಎಂದು ಕೋರಿದ್ದರು.

ಪೆರೋಲ್ ಮೇಲೆ ಬಿಡುಗಡೆಗೆ ಸೂಚನೆ: ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ಜೈಲು ಕೈಪಿಡಿಯಲ್ಲಿ ವಿವಾಹವಾಗಲು ಪೆರೋಲ್ ನೀಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಬೇಡುವಿಕೆಯನ್ನು ಪುಷ್ಟೀಕರಿಸಬಹುದಾದ ಬಾಂಬೆ ಹೈಕೋರ್ಟ್, ರಾಜಸ್ಥಾನ ಹೈಕೋರ್ಟ್ ಮತ್ತು ರಾಜ್ಯ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠಗಳ ಹಲವು ಆದೇಶಗಳನ್ನು ಉಲ್ಲೇಖಿಸಿ, 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆಗೆ ಸೂಚನೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ 2015ರ ಆಗಸ್ಟ್ 16ರಂದು ಮಾಸ್ತಿ ಹೋಬಳಿಯ ನಾಗದೇನಹಳ್ಳಿಯಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದ (ಘಟನೆ ನಡೆದಾಗ 21ವರ್ಷ) ಅವರನ್ನು ಮಾಸ್ತಿ ಠಾಣೆ ಪೊಲೀಸರು 2015ರ ಆಗಸ್ಟ್ 17ರಂದು ಬಂಧಿಸಿದ್ದರು. ನಂತರ ಸೆಷನ್ಸ್ ನ್ಯಾಯಾಲಯ 2019ರಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಲಾದ ಮೇಲ್ಮನವಿಯಲ್ಲಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಶಿಕ್ಷೆಯ ಪ್ರಮಾಣವನ್ನು 10 ವರ್ಷಗಳಿಗೆ ಇಳಿಸಿತ್ತು. ಈ ನಡುವೆ ಅಪರಾಧಿಯ ಪ್ರಿಯತಮೆ ವಿವಾಹವಾಗಲು 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಜೈಲು ಅಧಿಕರಿಗಳಿಗೆ ಸೂಚನೆ ನೀಡಲು ಕೋರಿ ಅರ್ಜಿ ಸಲ್ಲಿಸಲಿದ್ದರು.

ಇದನ್ನೂ ಓದಿ: ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ಮೇಲೆ ಚುನಾವಣಾ ಆಯೋಗದ ಹದ್ದಿನ ಕಣ್ಣು: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.