ETV Bharat / state

SDPI ಕಚೇರಿಗಳಿಗೆ ಬೀಗ ಹಾಕಿದ್ದ ಕ್ರಮ ಪ್ರಶ್ನಿಸಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

author img

By

Published : Apr 17, 2023, 9:19 PM IST

ದಕ್ಷಿಣ ಕನ್ನಡ ಜಿಲ್ಲೆಯ ಎಸ್​ಡಿಪಿಐ ಕಚೇರಿಗೆ ಬೀಗ ಹಾಕಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿ ಕಚೇರಿಗಳಿಗೆ ಬೀಗ ಹಾಕಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯಪೀಠ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಯಾವುದೇ ಮಾಹಿತಿ ನೀಡದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಇರುವ ಎಸ್‌ಡಿಪಿಐ ಕಚೇರಿಗಳು, ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಗಳಿಗೆ ಬೀಗ ಹಾಕಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಎಸ್‌ಡಿಪಿಐ ಪಕ್ಷದ ಹಲವು ಮಂದಿ ಚುನಾಯಿತರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 200ಕ್ಕೂ ಅಧಿಕ ಚುನಾಯಿತ ಪ್ರತಿನಿಧಿಗಳಿದ್ದು, ರಾಜಕೀಯ ಚಟುವಟಿಕೆ ನಡೆಸಲು ಅವರಿಗೆ ಕಚೇರಿಯ ಅಗತ್ಯವಿದೆ. ಆದ್ದರಿಂದ, ಜಪ್ತಿ ಮಾಡಿರುವ ಕಚೇರಿಗಳಿಗೆ ಹಾಕಲಾಗಿರುವ ಮೊಹರು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ಅಲ್ಲದೆ, ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿ ನೋಂದಾಯಿತ ರಾಜಕೀಯ ಪಕ್ಷವಾಗಿರುವ ಎಸ್‌ಡಿಪಿಐ, ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ಕೆಲ ಶಕ್ತಿಗಳ ಕೆಂಗಣ್ಣಿಗೆ ಪಕ್ಷ ಗುರಿಯಾಗಿದ್ದು, ಅದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೆಟ್ಟಅಭಿಪ್ರಾಯ ಮೂಡಿಸಲು ಸರ್ಕಾರಿ ಸಂಸ್ಥೆಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಪಾಪುಲರ್‌ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜತೆ ಎಸ್‌ಡಿಪಿಐ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಪ್ರಕರಣ ಸಂಬಂಧ ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್, ಎಸ್‌ಡಿಪಿಐ ಕಚೇರಿಗಳನ್ನು ನಿಷೇಧಿತ ಪಿಎಫ್‌ಐ ಮತ್ತು ಸಿಎಫ್‌ಐ ಸಂಘಟನೆಗಳ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಆಧರಿಸಿ ಜಿಲ್ಲಾಧಿಕಾರಿಗಳು ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದನ್ನು ದೃಢಪಡಿಸಿಕೊಂಡ ನಂತರ ಕ್ರಮ ಕೈಗೊಂಡಿದ್ದಾರೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿಯೋಜಿಸಿರುವ ಅಧಿಕಾರವನ್ನು ಆಧರಿಸಿ ಜಿಲ್ಲಾಡಳಿತ ಸಮಗ್ರ ಮಾಹಿತಿ ಕಲೆಹಾಕಿ, ತನಿಖೆ ನಡೆಸಿ, ಶಾಂತಿ ಭಂಗ ಹಾಗೂ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದ ಕೃತ್ಯಗಳನ್ನು ನಡೆಸುತ್ತಿದೆ ಎಂಬುದನ್ನು ಮನಗಂಡೇ ಎಸ್​ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿ ನಂತರ ಅವುಗಳನ್ನು ಸೀಲ್ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅಲ್ಲದೆ, ಒಂದು ವೇಳೆ ಅರ್ಜಿದಾರರು ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸುವುದಾದರೆ ಅದನ್ನು ಮ್ಯಾಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಪ್ರಶ್ನಿಸಬಹುದು. ಹೈಕೋರ್ಟ್‌ನಲ್ಲಿ ರಿಟ್ ಮಾನ್ಯ ಮಾಡಲಾಗದು. ಕಚೇರಿ ಜಾಗದ ಬಗ್ಗೆ ಮಾಡಿಕೊಂಡಿರುವ ಬಾಡಿಗೆ ಒಪ್ಪಂದಗಳಲ್ಲಿ ಉದ್ದೇಶವನ್ನು ನಮೂದಿಸಿಲ್ಲ. ಕೆಲವು ಒಪ್ಪಂದಗಳ ಅವಧಿ ಮುಗಿದಿದೆ. ಆ ಕಟ್ಟಡಗಳ ಮಾಲೀಕರನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಪರ ವಾದಿಸಿದ ಎಎಸ್‌ಜಿ ಶಾಂತಿಭೂಷಣ್, ಕೇಂದ್ರ ಸರ್ಕಾರ ಪಿಎಫ್‌ಐ ಅನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಗುಪ್ತಚರ ಮಾಹಿತಿ ಆಧರಿಸಿ ಎಸ್‌ಡಿಪಿಐ ಕಚೇರಿಗಳಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಚಟುವಟಿಕೆಗಳನ್ನು ನಡೆಸುತ್ತಿದ್ದರಿಂದ ಅದರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಿದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿತು. ನಂತರ ತೀರ್ಪು ಕಾಯ್ದಿರಿಸಿರುವುದಾಗಿ ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ: ಮಾನ್ಯತೆ ಪಡೆಯದ ಪಕ್ಷ ಪ್ರಚಾರಕ್ಕೆ ಖಾಸಗಿ ವಾಹನ, ಧ್ವನಿವರ್ಧಕ ಬಳಸಬಹುದು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.