ETV Bharat / state

ಡಿಸೆಂಬರ್ ನಂತರ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರಲ್ಲ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

author img

By ETV Bharat Karnataka Team

Published : Sep 16, 2023, 6:53 PM IST

ಡಿಸೆಂಬರ್​ ಬಳಿಕ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇರುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

there-will-be-no-shortage-of-medicines-in-government-hospitals-health-minister-dinesh-gundurao
ಡಿಸೆಂಬರ್ ನಂತರ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರಲ್ಲ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಸಮಸ್ಯೆ ಪರಿಹರಿಸಲಾಗುತ್ತಿದ್ದು, ಡಿಸೆಂಬರ್ ಬಳಿಕ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇಂದು ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕರಿಸಿದ ತುರ್ತು ನಿಗಾ ಘಟಕ‌ವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಔಷಧಿ ಸರಬರಾಜು ಕಾರ್ಪೋರೇಷನ್ ಆಸ್ಪತ್ರೆಗಳಿಗೆ ಸರಿಯಾಗಿ ಔಷಧಿಗಳನ್ನು ಪೂರೈಕೆ ಮಾಡುತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಕೆಲಸ ಮಾಡುತ್ತಿದ್ದೇವೆ. ಡಿಸೆಂಬರ್ ಬಳಿಕ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಸಿಗುತ್ತಿಲ್ಲ ಎಂದು ಯಾರು ಹೇಳಬಾರದು. ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಔಷಧಿಗಳನ್ನು ಆಸ್ಪತ್ರೆಗಳಿಗೆ ಪೂರೈಸುವಂತೆ ತಾಕೀತು ಮಾಡಿದ್ದೇನೆ ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಯ ಜೊತೆಗೆ ಸಮರ್ಪಕವಾಗಿ ಉಚಿತ ಔಷಧಿಗಳು ಸಿಗುವಂತಾಗಬೇಕು. ಸರಿಯಾಗಿ ಔಷಧಿಗಳು ಸಿಕ್ಕಾಗ ಮಾತ್ರ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸಲು ಸಾಧ್ಯ. ಹಾಗೆ ನೋಡಿದರೆ ಆಸ್ಪತ್ರೆಯ ಹೊರಗಡೆ ಜನ ಔಷಧಿ ಕೇಂದ್ರಗಳ ಅವಶ್ಯಕತೆಯೇ ಇಲ್ಲ. ಆಸ್ಪತ್ರೆಗಳಲ್ಲೇ ಔಷಧಿಗಳು ಸರಿಯಾಗಿ ದೊರೆತರೆ ಜನರು ಬೇರೆ ಕಡೆ ಔಷಧಿ ಪಡೆಯಲು ತಿರುಗಾಡುವ ಅಗತ್ಯತೆಯೇ ಬರೋದಿಲ್ಲ.‌ ವೈದ್ಯರು ಹೊರಗಡೆ ಔಷಧಿ ತೆಗೆದುಕೊಳ್ಳುವಂತೆ ರೋಗಿಗಳಿಗೆ ಚೀಟಿ ಬರೆದುಕೊಡುವ ಪದ್ಧತಿಯನ್ನು ಬದಲಿಸಬೇಕು ಎಂದು ಸಚಿವರು ಹೇಳಿದರು.‌

there-will-be-no-shortage-of-medicines-in-government-hospitals-health-minister-dinesh-gundurao
ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕರಿಸಿದ ತುರ್ತು ನಿಗಾ ಘಟಕ‌ ಉದ್ಘಾಟನೆ

ಜಯನಗರ ಸಾರ್ವಜನಿಕ ಆಸ್ಪತ್ರೆಗೆ 10 ಕೋಟಿ ರೂ. ವೆಚ್ಚದಲ್ಲಿ ಕಾಯಕಲ್ಪ : ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಕೋವಿಡ್ ಸಂದರ್ಭದಲ್ಲಿ ಈ ಆಸ್ಪತ್ರೆ ಉತ್ತಮ ಕಾರ್ಯ ನಿರ್ವಹಿಸಿದೆ. ಆಸ್ಪತ್ರೆಯ ಆಡಳಿತ ವಿಚಾರಗಳಲ್ಲಿ ಇದ್ದ ಸಮಸ್ಯೆ ಪರಿಹರಿಸಲಾಗಿದೆ. ನಾನು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿದ್ದೆ. ಇದೀಗ ಆಸ್ಪತ್ರೆಗೆ ಹೆಚ್ಚಿನ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ 10 ಕೋಟಿ ರೂ. ಕ್ರಿಯಾಯೋಜನೆ ರೂಪಿಸಲಾಗಿದ್ದು, ಅನುದಾನ ನೀಡಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.‌

ಸಿ.ಎಸ್.ಆರ್ ಫಂಡ್ ನಲ್ಲಿ ತುರ್ತು ನಿಗಾ ಘಟಕ : ಕೆನರಾ ಬ್ಯಾಂಕ್ ಆಶ್ರಯದಲ್ಲಿ 4 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯ ತುರ್ತು ನಿಗಾ ಘಟಕವನ್ನು ನವೀಕರಣಗೊಳಿಸಲಾಗಿದೆ. 20 ಹಾಸಿಗೆಯ ಘಟಕವನ್ನು ತೆರೆಯಲಾಗಿದೆ. ಕೆನರಾ ಬ್ಯಾಂಕ್​ನ ಕಾರ್ಯಕ್ಕೆ ಧನ್ಯವಾದ ತಿಳಿಸಿದ ಸಚಿವ ಗುಂಡೂರಾವ್, ಆರೋಗ್ಯ ಕ್ಷೇತ್ರದಲ್ಲಿ ಈ ರೀತಿಯ ಕಾರ್ಯಗಳನ್ನು ನಡೆಸಲು ಹೆಚ್ಚು ದಾನಿಗಳು ಮುಂದೆ ಬರಬೇಕು. ಆರೋಗ್ಯ ಸೇವೆ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯ. ಇಂಥಹ ಪುಣ್ಯದ ಕೆಲಸಕ್ಕೆ ಕೈಜೋಡಿಸಿದಾಗ ದಾನಿಗಳಿಗೆ ತೃಪ್ತಿ ನೀಡಲಿದೆ. ಆರೋಗ್ಯ ಕ್ಷೇತ್ರದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಸಿ.ಎಸ್.ಆರ್ ಫಂಡ್ ನ ಅಡಿಯಲ್ಲಿ ಸಾಕಷ್ಟು ಸೇವಾ ಕಾರ್ಯಗಳನ್ನು ನಡೆಸಲು ಅವಕಾಶವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ. ರಾಮಮೂರ್ತಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಕೇಂದ್ರ ಸರ್ಕಾರದ ಬರ ನಿರ್ವಹಣೆ ಮಾನದಂಡದಿಂದ ಬರಗಾಲ ಘೋಷಣೆ ವಿಳಂಬವಾಗಿದೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.