ETV Bharat / state

ಸರ್ಕಾರಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ ಪದ್ಧತಿ ನಿಲ್ಲಿಸಲು ಚಿಂತನೆ: ಡಿಸಿಎಂ ಡಿ ಕೆ ಶಿವಕುಮಾರ್

author img

By ETV Bharat Karnataka Team

Published : Oct 21, 2023, 5:17 PM IST

Updated : Oct 21, 2023, 6:47 PM IST

ರಾಜ್ಯೋತ್ಸವದಷ್ಟೇ ವರ್ಷಗಳ ಸಂಖ್ಯೆಯ ಪ್ರಶಸ್ತಿ ನೀಡುವ ಆಲೋಚನೆಯಿದೆ ಎಂದು ಡಿ ಕೆ ಶಿವಕುಮಾರ್​ ಮಾಹಿತಿ ಹಂಚಿಕೊಂಡಿದ್ದಾರೆ.

DCM D K Shivakumar
ಡಿಸಿಎಂ ಡಿಕೆ ಶಿವಕುಮಾರ್​

ಡಿಸಿಎಂ ಡಿಕೆ ಶಿವಕುಮಾರ್​

ಬೆಂಗಳೂರು: ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗಾಂಧಿಭವನದಲ್ಲಿ ಶವಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, "ಪ್ರಶಸ್ತಿ ಆಯ್ಕೆಗೆ ಹೊಸ ವ್ಯವಸ್ಥೆ ಜಾರಿಗೆ ತರಬೇಕಿದೆ. ಯಾವುದೇ ಪ್ರಶಸ್ತಿಯಾದರೂ ಅದಕ್ಕೆ ಗೌರವ ಇರಬೇಕು. ಯಾವುದೇ ಒತ್ತಡಕ್ಕೆ ಒಳಗಾಗಿ ಪ್ರಶಸ್ತಿ ನೀಡಬಾರದು. ರಾಜ್ಯೋತ್ಸವದಷ್ಟೇ ವರ್ಷಗಳ ಸಂಖ್ಯೆಯ ಪ್ರಶಸ್ತಿ ನೀಡುವ ಆಲೋಚನೆಯಿದೆ" ಎಂದು ತಿಳಿಸಿದರು.

"ನಾವೀಗ ಒಂದು ಸಂಕಷ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್​ಲೈನ್ ಅರ್ಜಿ ಕರೆದಿದ್ದೆವು. ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಜಾತಿ, ಜಿಲ್ಲಾವಾರು ಮತ್ತು ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು. ಎಲ್ಲವನ್ನು ಲೆಕ್ಕ ಹಾಕುವಾಗ, ಯಾರನ್ನು ಆಯ್ಕೆ ಮಾಡುವುದು, ಯಾರನ್ನು ಬಿಡುವುದು ಎನ್ನುವ ಸವಾಲು ನಮ್ಮ ಮುಂದಿದೆ. ಪ್ರಸ್ತುತ ವರ್ಷದ ಪ್ರಶಸ್ತಿ ನೀಡಲು ಎಲ್ಲಾ ಕ್ಷೇತ್ರಗಳ 20-30 ತಜ್ಞರ ಸಮಿತಿ ಮಾಡಲಾಗಿದೆ. ಸರ್ಕಾರ ನೀಡುವ ಯಾವುದೇ ಪ್ರಶಸ್ತಿಯನ್ನು ಸಮಿತಿಯೇ ಪರಿಶೀಲನೆ ಮಾಡಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕು. ಹಿಂದೆ ಕೆಲವು ಸಲ ಪ್ರಶಸ್ತಿ ಪುರಸ್ಕೃತರ ಸಂಖ್ಯೆ 200- 300ಕ್ಕೆ ಮುಟ್ಟಿದೆ" ಎಂದು ಹೇಳಿದರು.

"ಸರ್ಕಾರ ಮಾಡಲು ಆಗದೇ ಇರುವ ಕೆಲಸಗಳನ್ನು ಸಂಘ- ಸಂಸ್ಥೆಗಳು, ಮಠಗಳು ಮಾಡುತ್ತಿವೆ. ಅನೇಕ ಸಾಧಕರನ್ನು ಗುರುತಿಸಿ, ಸಮಾಜದ ಒಳಿತಿಗೆ ಕೆಲಸ ಮಾಡುತ್ತಿವೆ. ಇಲ್ಲಿ ನಾನೊಬ್ಬನೇ ಅಲ್ಲ, ನಮ್ಮ ಹಿರಿಯರನ್ನು ನೆನಪಿಸಿಕೊಳ್ಳಬೇಕು. ಅಧಿಕಾರ ಇರಲಿ, ಇಲ್ಲದಿರಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸಿ. ಸೋಮಶೇಖರ್ ಅವರು ಪತ್ನಿಯೊಟ್ಟಿಗೆ ಸೇರಿ ಮಾಡುತ್ತಿದ್ದಾರೆ. ದೇವರು ವರ, ಶಾಪ ಏನನ್ನೂ ಕೊಡುವುದಿಲ್ಲ, ಕೇವಲ ಅವಕಾಶ ಕೊಡುತ್ತಾನೆ. ಈ ಅವಕಾಶವನ್ನು ಸಿ. ಸೋಮಶೇಖರ್ ಅವರು ಸಮಾಜಮುಖಿ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದಾರೆ" ಎಂದು ತಿಳಿಸಿದರು.

"ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ ನೆನಪು ಮನುಷ್ಯತ್ವಕ್ಕೆ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ. ಅದರಂತೆ ಸಿ. ಸೋಮಶೇಖರ್ ಅವರು ಜ್ಞಾನ ಭಂಡಾರದಲ್ಲಿ ಮುಳುಗೆದ್ದವರು. ಇವರಲ್ಲಿ ಸರಸ್ವತಿ ಮನೆ ಮಾಡಿದ್ದಾಳೆ. ಅವರಲ್ಲಿ ಇರುವ ಜ್ಞಾನವನ್ನು ಸಮಾಜಕ್ಕೆ ಮರಳಿ ನೀಡಬೇಕು ಎಂದು ಕೆಲಸ ಮಾಡುತ್ತಿದ್ದಾರೆ" ಎಂದರು.

"ಸಂಸ್ಕೃತಿ ಸಂಗಮ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿಯನ್ನು ಹೇಗೆ ಅರ್ಥೈಸಬೇಕು, ಬಣ್ಣಿಸಬೇಕು ಎಂದು ಯೋಚನೆ ಮಾಡುತ್ತಿದ್ದೆ. ನಾನು ಕನಕಪುರದ ಕಡೆಯವನಾದ್ದರಿಂದ ಈ ಮಾಧ್ಯಮದವರು ʼಬಂಡೆʼ ಎಂದು ಕರೆದರು. ನಮ್ಮ ಕಡೆ ಈ ಬಂಡೆ ಕಲ್ಲುಗಳು ಹೆಚ್ಚು. ಈ ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ರೀತಿಯಾಗಿ ಕಾರ್ಯಕ್ರಮದಲ್ಲಿ ಸಂಸ್ಕೃತಿಯ ಸಂಗಮವಾಗಿದೆ" ಎಂದರು.

"ಭಾರತ ದೇಶದ ದೊಡ್ಡ ಆಸ್ತಿಯೇ ಸಂಸ್ಕೃತಿ. ನಾವೆಲ್ಲಾ ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ಮಠ-ಮಾನ್ಯಗಳೇ ನಮ್ಮ ದೇಶದ ದೊಡ್ಡ ಆಸ್ತಿಗಳು. ಜ್ಞಾನ ಭಂಡಾರದಲ್ಲಿ ತುಂಬಿರುವಂತಹ ಹಿರಿಯರು ಈ ನಾಡಿನಲ್ಲಿ ಇದ್ದಾರೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎನ್ನುವ ಮಾತಿನಂತೆ ಅನೇಕ ಜ್ಞಾನಿಗಳನ್ನು ನೋಡುವ ಭಾಗ್ಯ ನನ್ನದಾಯಿತು" ಎಂದು ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದೆ ಎಂದು ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ: ಡಿಸಿಎಂ ಶಿವಕುಮಾರ್

Last Updated : Oct 21, 2023, 6:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.