ETV Bharat / state

ವೇತನ ಹೆಚ್ಚಳಕ್ಕೆ ಸಿಗದ ಸ್ಪಂದನೆ : ಮಾ. 24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರಿಂದ ಕರೆ

author img

By

Published : Mar 5, 2023, 5:05 PM IST

ಕೆಎಸ್​ಆರ್​ಟಿಸಿ ಬಸ್​
ಕೆಎಸ್​ಆರ್​ಟಿಸಿ ಬಸ್​

ವೇತನ ಹೆಚ್ಚಳದ ಬೇಡಿಕೆಗೆ ಸಿಗದ ಸ್ಪಂದನೆ - ಸಾರಿಗೆ ನೌಕರರ ಮುಷ್ಕರಕ್ಕೆ ಕರೆ - ಸಾರಿಗೆ ಒಕ್ಕೂಟದ ಅಧ್ಯಕ್ಷ ಆರ್ ಚಂದ್ರಶೇಖರ್ ಹೇಳಿಕೆ

ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದು, ಬಸ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಸರ್ಕಾರವು ತಮ್ಮ ವೇತನ ಹೆಚ್ಚಳದ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮಾರ್ಚ್ 24 ರಿಂದ ಬಿ.ಎಂ.ಟಿ.ಸಿ ಮತ್ತು ಕೆ.ಎಸ್.ಆರ್.ಟಿ.ಸಿ ಸೇವೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ಸಾರಿಗೆ ಒಕ್ಕೂಟದ ಅಧ್ಯಕ್ಷ ಆರ್ ಚಂದ್ರಶೇಖರ್ ತಿಳಿಸಿದ್ದಾರೆ.

ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ನಾವು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. 2016 ರಿಂದ ನಮ್ಮ ನೌಕರರಿಗೆ ವೇತನ ಹೆಚ್ಚಳವಾಗಿಲ್ಲ. 2021ರಲ್ಲಿ ನಡೆದ ಮುಷ್ಕರದ ವೇಳೆ ಆಗಿನ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ವೇತನ ಪರಿಷ್ಕರಣೆ ಮಾಡುವುದಾಗಿ ಲಿಖಿತ ಭರವಸೆ ನೀಡಿದ್ದರು. ನಮ್ಮ ಇತರೆ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದರು. ಆದರೆ ಎಲ್ಲಾ ಭರವಸೆಗಳು ಹುಸಿಯಾಗಿದೆ. ಸಾರಿಗೆ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನಾಳೆ ಕಾರ್ಮಿಕ ಆಯುಕ್ತರಿಗೆ ಮನವಿ : 4 ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಎಂ ಡಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಮುಷ್ಕರಕ್ಕೆ ಕರೆ ನೀಡುತ್ತೇವೆ ಎಂದು ಹೇಳಿದ್ದೆವು. ಪ್ರಯಾಣಿಕರನ್ನು ತೊಂದರೆಗೆ ಸಿಲುಕಿಸಬಾರದು ಎಂಬುದು ನಮ್ಮ ಉದ್ದೇಶವಾಗಿde. ಹೀಗಾಗಿ ನಾವು ನಾಳೆ ಕಾರ್ಮಿಕ ಆಯುಕ್ತರಿಗೆ 14 ದಿನಗಳ ಪ್ರತಿಭಟನೆ ಮಾಡುವುದಾಗಿ ತಿಳಿಸಲು ಮುಂದಾಗಿದ್ದೇವೆ ಎಂದಿದ್ದಾರೆ.

3 ವರ್ಷಗಳಿಂದ ಸತತ ಹೋರಾಟ : 4 ನಿಗಮಗಳ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸತತ 3 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಕೂಡ 2023-24ರ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಸರ್ಕಾರ ಕೊಟ್ಟ ಲಿಖಿತ ಭರವಸೆ ಈಡೇರಿಸಿಲ್ಲ. ಹೀಗಾಗಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ನಡೆಸಲು ತೀರ್ಮಾನಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಸರ್ಕಾರಕ್ಕೆ ಪ್ರಚಾರ ಜಾಸ್ತಿ, ಫಲಿತಾಂಶ ನಾಸ್ತಿ ಎಂಬ ನೀತಿ: ಹೆಚ್​ಡಿಕೆ

2021ರಲ್ಲಿ ದೊರೆತಿದ್ದ ಲಿಖಿತ ಭರವಸೆ : ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡುವುದಾಗಿ 2021ರ ಏಪ್ರಿಲ್‌ನಲ್ಲಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಆದರೆ 2 ವರ್ಷ ಕಳೆದರೂ ಯಾವುದೇ ಬೇಡಿಕೆ ಈಡೇರಿಸಲಾಗಿಲ್ಲ. ಬಜೆಟ್‌ನಲ್ಲಿಯೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಏನನ್ನೂ ಹೇಳಲಾಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮತ್ತೆ ಶಿವಾಜಿ ಪ್ರತಿಮೆ‌ ಲೋಕಾರ್ಪಣೆ ; ಇದು ನಿಜವಾಗಿಯೂ ಹಾಸ್ಯಾಸ್ಪದ ಎಂದ ಸಿಎಂ ಬೊಮ್ಮಾಯಿ

ಮಾರ್ಚ್ 1ರಿಂದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ: ನೌಕರರ ಸಮಸ್ಯೆಗಳ ಪರಿಹಾರಕ್ಕೆ ವಿವಿಧ ರೀತಿಯ ಹೋರಾಟ ನಡೆಸಿದ್ದರೂ ಸ್ಪಂದಿಸಿಲ್ಲ. ಮಾರ್ಚ್ 1ರಿಂದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿಲ್ಲ. ಹೀಗಾಗಿ ಮಾರ್ಚ್ 24 ರಿಂದ ಬಸ್​ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಸಿಎಂ ಭೇಟಿಯಾದ ಧರ್ಮೇಂದ್ರ ಪ್ರಧಾನ್.. ರೇಸ್ ಕೋರ್ಸ್ ನಿವಾಸದಲ್ಲಿ ಚುನಾವಣಾ ರಣತಂತ್ರದ ಕುರಿತು ಚರ್ಚೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.