ETV Bharat / state

ರಾಜಕೀಯ ಪ್ರಚಾರದ ಬ್ಯಾನರ್​ಗಳಿಗೆ ತಡೆ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ

author img

By

Published : Mar 24, 2023, 7:29 PM IST

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೋರ್ಡಿಂಗ್​ಗಳು, ಬ್ಯಾನರ್​ಗಳು ಹಾಗೂ ಬಟಿಂಗ್ಸ್​ ಇತ್ಯಾದಿಗಳನ್ನು ತೆಗೆದು ಹಾಕುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ಅವರು ಹೇಳಿದ್ದಾರೆ.

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜಧಾನಿಯಲ್ಲಿ ಪ್ರಚಾರದ ಬ್ಯಾನರ್​​ಗಳಿಗೆ ತಡೆ ನೀಡಿ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುತ್ತೋಲೆ ಹೊರಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯಾವುದೇ ನಿಯಮ ಉಲ್ಲಂಘನೆ ಆಗದಂತೆ ಆಯಾ ವಲಯದ ನೋಡಲ್ ಅಧಿಕಾರಿಗಳು ನಿಗಾವಹಿಸಬೇಕು. ಬ್ಯಾನರ್ ಮಾಡುವ, ಕಟ್ಟುವವರ ವಿರುದ್ಧ ಕಾರ್ಯಾಚರಣೆ ನಡೆಸಿ, ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತುಷಾರ್ ಗಿರಿನಾಥ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಬಟಿಂಗ್ಸ್ ಇತ್ಯಾದಿಗಳನ್ನು ತೆಗೆದುಹಾಕಲು ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನು ಪಾಲಿಕೆ ಕಾಯ್ದೆಯ ಸೆಕ್ಷನ್ 254 ರ ಅಡಿಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಹೈಕೋರ್ಟ್ ಆದೇಶ : ಫ್ಲೆಕ್ಸ್‌, ಬ್ಯಾನರ್ ಅಳವಡಿಸುವುದನ್ನು ನಿಷೇಧಿಸಿ ಎಂದು ಹೈಕೋರ್ಟ್ ಈ ಹಿಂದೆ ಆದೇಶ ಹೊರಡಿಸಿತ್ತು. ಅದರಂತೆ, ಬಿಬಿಎಂಪಿ ಕಾಯ್ದೆ 2020, ಬಿಬಿಎಂಪಿ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಉಪ ವಿಧಿಗಳು 2018 ಹಾಗೂ ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ) ತಡೆ ಕಾಯ್ದೆ 1981 ಅನುಸಾರ ಅನಗತ್ಯ ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿತ್ತು.

ಬಿಬಿಎಂಪಿ ಮಾರ್ಷಲ್ಸ್‌, ಕಂದಾಯ ಮೌಲ್ಯ ಮಾಪಕರು, ನಿರೀಕ್ಷಕರು, ಸಹಾಯಕರು, ಕಿರಿಯ ಎಂಜಿನಿಯರ್‌ಗಳಿಗೆ ನಗರದಲ್ಲಿರುವ ಫ್ಲೆಕ್ಸ್‌ ಅಳವಡಿಸಿರುವುದರ ಕುರಿತು ಸರ್ವೇ ನಡೆಸಿ, ಎಫ್‌ಐಆರ್ ದಾಖಲಿಸಿ, ಫ್ಲೆಕ್ಸ್‌ ತೆರವುಗೊಳಿಸಲು ವೆಚ್ಚವಾದ ಹಣವನ್ನು ಅವರಿಂದಲೇ ವಸೂಲಿ ಮಾಡಲು ಹೈಕೋರ್ಟ್‌ ಸೂಚನೆ ನೀಡಿತ್ತು.

ಬಿಬಿಎಂಪಿಗೆ ಹೈಕೋರ್ಟ್ ತೀವ್ರ ತರಾಟೆ: ತಮ್ಮನ್ನು ತೋರ್ಪಡಿಸುವುದಕ್ಕೆ ಅಥವಾ ಇತರರನ್ನು ಓಲೈಕೆ ಮಾಡಲು ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳನ್ನು ಹಾಕಿ ನಗರದ ಸೌಂದರ್ಯಕ್ಕೆ ಧಕ್ಕೆ ತರುವವರ ವಿರುದ್ಧ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳದಿರುವುದು ನಿಜಕ್ಕೂ ಆಘಾತಕಾರಿ ಎಂದು ಬಿಬಿಎಂಪಿ ವಿರುದ್ಧ ಹೈಕೋರ್ಟ್ (ಮಾರ್ಚ್​-20) ತರಾಟೆಗೆ ತೆಗೆದುಕೊಂಡಿತ್ತು.

ಫ್ಲೆಕ್ಸ್, ಬ್ಯಾನರ್‌ಗಳ ಮೂಲಕ ನಗರದ ಸೌಂದರ್ಯವನ್ನು ಹಾಳು ಮಾಡುವವರ ವಿರುದ್ಧ ಕ್ರಮಕ್ಕೆ ಮುಂದಾಗದ ಬಿಬಿಎಂಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ, ಪಾಲಿಕೆ ಕೇವಲ ನಾಮಕವಾಸ್ತೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿತ್ತು.

ನ್ಯಾಯಾಲಯದ ಆದೇಶ ಪಾಲಿಸಿರುವ ಬಗ್ಗೆ ಬಿಬಿಎಂಪಿ ಮಾ.15 ರಂದು ಸಲ್ಲಿಸಿರುವ ಅನುಪಾಲನಾ ವರದಿ ಒಂದಿಷ್ಟು ಸಮಾಧಾನ ತಂದಿಲ್ಲ. ಆದ್ದರಿಂದ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಹಾಗೂ ಇತರೆ ಫಲಕಗಳನ್ನು ತೆರವುಗೊಳಿಸಿರುವ ಮತ್ತು ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬೇಕಾಗಿರುವ ಕ್ರಮಗಳ ಸಮಗ್ರ ವರದಿಯನ್ನು ನಾಲ್ಕು ವಾರಗಳಲ್ಲಿ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತ್ತು.

ಇದನ್ನೂ ಓದಿ : ಫ್ಲೆಕ್ಸ್ ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತೀವ್ರ ತರಾಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.