ETV Bharat / state

ತಮಿಳುನಾಡಿಗೆ ಕಾವೇರಿ ನೀರು ಖಂಡಿಸಿ 28ಕ್ಕೆ ಪ್ರತಿಭಟನೆ: ವಾಟಾಳ್ ನಾಗರಾಜ್

author img

By ETV Bharat Karnataka Team

Published : Oct 18, 2023, 10:55 PM IST

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಗುಟ್ಟಾಗಿ ಹರಿಸಿಕೊಂಡು ಬೀಗತನ ಬೆಳೆಸಿಕೊಂಡಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಟೀಕಿಸಿದರು.

watal-nagaraj-calls-protest-in-october-28
ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ 28ಕ್ಕೆ ಪ್ರತಿಭಟನೆ: ವಾಟಾಳ್ ನಾಗರಾಜ್

ವಾಟಾಳ್ ನಾಗರಾಜ್

ಆನೇಕಲ್ (ಬೆಂಗಳೂರು): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಅಕ್ಟೋಬರ್‌ 28ರಂದು ಬೆಂಗಳೂರು, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ ಕಚೇರಿ ಮುಂಭಾಗ ಕನ್ನಡ ಪರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಇಂದು ತಮಿಳುನಾಡಿನ ಹೊಸೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿದಿದ್ದಕ್ಕೆ, ಗಡಿ ದಾಟಿ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

ಕನ್ನಡ ಪರ ಒಕ್ಕೂಟ ಮತ್ತು ನನ್ನ ಬಗ್ಗೆ ತಮಿಳುನಾಡಿನಲ್ಲಿ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶವನ್ನು ಪಾಲಿಸಿ ರಾಜ್ಯದ ಜನತೆಗೆ ನೀರಿಲ್ಲದಂತೆ ಮಾಡಿದೆ. ಪರಿಸ್ಥಿತಿಯ ಅರಿವಿದ್ದರೂ ತಮಿಳುನಾಡು ಸರ್ಕಾರ ಕೊಡು-ಕೊಳ್ಳುವಿಕೆಯಿಲ್ಲದೇ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

ತಮಿಳುನಾಡಿನ ಹೊಸೂರು ಕನ್ನಡದ ಪ್ರದೇಶಗಳಾಗಿದ್ದು, ಈ ಪ್ರದೇಶಗಳು ರಾಜ್ಯಕ್ಕೆ ಸೇರಬೇಕಾಗಿದೆ. ಈ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇತ್ತೀಚಿಗೆ ಅತ್ತಿಬೆಲೆಯ ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ನೀಡಿದೆ. ಆದರೆ ತಮಿಳುನಾಡು ಸರ್ಕಾರ 3 ಲಕ್ಷ ನೀಡಿದೆ ಇವರಿಗೆ ನಾಚಿಕೆಯಾಗುವುದಿಲ್ಲವೇ ಎಂದರು.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ವಿರೋಧ ಮಾಡುತ್ತಿದೆ. ರಾಜ್ಯದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸಿಕೊಳ್ಳುವುದು ನಮ್ಮ ಹಕ್ಕು. ಇದಕ್ಕೆ ವಿರೋಧ ಮಾಡುವ ಮೂಲಕ ತಮಿಳುನಾಡು ದ್ವೇಷ ಸಾಧಿಸುತ್ತಿದೆ. ಮೇಕೆದಾಟು ಕಾಮಗಾರಿಗೆ ತಡೆ ಮಾಡದಿರಿ ಸ್ಟಾಲಿನ್, ಇಲ್ಲಿನ ವಿದ್ಯುತ್ ಹಾಗೂ ನೀರು ತಮಿಳುನಾಡಿಗೂ ಹರಿಯಲಿದೆ. ಕಾವೇರಿ ನೀರನ್ನು ಕರ್ನಾಟಕದ ತಮಿಳಿಗರು ಕುಡಿಯುತ್ತಾರೆ ಆದ್ದರಿಂದ ಇಲ್ಲಿಗೂ ಕುಡಿಯಲು ನೀರಿರಲಿ. ಮುಂಬರುವ ದಿನಗಳಲ್ಲಿ ತಮಿಳುನಾಡು ತನ್ನ ನಡವಳಿಕೆಯನ್ನು ಬದಲಾಯಿಸಿಕೊಳ್ಳದಿದ್ದಾರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ತಮಿಳಿನ ಲಿಯೋ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದ್ದು ಇದನ್ನು ತಡೆಯಲಾಗುವುದು ಎಂದರು. ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಗುಟ್ಟಾಗಿ ಹರಿಸಿಕೊಂಡು ಬೀಗತನ ಬೆಳೆಸಿಕೊಂಡಿದೆ. ಈ ಮೂಲಕ ರಾಜ್ಯದ ರೈತರನ್ನು ಬಲಿಕೊಟ್ಟಿದ್ದಾರೆ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಭಟನೆಯಲ್ಲಿ ಕನ್ನಡ ಪರ ಒಕ್ಕೂಟದ ಸಾ.ರಾ.ಗೋವಿಂದ್‌, ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥದೇವ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ ಜಿಗಣಿ ಪುನೀತ್‌ ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ: ತಮಿಳುನಾಡಿಗೆ ನೀರು ಭಾಗ್ಯ, ಪಂಚರಾಜ್ಯಗಳಿಗೆ ಹಣದ ಭಾಗ್ಯ, ಕರ್ನಾಟಕದ ಜನರಿಗೆ ಕತ್ತಲೆ ಭಾಗ್ಯ: ನಳಿನ್‍ಕುಮಾರ್ ಕಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.