ETV Bharat / state

Cauvery water: ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಪುನರ್‌ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡುತ್ತೇವೆ: ಡಿ.ಕೆ.ಶಿವಕುಮಾರ್

author img

By

Published : Aug 17, 2023, 10:33 PM IST

Cauvery water: ತಮಿಳುನಾಡಿಗೆ ನೀರು ಹರಿಸುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ವಿಷಯದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು.

we-request-the-authorities-to-reconsider-the-decision-to-release-water-to-tamil-nadu-dcm-dk-shivakumar
ಡಿಸಿಎಂ ಡಿಕೆ ಶಿವಕುಮಾರ್

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು : ಪ್ರತಿನಿತ್ಯ 10,000 ಕ್ಯೂಸೆಕ್‌​ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರವನ್ನು ಪುನರ್‌ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾ ಬಳಿ ಮಾತನಾಡಿದ ಅವರು, ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಹೀಗಿದ್ದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ ನೀರು ಇಟ್ಟುಕೊಳ್ಳುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರಕ್ಕೆ ನಿರ್ಧಾರವನ್ನು ಪುನರ್‌ಪರಿಶೀಲಿಸುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.

ನಾವು ಆರಂಭದಲ್ಲಿ ಸ್ವಲ್ಪ ನೀರು ಬಿಟ್ಟಿದ್ದೇವೆ. ಆದರೆ ಅದು ಅವರಿಗೆ ಸಮಾಧಾನ ಇಲ್ಲ. ನಮ್ಮಲ್ಲೂ ನೀರಿಗೆ ಬರ ಇದೆ. ಆದೇಶ ನೀಡಿರುವ ಅಥಾರಿಟಿಗೆ ಪುನರ್​ ಪರಿಶೀಲಿಸುವಂತೆ ನಾವು ಮನವಿ ಮಾಡುತ್ತೇವೆ. ನಮ್ಮಲ್ಲಿ ಬೆಳೆ ಬೆಳೆಯುವುದಕ್ಕೆ, ಕುಡಿಯಲು ನೀರಿನ ಸಮಸ್ಯೆ ಎದುರಾಗುತ್ತಿದೆ. ನಾವು ಬಿಟ್ಟ ನೀರು ಅಲ್ಲಿಗೆ ಹೋಗಿ ತಲುಪಲು 5 ದಿನ ಆಗ್ತಿದೆ. ಈ ವಿಚಾರವನ್ನು ಅಥಾರಿಟಿಗೆ ಗಮನಕ್ಕೆ ತರುತ್ತೇವೆ. ನೀರನ್ನು ಉಪಯೋಗಿಸಿಕೊಂಡು ತಮಿಳುನಾಡು ರೈತರು ಸಾಕಷ್ಟು ಬೆಳೆ ಬೆಳೆದಿದ್ದಾರೆ. ನಮ್ಮಲ್ಲಿ ಸಾಕಷ್ಟು ಬರ ಇದೆ. ಆದ್ರೆ ನಾವು ಏನೇ ಹೇಳಿದ್ರೂ ಅವರು ಯಾವಾಗಲು ಬೇಡಿಕೆ ಮಾಡೇ ಮಾಡ್ತಾರೆ ಎಂದರು.

ಸರ್ವಪಕ್ಷ ಸಭೆ ಕರೆಯುತ್ತೇವೆ: ಕುಮಾರಸ್ವಾಮಿಯವರು ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಕೇಳಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣ ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳ ಬಗ್ಗೆ ಸರ್ವಪಕ್ಷಗಳ ಜೊತೆ ಚರ್ಚೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ನಾವು ಕೂಡ ಸರ್ವಪಕ್ಷ ಸಭೆ ನಡೆಸುವ ಬಗ್ಗೆ ಆಲೋಚನೆ ಮಾಡಿದ್ದೇವೆ ಎಂದು ತಿಳಿಸಿದರು.

ಬೊಮ್ಮಾಯಿಯವರು ಕೂಡ ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಅವರ ಸರ್ಕಾರ ಇದ್ದಾಗಲೂ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ದೇವೇಗೌಡರು ಪ್ರಧಾನಿಯಾಗಿದ್ದಾಗಲೂ ನೀರು ಬಿಡಲಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ನೀರು ಬಿಡಲಾಗಿತ್ತು.‌ ಈ ಬಗ್ಗೆ ದಾಖಲೆಗಳಿವೆ. ಈ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನಮ್ಮ ಪರಿಸ್ಥಿತಿ ಹದಗೆಟ್ಟಿದ್ದು, ತಮಿಳುನಾಡಿನವರು ತಮ್ಮ ಆಗ್ರಹ ಮುಂದುವರಿಸಿದ್ದಾರೆ ಎಂದು ಹೇಳಿದರು.

ನೀರು ಬಿಡುಗಡೆಗೆ ಮಂಡ್ಯ ಕಾಂಗ್ರೆಸ್ ಶಾಸಕರಿಂದ ಖಂಡನೆ : ಕಾವೇರಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧವೇ ಮಂಡ್ಯ ಕಾಂಗ್ರೆಸ್ ಶಾಸಕ ರವಿ ಕುಮಾರ್ ಗಣಿಗ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ಕ್ರಮವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ರೈತರಿಗೆ ನೀರು ಇಲ್ಲ. ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಈ ಕೂಡಲೇ ತಮಿಳುನಾಡಿಗೆ ಬಿಡುತ್ತಿರುವ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ತಮಿಳುನಾಡಿಗೆ ಲಂಗು ಲಗಾಮಿಲ್ಲದೆ ಕಾವೇರಿ ನೀರು ಬಿಡುತ್ತಿರುವುದು ನೋವು ತಂದಿದೆ: ವಾಟಾಳ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.