ETV Bharat / state

ನಾಳೆ ಕೌಂಟಿಂಗ್​ಗೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ: ಆರ್​ಪಿಡಿ ಕಾಲೇಜು ಸುತ್ತ ಪೊಲೀಸ್ ಸರ್ಪಗಾವಲು..

author img

By

Published : May 12, 2023, 7:12 PM IST

ನಾಳೆ ಮತ ಎಣಿಕೆ ನಡೆಯಲಿರುವ ಬೆಳಗಾವಿಯ ರಾಣಿ ಪಾರ್ವತಿದೇವಿ ಕಾಲೇಜಿನ ಸ್ಟ್ರಾಂಗ್ ರೂಮ್​ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

belgavi-district-administration-is-ready-for-counting-tomorrow
ನಾಳೆ ಕೌಂಟಿಂಗ್​ಗೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲೇ ಎರಡನೇ ಅತೀ ಹೆಚ್ಚು ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಮತ ಎಣಿಕೆ ನಡೆಯಲಿರುವ ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಸ್ಟ್ರಾಂಗ್ ರೂಮ್​ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ವೇಳೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಎಣಿಕೆ ಕೇಂದ್ರ ಆರ್​ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಮೊದಲಿಗೆ 8 ಗಂಟೆಗೆ ಅಂಚೆ ಮತಗಳನ್ನು ಎಣಿಕೆ ಮಾಡಲಾಗುವುದು. 8.30ರಿಂದ ಇವಿಎಂ ಮತ ಎಣಿಕೆ ಪ್ರಾರಂಭವಾಗುತ್ತದೆ. ಒಂದು ಟೇಬಲ್​ನಲ್ಲಿ 500 ಮತಗಳನ್ನು ಎಣಿಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಾಹ್ನದವರೆಗೆ ಜಿಲ್ಲೆಯ 18 ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ ಎಂದರು.

ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಮಾಡಬಹುದು: 4 ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಒಳಗಡೆ ಸಶಸ್ತ್ರ ಸೀಮಾ ಪಡೆ ಇದೆ. ಎರಡನೇ ಹಂತದಲ್ಲಿ ಕೆಎಸ್ಆರ್​ಪಿ, ಮೂರನೇ ಹಂತದಲ್ಲಿ ನಮ್ಮ ರಾಜ್ಯದ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಇನ್ನು ಗುರುತಿನ ಚೀಟಿ ಇಲ್ಲದೇ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು 5 ಸಾವಿರ ಜನ ಇರುವುದರಿಂದ ಏಜೆಂಟ್​ರಿಗೂ ಗುರುತಿನ ಚೀಟಿ ನೀಡಲಾಗಿದೆ. 200 ಮೀಟರ್ ಹೊರಗಡೆ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಮಾಡಬಹುದು ಎಂದ ಜಿಲ್ಲಾಧಿಕಾರಿ, ಸರಾಸರಿ 22-23 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಪ್ರತಿ ವಿಧಾನಸಭೆ‌ ಕ್ಷೇತ್ರಕ್ಕೂ ಬೇರೆ ಬೇರೆ ಸುತ್ತುಗಳು ಇರುತ್ತವೆ. ಅತೀ ಹೆಚ್ಚು ಬೆಳಗಾವಿ ಗ್ರಾಮೀಣ ಕ್ಷೇತ್ರವು 29 ಸುತ್ತು ಹೊಂದಿದೆ ಎಂದರು.

ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ನಾಳೆ ಮತ ಎಣಿಕೆ ಸಂದರ್ಭದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸ್ಟ್ರಾಂಗ್ ರೂಂ ಹೊರಗಡೆಯೂ ಬಂದೋಬಸ್ತ್​ ಏರ್ಪಡಿಸಲಾಗಿದೆ. 18 ವಿಧಾನಸಭಾ ಕ್ಷೇತ್ರದ ಜನರು ಬರುತ್ತಾರೆ. ಕೌಟಿಂಗ್ ಏಜೆಂಟ್, ಅಧಿಕಾರಿಗಳು ಸೇರಿದಂತೆ ಸುಮಾರು 5 ಸಾವಿರ ಜನ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ನಗರ ಪೊಲೀಸ್ ಇಲಾಖೆಯಿಂದಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಮತ ಎಣಿಕೆ ಕೇಂದ್ರದ ಸುತ್ತ ಕೆಎಸ್ಆರ್​ಪಿ ತುಕಡಿ ಸೇರಿದಂತೆ ಸುಮಾರು 1500 ಜನ ಸಿಬ್ಬಂದಿ ನೇಮಕ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು. ಈ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಉಪಸ್ಥಿತರಿದ್ದರು. ಒಟ್ಟಿನಲ್ಲಿ ನಾಳೆ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು, ಜಿಲ್ಲೆಯ 18 ಕ್ಷೇತ್ರಗಳ 187 ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಅಂತಿಮವಾಗಿ ಮತದಾರ ಪ್ರಭುಗಳು ಯಾರಿಗೆ ಆಶೀರ್ವಾದ ಮಾಡಿದ್ದಾರೆ ಎಂಬುದು ನಾಳೆ ಬಹಿರಂಗ ಆಗಲಿದೆ.

ಇದನ್ನೂ ಓದಿ:ಹೊಸ ಸರ್ಕಾರ ರಚನೆ ಸಂಬಂಧ ಹೈಕಮಾಂಡ್ ಜೊತೆ ಮಾತುಕತೆ : ಮುರುಗೇಶ್ ನಿರಾಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.