ETV Bharat / state

ಗೋಕಾಕ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಮೇಶ ಜಾರಕಿಹೊಳಿ

author img

By

Published : Apr 13, 2023, 5:24 PM IST

Updated : Apr 13, 2023, 6:57 PM IST

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

former-minister-ramesh-jarkiholi-filed-nomination
ಬೆಳಗಾವಿ : ಮೊದಲ ದಿನವೇ ನಾಮಪತ್ರ ಸಲ್ಲಿಸಿದ ರಮೇಶ ಜಾರಕಿಹೊಳಿ

ಬೆಳಗಾವಿ : ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಗುರುವಾರ ಗೋಕಾಕ್ ಪಟ್ಟಣದ ತಹಸೀಲ್ದಾರ ಕಚೇರಿಗೆ ಆಗಮಿಸಿದ ಅವರು ಗೋಕಾಕ್ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ನಾಮಪತ್ರ ಸಲ್ಲಿಸಿದರು.

1985 ರಲ್ಲಿ ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿ ಕೇವಲ 4000 ಮತಗಳ ಅಂತರದಿಂದ ಸೋತಿದ್ದ ರಮೇಶ್ ಜಾರಕಿಹೊಳಿ ಈಗ ಎಂಟನೇ ಬಾರಿ ಸ್ಪರ್ಧಿಸಲು ಉಮೇದುವಾರಿಕೆ ಸಲ್ಲಿಸಿದ್ದಾರೆ. 1999, 2004, 2008, 2013, 2018ರ ಸಾರ್ವತ್ರಿಕ ಚುನಾವಣೆ ಮತ್ತು 2019ರ ಉಪಚುನಾವಣೆಯಲ್ಲಿ ಸತತವಾಗಿ ಗೆಲ್ಲುವ ಮೂಲಕ ತಮ್ಮ ಪಾರುಪತ್ಯ ಮುಂದುವರಿಸಿದ್ದರು. ಆರು ಗೆಲುವು ಕಂಡಿರುವ ಅವರು, ಏಳನೇ ಬಾರಿ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಕೆ : ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಇಂದು ನಾಮಪತ್ರ ಸಲ್ಲಿಸಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಟಿ.ಸೋಮಶೇಖರ್ ನಾಮಪತ್ರ ಸಲ್ಲಿಸಿದರು. ಹೇರೋಹಳ್ಳಿ ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿ ಕಚೇರಿಗೆ ಪತ್ನಿ ರಾಧಾ ಸೋಮಶೇಖರ್ ಮತ್ತು ಪುತ್ರ ನಿಶಾಂತ್ ಸೋಮಶೇಖರ್ ಹಾಗೂ ಸೂಚಕರಾದ ಅನಿಲ್ ಚೆಳಗೆರೆ ಮತ್ತು ರಂಗರಾಜ್ ಜೊತೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಸಕುಟುಂಬ ಸಮೇತರಾಗಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಕೈಲಾಸಾಶ್ರಮದ ಮಠಾಧಿಪತಿಗಳಾದ ಶ್ರೀ ಜಯಂದ್ರಪುರಿ ಮಹಾಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಆಪ್​ ಅಭ್ಯರ್ಥಿ ಎಂ.ಶ್ರೀನಿವಾಸ ರೆಡ್ಡಿ ನಾಮಪತ್ರ ಸಲ್ಲಿಕೆ : ಇಂದು ಮಧ್ಯಾಹ್ನ ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಂ. ಶ್ರೀನಿವಾಸ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದರು. ಬೃಹತ್ ಮೆರವಣಿಗೆಯ ಮೂಲಕ ಆಡುಗೋಡಿ ಕೆಂಪೇಗೌಡ ಸಮುದಾಯ ಭವನದ ಬಿಬಿಎಂಪಿ ಕಂದಾಯ ಅಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಚಿಕ್ಕಪೇಟೆ ಕ್ಷೇತ್ರದಿಂದ ಮಾಜಿ ಮೇಯರ್​ ನಾಮಪತ್ರ ಸಲ್ಲಿಕೆ : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ತಮ್ಮ ನಾಮಪತ್ರವನ್ನು ಸೌತ್ ಅಂಡ್ ಸರ್ಕಲ್ ಬಳಿ ಇರುವ ರಿಟರ್ನಿಂಗ್ ಆಫೀಸರ್ ಕಚೇರಿಯಲ್ಲಿ ಸಲ್ಲಿಸಿದರು. ಜಯನಗರ ಎರಡನೇ ಬಡಾವಣೆ ಅಶೋಕ ಪಿಲ್ಲರ್ ನಿಂದ ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡ ಉದಯ್ ಶಂಕರ್, ಕೆಜಿಎಫ್ ಬಾಬು, ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು.

ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ : ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಅಮೃತ ದೇಸಾಯಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಧಾರವಾಡ ಎಸಿ ಕಚೇರಿಗೆ ತಮ್ಮ ಪತ್ನಿ ಹಾಗೂ ಬೆಂಬಲಿಗರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಈ‌ ವಾರದಲ್ಲಿ ಮತ್ತೊಮ್ಮೆ ಮೆರವಣಿಗೆ ಮೂಲಕ ಬಿಜೆಪಿ ನಾಯಕರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಏ 18ರಂದು ಕಾರ್ಯಕರ್ತರ ಜೊತೆ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು. ಟಿಕೆಟ್ ವಂಚಿತ ತವನಪ್ಪ ಅಷ್ಟಗಿ ಮುನಿಸು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೆ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಹೇಳಿದ್ದೆ. ಆದರೂ ಅವರು ಆತುರದ‌ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಚಾಮರಾಜನಗರದಲ್ಲಿ ನಾಮಪತ್ರ ಸಲ್ಲಿಕೆ : ಕರ್ನಾಟಕದ ಕೊನೆಯ ವಿಧಾನಸಭಾ ಕ್ಷೇತ್ರವಾದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ಕಾಂಗ್ರೆಸ್​ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾ ಭವನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ ಗಣೇಶಪ್ರಸಾದ್ ಇಂದು ಚುನಾವಣಾಧಿಕಾರಿ ‌ಮಲ್ಲಿಕಾರ್ಜುನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಸಂಸದ ಎ.ಸಿದ್ದರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಸಮೀಪದ ಪಾರ್ವತಿ ಬೆಟ್ಟದಲ್ಲಿ ಕುಟುಂಬಸ್ಥರ ಜೊತೆಗೆ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ : ನಾಳೆ ಜೆಡಿಎಸ್ ಅಭ್ಯರ್ಥಿಗಳ 2ನೇ ಲಿಸ್ಟ್ ಬಿಡುಗಡೆ: ಹೆಚ್ ಡಿ ಕುಮಾರಸ್ವಾಮಿ

Last Updated :Apr 13, 2023, 6:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.