ETV Bharat / state

ಜೈನ ಮುನಿ ಹತ್ಯಾ ಆರೋಪಿಗಳಿಗೆ ವರ್ಷದೊಳಗೆ ಮರಣ ದಂಡನೆ ವಿಧಿಸಬೇಕು: ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್

author img

By

Published : Jul 11, 2023, 7:58 PM IST

ಶ್ರೀ ಕಾಮಕುಮಾರ ನಂದಿ ಮಹಾರಾಜ ಹತ್ಯೆ ಮಾಡಿದ ಆರೋಪಿಗಳಿಗೆ ಪ್ರಚೋದನೆ, ಸಾಧನ, ಸಲಕರಣೆ ಒದಗಿಸಿದವರನ್ನೂ ಸಹ ಶಿಕ್ಷೆಗೆ ಒಳಪಡಿಸಬೇಕು. ಅಪರಾಧಿಗಳಿಗೆ ಕಠಿಣ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದ್ದಾರೆ.

Abdul Azim spoke at a press conference.
ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ಆಗಬೇಕು. ಹತ್ಯೆ ಮಾಡಿದವರ ಜತೆಗೆ ಹತ್ಯೆಗೆ ಪ್ರಚೋದನೆ, ಸಾಧನ, ಸಲಕರಣೆ ಒದಗಿಸಿದವರನ್ನೂ ಶಿಕ್ಷೆಗೆ ಒಳಪಡಿಸಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತಿಳಿಸಿದ್ದಾರೆ.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀ ಜೈನ ಮುನಿ ಹತ್ಯೆ ಪ್ರಕರಣದಲ್ಲಿ ಮೃತ ದೇಹವನ್ನು ವೈಜ್ಞಾನಿಕವಾಗಿ ಗುರುತಿಸುವ ನಿಟ್ಟಿನಲ್ಲಿ ಡಿಎನ್ಎ ಪರೀಕ್ಷೆ ಅಗತ್ಯವಿದೆ. ಸದ್ಯ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಹಿಸಿಕೊಂಡಿದ್ದಾರೆ. ಇದು ಅತ್ಯಂತ ಹ್ಯೇಯ ಮತ್ತು ಖಂಡನೀಯ ಪ್ರಕರಣ ಆಗಿರುವುದರಿಂದ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಬೇಕು ಎಂದು ತಿಳಿಸಲಾಗಿದೆ.

ಸರ್ಕಾರಕ್ಕೆ ವಾರದೊಳಗೆ ವರದಿ: ಮೇಲ್ವಿಚಾರಣೆಯನ್ನು ಉತ್ತರ ವಲಯ ಐಜಿಪಿ ಅವರಿಗೆ ವಹಿಸಿಕೊಡುವಂತೆ ಸರ್ಕಾರಕ್ಕೆ ಒಂದು ವಾರದೊಳಗೆ ವರದಿ ಸಲ್ಲಿಸಲಾಗುವುದು. ಉತ್ತರ ವಲಯ ಐಜಿ ಅವರು ತನಿಖೆಯ ನೇತೃತ್ವ, ಮೇಲ್ವಿಚಾರಣೆ ವಹಿಸಿಕೊಳ್ಳಬೇಕು. ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ ನಂತರ ನಿರಂತರ ಫಾಲೋ ಅಪ್ ಮಾಡಿ ಅದನ್ನೂ ಮುಂದಿನ ಆರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ ನ್ಯಾಯ ಕೊಡಿಸಬೇಕು. ಅಪರಾಧಿಗಳನ್ನು ಮರಣದಂಡನೆಗೆ ಗುರಿ ಮಾಡುವ ನಿಟ್ಟಿನಲ್ಲಿ ತನಿಖೆ ಆರಂಭಗೊಳ್ಳಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಅಬ್ದುಲ್​ ಅಜೀಮ್​​ ಹೇಳಿದ್ದಾರೆ.

ಹೀರೆಕೋಡಿ ನಂದಿ ಪರ್ವತ ಆಶ್ರಮದ ಶ್ರೀ ಕಾಮಕುಮಾರ ನಂದಿ ಮಹಾರಾಜ ಅವರ ಬರ್ಬರ ಹತ್ಯೆ ಪ್ರಕರಣವು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದೆ. ಹಿರೇಕೋಡಿ ಜೈನ ಆಶ್ರಮಕ್ಕೆ ಭೇಟಿ ನೀಡಿ, ಪ್ರಕರಣ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿರುತ್ತೇನೆ. ಅಲ್ಪಸಂಖ್ಯಾತರ ಹಕ್ಕುಗಳು, ಶಾಸನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಹಿತರಕ್ಷಣೆಯು ಆಯೋಗದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣ ತನಿಖೆ ಹಂತದಲ್ಲಿದ್ದು, ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿಗಳು ತನಿಖೆಯಲ್ಲಿ ತಿಳಿದುಬರಲಿವೆ. ಪ್ರಕರಣದ ಪ್ರಮುಖ ಅಂಶಗಳ ಕುರಿತು ತನಿಖಾ ತಂಡದ ಜತೆಯೂ ಚರ್ಚೆ ನಡೆಸಲಾಗಿದೆ. ಕೊಲೆಯ ಉದ್ಧೇಶ, ಸಾಕ್ಷಿ ನಾಶ ಪ್ರಯತ್ನ, ಕೊಲೆಗೆ ಸಹಕರಿಸಿದವರು ಸೇರಿದಂತೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ತಿಳಿಸಲಾಗಿದೆ ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುಖ್ತಾರ್ ಹುಸೇನ್‌ ಪಠಾಣ, ಅಲ್ಪಸಂಖ್ಯಾತರ ಆಯೋಗದ ಮಾಜಿ ನಿರ್ದೇಶಕ ಸುರೇಶ್ ತಂಗಾ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಿರ್ಜಾನವರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂಓದಿ:ಜೈನ‌ ಮುನಿಗಳ ಹತ್ಯೆ ಕೇಸ್: ಇಬ್ಬರು ಆರೋಪಿಗಳನ್ನ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.