ETV Bharat / state

Lakshmi Hebbalkar: ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

author img

By

Published : Jun 18, 2023, 4:36 PM IST

Updated : Jun 18, 2023, 5:27 PM IST

ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಎಲ್ಲ ಆಶ್ವಾಸನೆಗಳನ್ನು ಹಂತ ಹಂತವಾಗಿ ಈಡೇರಿಸಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

Minister Lakshmi Hebbalkar Participate in congratulations program in Bastawada
ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಸಾಮಾಜಿಕವಾಗಿ, ರಾಜಕೀಯವಾಗಿ ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ. ನಾನು ಮಂತ್ರಿಯಾದರೂ ಕ್ಷೇತ್ರದ ಮನೆ ಮಗಳೇ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನನಗೆ ರಾಜಕೀಯ ಜನ್ಮ ನೀಡಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರ. ಕಳೆದ 5 ವರ್ಷಗಳಿಂದ ಕ್ಷೇತ್ರಕ್ಕೆ ನನ್ನಿಂದಾದಷ್ಟು ಕೆಲಸ ಮಾಡಿದ್ದೇನೆ. ಈಗ ಸಚಿವ ಸ್ಥಾನ ಸಿಕ್ಕಿರುವುದರಿಂದ ಇನ್ನಷ್ಟು ಹೆಚ್ಚು ಅಭಿವೃದ್ಧಿ ಯೋಜನೆಗಳನ್ನು ಕ್ಷೇತ್ರಕ್ಕೆ ತರಲು ಸಹಾಯವಾಗಿದೆ. ಈ ಸ್ಥಾನ ದೊರಕಲು ಪಕ್ಷದ ವರಿಷ್ಠರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಅಷ್ಟೇ ಮುಖ್ಯವಾಗಿ ಗ್ರಾಮೀಣ ಕ್ಷೇತ್ರದ ಜನರು ಕಾರಣ. ಹಾಗಾಗಿ ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ಭಾವುಕರಾದರು.

ಕಾಂಗ್ರೆಸ್ ಎಂದೂ ಕೊಟ್ಟ ಮಾತು ತಪ್ಪುವುದಿಲ್ಲ: ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಎಲ್ಲ ಆಶ್ವಾಸನೆಗಳನ್ನು ಹಂತ ಹಂತವಾಗಿ ಈಡೇರಿಸಲಿದೆ. ಈ ಬಗ್ಗೆ ಯಾರಿಗೂ ಗೊಂದಲ, ಅನುಮಾನ ಬೇಡ. ಯೋಜನೆಗಳು ಆರಂಭವಾದ ನಂತರ ಸಮಸ್ಯೆಗಳು ಬರಬಾರದೆನ್ನುವ ಕಾರಣಕ್ಕೆ ಕೆಲ ದಿನ ವಿಳಂಬವಾಗುತ್ತಿದೆ. ಇದಕ್ಕೆ ಯಾವುದೇ ಅಪಾರ್ಥ ಬೇಡ. ಕಾಂಗ್ರೆಸ್ ಎಂದೂ ಕೊಟ್ಟ ಮಾತು ತಪ್ಪುವುದಿಲ್ಲ ಎಂದು ಸಚಿವರು ಹೇಳಿದರು.

ಮಹಿಳೆಯರ ಮುಖದಲ್ಲಿ ಸಂತಸ ಮೂಡಿಸಲು ನನಗೆ ಬಹಳ ಹೆಮ್ಮೆ ಎನಿಸುತ್ತದೆ: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಅನ್ನಭಾಗ್ಯ ಮತ್ತಿತರ ಯೋಜನೆಗಳು ಮಹಿಳೆಯರನ್ನು ಸಬಲೀಕರಣದತ್ತ ಕೊಂಡೊಯ್ಯಲಿವೆ. ಮಹಿಳೆಯರಲ್ಲಿ ಶಕ್ತಿ ತುಂಬಲೆಂದೇ ಇಂಥ ಯೋಜನೆಗಳನ್ನು ರೂಪಿಸಲಾಗಿದೆ. ಗೃಹ ಲಕ್ಷ್ಮೀ ನನ್ನ ಇಲಾಖೆಗೆ ಸಂಬಂಧಿಸಿರುವುದರಿಂದ ಇದು ಮಹಿಳೆಯರಿಗೆ ಅತಿ ಹೆಚ್ಚು ಪ್ರಯೋಜನಕಾರಿಯಾಗಿದೆ. ಈ ಯೋಜನೆ ಮೂಲಕ ಮಹಿಳೆಯರ ಮುಖದಲ್ಲಿ ಸಂತಸ ಮೂಡಿಸಲು ನನಗೆ ಬಹಳ ಹೆಮ್ಮೆ ಎನಿಸುತ್ತದೆ. ಮುಂದಿನ ದಿನಗಳಲ್ಲೂ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನಕಲ್ಯಾಣಕ್ಕೆ ಜನತೆಯ ಸಹಕಾರ ಅಗತ್ಯವಾಗಿದೆ ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್​ ಮಂತ್ರಿಯಾದರೂ ಕ್ಷೇತ್ರವನ್ನು ಕಡೆಗಣಿಸುವುದಿಲ್ಲ - ಚನ್ನರಾಜ ಹಟ್ಟಿಹೊಳಿ: ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಗ್ರಾಮೀಣ ಕ್ಷೇತ್ರದ ಜನತೆ ಹಾಗೂ ನಾವೆಲ್ಲ ಒಂದೇ ಕುಟುಂಬವಿದ್ದಂತೆ. ನಾವೆಲ್ಲರೂ ಸೇರಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡೋಣ. ಸಹೋದರಿ ಲಕ್ಷ್ಮೀ ಹೆಬ್ಬಾಳಕರ ಅವರು ಮಂತ್ರಿಯಾದರೂ ಕ್ಷೇತ್ರವನ್ನು ಕಡೆಗಣಿಸುವುದಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಎಂದಿಗೂ ಬದ್ಧ ಎಂದರು. ಈ ವೇಳೆ ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಸನ್ಮಾನಿಸಿದರು. ಸ್ಥಳೀಯ ಮುಖಂಡರು, ಮಹಿಳೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜಕೀಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Last Updated : Jun 18, 2023, 5:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.