ETV Bharat / state

ಬರ ಪರಿಸ್ಥಿತಿ ಬಗ್ಗೆ ಚರ್ಚಿಸಲು ಅವಕಾಶ ಕೋರಿ ನಿಲುವಳಿ ಸೂಚನೆಯಡಿ ನೋಟಿಸ್ ನೀಡಿದ ಪ್ರತಿಪಕ್ಷಗಳು

author img

By ETV Bharat Karnataka Team

Published : Dec 4, 2023, 10:34 PM IST

ಬೆಳಗಾವಿ
ಬೆಳಗಾವಿ

ಬರ ಪರಿಸ್ಥಿತಿ ಚರ್ಚಿಸಲು ಅವಕಾಶವನ್ನು ಕೋರಿ ನಿಲುವಳಿ ಸೂಚನೆಯಡಿ ಪ್ರತಿಪಕ್ಷಗಳು ನೋಟಿಸ್ ನೀಡಿವೆ.

ಬೆಳಗಾವಿ/ಬೆಂಗಳೂರು: ಬೆಳಗಾವಿಯಲ್ಲಿ ಸೋಮವಾರದಿಂದ ಚಳಿಗಾಲ ಅಧಿವೇಶನ ಆರಂಭವಾಗಿದೆ. ಮೊದಲ ದಿನವೇ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಲು ಅವಕಾಶ ಕೋರಿ ಪ್ರತಿಪಕ್ಷಗಳು ನಿಲುವಳಿ ಸೂಚನೆಯಡಿ ನೋಟಿಸ್ ನೀಡಿವೆ.

ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರಿಗೆ ನಿಲುವಳಿ ಸೂಚನೆ ನೋಟಿಸ್ ನೀಡಲಾಗಿದ್ದು, ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಕೋರಲಾಗಿದೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್ ನೀಡಿದ್ದಾರೆ.

ರಾಜ್ಯದಲ್ಲಿ ಮಳೆಯಿಲ್ಲದೆ ತೀವ್ರ ಬರಗಾಲ ಆವರಿಸಿದೆ. ಕೃಷಿ, ತೋಟಗಾರಿಕೆ ಬೆಳೆಗಳು ಮಳೆ ಅಭಾವದಿಂದ ಹಾನಿಯಾಗಿವೆ. ಸುಮಾರು 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಾಶವಾಗಿದ್ದು, ಆತಂಕಕ್ಕೊಳಗಾಗಿರುವ ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ತೀವ್ರ ಸ್ವರೂಪದ ಬರ ಪರಿಸ್ಥಿತಿ ಇದ್ದರೂ ರಾಜ್ಯದಲ್ಲಿ ಸಮಪರ್ಕವಾಗಿ ಬರ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ಕೃಷಿ, ಕೂಲಿ ಕಾರ್ಮಿಕರು ಉದ್ಯೋಗ ಹುಡುಕಿಕೊಂಡು ಬೇರೆ ರಾಜ್ಯಗಳತ್ತ ಗುಳೆ ಹೋಗುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 223 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ರೈತರಿಗೆ 2000 ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ.

ಬರ ಪರಿಹಾರ ಕಾಮಗಾರಿಗಳು ಸರಿಯಾಗಿ ನಡೆಯುತ್ತಿಲ್ಲ. ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಮೇವು ಬ್ಯಾಂಕ್ ಸ್ಥಾಪನೆ, ಗೋಶಾಲೆ ತೆರೆಯಲು ಅಗತ್ಯ ಕ್ರಮ ಕೈಗೊಂಡಿಲ್ಲ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಶಾಸಕರು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ನೋಟಿಸ್‍ನಲ್ಲಿ ಕೋರಿದ್ದಾರೆ.

ಸಂವಿಧಾನದ ಪ್ರಸ್ತಾವನೆ ಓದುವ ಹೊಸ ಸಂಪ್ರದಾಯ ಆರಂಭ : ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಹೊಸ ಸಂಪ್ರದಾಯವನ್ನು ಆರಂಭಿಸಲಾಗಿದೆ. ಇಂದು ಬೆಳಗ್ಗೆ ವಂದೇ ಮಾತರಂನೊಂದಿಗೆ ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ಯು. ಟಿ ಖಾದರ್ ಅವರು, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೂಲಪ್ರತಿಯನ್ನು ಓದಲಾಗುತ್ತದೆಯೋ ಅಥವಾ ತಿದ್ದುಪಡಿ ಮಾಡಲಾದ ಮಾಹಿತಿಯನ್ನೋ ಎಂದು ಪ್ರಶ್ನಿಸಿ, ತಮಗೆ ಪ್ರಸ್ತಾವನೆಯ ಪ್ರತಿಯೇ ತಲುಪಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನಾನು ಓದುತ್ತೇನೆ, ನೀವು ಅದರಂತೆ ಹೇಳಿ ಎಂದು ಸಭಾಧ್ಯಕ್ಷರು ಸಮಜಾಯಿಷಿ ನೀಡಿದರು. ಈ ವೇಳೆ ಎಲ್ಲಾ ಸಚಿವರು ಮತ್ತು ಪಕ್ಷಾತೀತವಾಗಿ ಶಾಸಕರು ಎದ್ದು ನಿಂತು ಸಂವಿಧಾನದ ಪೀಠಿಕೆಯನ್ನು ಓದಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ 18 ಬಿಲ್​ಗಳ ಮಂಡನೆ ಬಗ್ಗೆ ಚರ್ಚೆ: ವಿಪಕ್ಷಗಳಿಂದ ಅಧಿವೇಶನ ವಿಸ್ತರಣೆಗೆ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.