ETV Bharat / state

ಏ.29ರಂದು ನಡೆಯುವ ಹಾರೂಗೇರಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ: ಎಂ. ಬಿ‌. ಜೀರಲಿ‌

author img

By

Published : Apr 24, 2023, 3:40 PM IST

Updated : Apr 24, 2023, 5:10 PM IST

ರಾಜ್ಯದಲ್ಲಿ 98 ಮಂದಿ ಬಿಜೆಪಿ ರಾಷ್ಟ್ರೀಯ ನಾಯಕರು ಎರಡು ದಿನಗಳವರೆಗೆ ಪ್ರಚಾರ ನಡೆಸಲಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಬಿ. ಜೀರಲಿ ತಿಳಿಸಿದರು.

prime-minister-modi-arrival-at-harugeri-program-on-april-29
ಏ.29ರಂದು ನಡೆಯುವ ಹಾರೂಗೇರಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ: ಎಂ.ಬಿ‌. ಜೀರಲಿ‌ ಮಾಹಿತಿ

ರಾಜ್ಯ ಬಿಜೆಪಿ ವಕ್ತಾರ ಎಂ.ಬಿ. ಜೀರಲಿ

ಬೆಳಗಾವಿ: ಬಿಜೆಪಿ ಕಾರ್ಯಕರ್ತರಿಂದಲೇ ಕಟ್ಟಿರುವ ದೊಡ್ಡ ಪಕ್ಷ. ರಾಜ್ಯದ 224 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸುತ್ತಿದ್ದಾರೆ. ಏ.25 ಮತ್ತು 26ರಂದು ವಿಶೇಷ ಮಹಾ ಅಭಿಯಾನವನ್ನು ಬಿಜೆಪಿ ಕೈಗೊಂಡಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಬಿ. ಜೀರಲಿ ತಿಳಿಸಿದರು. ಸೋಮವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಶೇಷ ಮಹಾ ಅಭಿಯಾನವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ನೇತೃತ್ವದಲ್ಲಿ ನಡೆಯಲಿದೆ ಎಂದರು.

ಎಲ್ಲ ಕ್ಷೇತ್ರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಪ್ರಚಾರ ಮಾಡುತ್ತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ 98 ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಎರಡು ದಿನಗಳ ಕಾಲ ಪ್ರವಾಸ ಮಾಡಿ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಗೆ ಪ್ರಧಾನಿ ನರೇಂದ್ರ ‌ಮೋದಿ ಅವರು ಆಗಮಿಸುವುದು ಖಚಿತವಾಗಿದೆ. ಏ.29 ರಂದು ಹಾರೂಗೇರಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ‌ಮೋದಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಕಾರ್ಯಕ್ರಮಕ್ಕೂ ಅವಕಾಶ ಕೊಡಬೇಕು ಎಂದು ಕೇಳಿಕೊಂಡಿದ್ದೇವೆ ಎಂದು ಎಂ.ಬಿ‌. ಜೀರಲಿ ತಿಳಿಸಿದರು.

ಯಾರ‍್ಯಾರು ಎಲ್ಲೆಲ್ಲಿ ಪ್ರಚಾರ: ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಬಿಹಾರದ ಸಂಜೀವ ಚೌರೇಶಿಯಾ ಅವರು ಪ್ರಚಾರ ನಡೆಸಲಿದ್ದಾರೆ. ದಕ್ಷಿಣ ಮತಕ್ಷೇತ್ರದಲ್ಲಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ, ಅರಭಾವಿಗೆ ಮಹಾರಾಷ್ಟ್ರದ ಸಚಿವ ಗಿರೀಶ ಮಹಾಜನ್, ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಹಾರ ಸಂಸದ ಹರೀಶ್ ದ್ವಿವೇದಿ, ಕಿತ್ತೂರಿಗೆ ಸಿದ್ಧಾರ್ಥ ಶಿರೋಳ, ಸವದತ್ತಿಗೆ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್​, ನಿಪ್ಪಾಣಿಗೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ, ಚಿಕ್ಕೋಡಿ - ಸದಲಗಾಗೆ ರಾಜಕುಮಾರ ಚೌಹ್ಹಾರ, ಅಥಣಿಗೆ ಸಂಗೀತ ಯಾದವ್, ಕಾಗವಾಡಕ್ಕೆ ಮನೋಜ ಮಂಗೊರಕರ, ಕುಡುಚಿಗೆ ಮಹಾರಾಷ್ಟ್ರದ ಸಚಿವ ವಿಜಯಕುಮಾರ ದೇಶಮುಖ, ರಾಯಬಾಗಕ್ಕೆ ಜೈಕುಮಾರ ರಾವಳ, ಹುಕ್ಕೇರಿಗೆ ಶಿವಾಜಿ ರಾವ್ ಬಾಳವ್, ಯಮಕನಮರಡಿಗೆ ನಯಾಬ್ ಸಿಂಗ್ ಖೈನಿ ನಾಯಕರು ಆಗಮಿಸಲಿದ್ದಾರೆ. ಅಲ್ಲದೇ ಬೆಳಗಾವಿ ಜಿಲ್ಲೆಯ ಯಮಕನಮರಡಿ ಮತಕ್ಷೇತ್ರದಲ್ಲಿ ಚಿತ್ರನಟ ಸುದೀಪ್ ಅವರನ್ನು ಆಹ್ವಾನಿಸಲಾಗಿದೆ. ಡಬಲ್ ಇಂಜಿನ್ ಸರ್ಕಾರದ ಯೋಜನೆ, ರಾಜ್ಯ ಸರ್ಕಾರದ ಸಾಧನೆಯ ಬಗ್ಗೆ ಬಹಿರಂಗ ಸಮಾವೇಶದಲ್ಲಿ ನಮ್ಮ ನಾಯಕರು ಮಾತನಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯದ ರಾಜಕೀಯ ವ್ಯವಸ್ಥೆಯನ್ನು ಸಿದ್ದರಾಮಯ್ಯ ಹಾಗೂ ಅವರ ತಂಡ ನಿತ್ಯ ಒಂದು ಕೋಮಿನ ಮೇಲೆ ಅಸ್ತ್ರವನ್ನು ಪ್ರಯೋಗ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಿರುವ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟರು ಎಂದು ಹೇಳಿಕೆ ನೀಡಿ ಇಡೀ ಲಿಂಗಾಯತ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಎಂ.ಬಿ. ಜೀರಲಿ ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವ ತಳಹದಿಯ ಮೇಲೆ, ಬಿಜೆಪಿ ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು 224 ಮತ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡ ಎಲ್ಲ ಸಮುದಾಯದವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ ಎಂದರು. ಇನ್ನು ಈ ವೇಳೆ ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಶರದ್ ಪಾಟೀಲ್​​, ಎಫ್.ಎಸ್. ಸಿದ್ದಗೌಡರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ನಾಳೆಯಿಂದ ಎರಡು ದಿನ ವಿಶೇಷ ಮಹಾ ಪ್ರಚಾರ ಅಭಿಯಾನ - ಮತದಾರರ ಮನೆಗೆ ಬಿಜೆಪಿ ನಾಯಕರ ಭೇಟಿ: ಕಟೀಲ್

Last Updated :Apr 24, 2023, 5:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.