ETV Bharat / state

ಬೆಳಗಾವಿ: ಸ್ವಾತಂತ್ರ್ಯ ಯೋಧರ ಕುಟುಂಬಗಳ ವಂಶಸ್ಥರಿಗೆ ಗೌರವಧನಕ್ಕೆ ಆಗ್ರಹಿಸಿ ಧರಣಿ

author img

By ETV Bharat Karnataka Team

Published : Dec 11, 2023, 5:57 PM IST

Etv Bharat
Etv Bharat

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘದ ಪದಾಧಿಕಾರಿಗಳು ಬೆಳಗಾವಿಯ ಸುವರ್ಣ ಗಾರ್ಡನ್​ ಬಳಿಯ ಟೆಂಟ್​ನಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿ : ಸ್ವಾತಂತ್ರ್ಯ ಯೋಧರ ಕುಟುಂಬಗಳ ವಂಶಸ್ಥರಿಗೆ ಗೌರವ ಧನಕ್ಕೆ ಆಗ್ರಹಿಸಿ ಧರಣಿ

ಬೆಳಗಾವಿ : ಕರ್ನಾಟಕ ರಾಜ್ಯದ ಸಮಸ್ತ ಸ್ವಾತಂತ್ರ್ಯ ಯೋಧರ ಕುಟುಂಬಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಪರಿವಾರ ಎಂದು ಸರಕಾರ ಘೋಷಣೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘದ ಪದಾಧಿಕಾರಿಗಳು ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಪ್ರತಿಭಟನೆ ನಡೆಸಿದರು.

ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್ ಸಿ ಮಹಾದೇವಪ್ಪ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ರಾಜ್ಯದ ಸಮಸ್ತ ಸ್ವಾತಂತ್ರ್ಯ ಯೋಧರ ಕುಟುಂಬಗಳ ವಂಶಸ್ಥರಿಗೆ (ಗಂಡು ಹಾಗೂ ಹೆಣ್ಣು ಮಕ್ಕಳಿಗೆ) ಗೌರವ ಧನ ನೀಡಲು ಸರ್ಕಾರ ಆದೇಶ ಹೊರಡಿಸಬೇಕು. ರಾಜ್ಯದ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿ ಕೊಡಬೇಕು. ಸ್ವಾತಂತ್ರ್ಯ ಯೋಧರು ಮೃತಪಟ್ಟ ವೇಳೆ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನೀಡುವ ನಾಲ್ಕು ಸಾವಿರ ರೂಪಾಯಿಯನ್ನು ಹತ್ತು ಸಾವಿರ ರೂಪಾಯಿಗೆ ಹೆಚ್ಚಿಸಬೇಕು. ರಾಜ್ಯದಲ್ಲಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉಚಿತ ನಿವೇಶನ ನೀಡುವಂತೆ ಆಗ್ರಹಿಸಿದರು.

ಪ್ರತಿಭಟನೆ ಸಾಥ್ ಕೊಟ್ಟ ಗಾಂಧೀಜಿ ಸಾಕು ಮಗಳ ಮೊಮ್ಮಗಳು : ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘದ ಪದಾಧಿಕಾರಿಗಳ ಹೋರಾಟಕ್ಕೆ ಮಹಾತ್ಮಾ ಗಾಂಧೀಜಿ ಅವರ ಸಾಕು ಮಗಳು ವೀರಮ್ಮ ಜೋಗಳೇಕರ್ ಅವರ ಮಗಳು ಚಿಕ್ಕಮ್ಮ ಅವರು ಸಾಥ್ ಕೊಟ್ಟರು. ಈ ವೇಳೆ ಮಾತನಾಡಿದ ಅವರು, ಕಳೆದ 14 ವರ್ಷದಿಂದ ಹೋರಾಟ ಮಾಡುತ್ತಾ ಬಂದರೂ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ತುಂಬಾ ಬಡತನದಲ್ಲಿ ನಾವು ಜೀವನ ಸಾಗಿಸುತ್ತಿದ್ದೇವೆ. ಹಾಗಾಗಿ, ಸರ್ಕಾರ ನಮ್ಮ ಕಡೆ ಗಮನಹರಿಸಬೇಕು. ಜೊತೆಗೆ ಹಾವೇರಿಯಲ್ಲಿರುವ ಗಾಂಧೀಜಿ ಸ್ಮಾರಕವನ್ನು ಅಭಿವೃದ್ಧಿಪಡಿಸುವಂತೆ ಅವರು ಇದೇ ವೇಳೆ ಒತ್ತಾಯಿಸಿದರು.

ಸಂಘದ ಖಜಾಂಚಿ‌ ಮಹಮ್ಮದ್ ರಫೀಕ್ ಮಾತನಾಡಿ, ಬೇರೆ ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವಂಶಜರಿಗೆ ಬಸ್ ಪಾಸ್ ಸೇರಿ ಎಲ್ಲ ಸೌಲಭ್ಯ ನೀಡಲಾಗಿದೆ‌. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಈ ಸೌಲಭ್ಯದಿಂದ ವಂಚಿತರಾಗಿದ್ದೇವೆ. ದೇಶಕ್ಕೆ ನಮ್ಮ ವಂಶಜರು ಸ್ವಾತಂತ್ರ್ಯ ತಂದು ಕೊಟ್ಟಿದ್ದೇ ತಪ್ಪಾಗಿದೆ. ಈಗಲೂ ನಮಗೆ ನ್ಯಾಯ ಸಿಗದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮೃತ್ಯುಂಜಯ ಕುಲಕರ್ಣಿ, ಡಾ. ಪ್ರಭುಸ್ವಾಮಿ ಹಾಲೇವಾಡಿಮಠ, ಈರಪ್ಪ ಪರಕಾಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ನೀರಿನಿಂದ ತೆಗೆದ ಮೀನಿನಂತೆ ಬಿಜೆಪಿ ಜೆಡಿಎಸ್‌ನವರು ಒದ್ದಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಲೇವಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.