ETV Bharat / state

ಹತಾಶೆ ಮನೋಭಾವನೆಯಿಂದ ಯತ್ನಾಳ್​ ಹೇಳಿಕೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ ವಾಗ್ದಾಳಿ

author img

By ETV Bharat Karnataka Team

Published : Sep 10, 2023, 4:09 PM IST

Updated : Sep 10, 2023, 4:36 PM IST

minister-eshwar-khandre-slams-basanagowda-patil-yatnal
ಹತಾಶೆ ಮನೋಭಾವನೆಯಿಂದ ಹೇಳಿಕೆ ನೀಡುತ್ತಿದ್ದಾರೆ : ಯತ್ನಾಳ್​ ವಿರುದ್ಧ ಈಶ್ವರ್ ಖಂಡ್ರೆ ವಾಗ್ದಾಳಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿಕೆಗೆ ಸಚಿವ ಈಶ್ವರ್​ ಖಂಡ್ರೆ ತಿರುಗೇಟು ನೀಡಿದ್ದಾರೆ.

ಹತಾಶೆ ಮನೋಭಾವನೆಯಿಂದ ಯತ್ನಾಳ್​ ಹೇಳಿಕೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ ವಾಗ್ದಾಳಿ

ಬಳ್ಳಾರಿ: ಹತಾಶೆಯ ಮನೋಭಾವನೆಯಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಹೇಳಿಕೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿಕೆಗೆ ಪ್ರತಿಕ್ರಿಯಿಸಿ ಯತ್ನಾಳ್​ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ಹೀನಾಯ ಸೋಲಾಗಲಿದೆ. ಈ ಭಯದಿಂದ ಆ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್​ ದುರ್ಬಲವಾಗುವ ಪ್ರಶ್ನೆ ಇಲ್ಲ. ನಮ್ಮ ನಾಯಕತ್ವ ನಮ್ಮ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಬಂದರೆ ಅದರಲ್ಲಿ ತಪ್ಪೇನು?. ನಾವು ಬಿಜೆಪಿಗರ ರೀತಿ ಆಪರೇಷನ್​ ಕಮಲ ಮಾಡಿಲ್ಲ. ಆಪರೇಷನ್​ ಹಸ್ತ ಮಾಡುವ ಅಗತ್ಯತೆ ಕಾಂಗ್ರೆಸ್​ ಪಕ್ಷಕ್ಕೆ ಇಲ್ಲ. ಯಾರಾದರೂ ಸ್ವಯಂ ಇಚ್ಛೆಯಿಂದ ಪಕ್ಷಕ್ಕೆ ಬರುವುದಾಗಿ ಹೇಳಿದರೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಲಾಟರಿ ಮೂಲಕ ಸರ್ಕಾರ ಬಂದಿದೆ ಎಂಬ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ಪ್ರತಿಕ್ರಿಯಿಸಿದ ಅವರು, ಶ್ರೀರಾಮುಲು ಅವರ ಒಳ ಮನಸ್ಸಿನಲ್ಲೇ ಕಾಂಗ್ರೆಸ್​ ಸೇರ್ಪಡೆ ಆಗಬೇಕೆಂಬ ಆಸೆ ಇದೆ ಎಂದು ಹೇಳಿದರು.

ಅರಣ್ಯ ಸಚಿವರಾಗಿ ಮೊದಲ ಬಾರಿಗೆ ಬಳ್ಳಾರಿಗೆ ಭೇಟಿ ನೀಡಿದ ಸಚಿವ ಈಶ್ವರ್​ ಖಂಡ್ರೆ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ಎರಡೂ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಈಗಾಗಲೇ ಮಾಡಿದ್ದೇನೆ. ಇಂದು ಕೂಡ ಸಭೆ ನಡೆಸಲಾಗಿದೆ. ಅರಣ್ಯ ಸಂರಕ್ಷಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಇಂದು ನಾವು ಹಮ್ಮಿಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.

ವನಮಹೋತ್ಸವ ನಿಮಿತ್ತ ರಾಜ್ಯಾದ್ಯಂತ 5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ನಮ್ಮ ಸರ್ಕಾರವು ಬುಡಕಟ್ಟು ಜನರ, ಅರಣ್ಯವಾಸಿಗಳ ಸಮಸ್ಯೆಗಳನ್ನು ನಿವಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಜೊತೆಗೆ ಪರಿಸರ ಮಾಲಿನ್ಯದ ಬಗ್ಗೆಯೂ ಹೆಚ್ಚಿನ ಜಾಗೃತಿ ಮೂಡಿಸುವ ಬಗ್ಗೆಯೂ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

ಪ್ಲಾಸ್ಟಿಕ್​ ಮುಕ್ತ ರಾಜ್ಯವನ್ನಾಗಿ ಮಾಡಲು ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ. ಈ ಸಂಬಂಧ ಈಗಾಗಲೇ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲರೂ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಬೇಕು. ಈ ವೇಳೆ ಪಿಒಪಿ ಗಣೇಶನ ಪ್ರತಿಷ್ಠಾಪನೆ ಬದಲು ಮಣ್ಣಿನ ಗಣೇಶನನ್ನು ಪ್ರತಿಷ್ಠಾಪಿಸಿ ಎಂದು ಮನವಿ ಮಾಡಿದರು.

ಯಾರಿಗೂ ತೊಂದರೆ ಆಗದಂತೆ ರಾಜ್ಯದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗುತ್ತದೆ. ಜೊತೆಗೆ ರಾಜ್ಯದ ವಿವಿದೆಡೆ ಮಾನವ ಪ್ರಾಣಿ ಸಂಘರ್ಷ ನಡೆಯುತ್ತಿದೆ. ಈ ಸಂಬಂಧ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಇದುವರೆಗೆ 28 ಜನ ಮೃತಪಟ್ಟಿದ್ದಾರೆ‌. ಈ ಸಂಬಂಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲೂ ಕರಡಿ ದಾಳಿಯಿಂದ ನಾಲ್ಕು ಜನ ಮೃತಪಟ್ಟಿದ್ದಾರೆ. ಈ ಬಗ್ಗೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ : ಭಾರತ ಎಂದರೆ ಇಂಡಿಯಾ, ಇಂಡಿಯಾ ಎಂದರೆ ಭಾರತ ಅನ್ನೋದು ಸಣ್ಣ ಮಗುವಿಗೂ ಗೊತ್ತಿದೆ:​ ಯು.ಟಿ.ಖಾದರ್​

Last Updated :Sep 10, 2023, 4:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.