ETV Bharat / state

ರಾಜ್ಯದಲ್ಲಿ 11133 ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುತ್ತದೆ: ಎಂ ಶಿವಣ್ಣ ಕೋಟೆ

author img

By

Published : Dec 10, 2022, 5:11 PM IST

State Safai Karmachari Development Corporation
ಪೌರ ಕಾರ್ಮಿಕರ ಕುಂದು ಕೊರತೆಗಳ ಕುರಿತು ಸಭೆ

ರಾಜ್ಯದಲ್ಲಿ ಮೊದಲ ಹಂತದಲ್ಲಿ 11133 ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲಾಗುತ್ತಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಶಿವಣ್ಣ ಕೋಟೆ ಹೇಳಿದರು.

ಬೀದರ್​: ರಾಜ್ಯದಲ್ಲಿ ಮೊದಲ ಹಂತದಲ್ಲಿ 11133 ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲಾಗುತ್ತದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಶಿವಣ್ಣ ಕೋಟೆ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ನಡೆದ ಪೌರ ಕಾರ್ಮಿಕರ ಕುಂದು ಕೊರತೆಗಳ ಬಗ್ಗೆ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 53,000 ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಗುರಿ ಇದ್ದು, ಮೊದಲ ಹಂತವಾಗಿ 11133 ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುತ್ತಿದೆ ಮತ್ತು ಎರಡನೇ ಹಂತದಲ್ಲಿ ಇನ್ನುಳಿದವರಿಗೂ ಖಾಯಂಗೊಳಿಸಲಾಗುವುದು ಎಂದು ತಿಳಿಸಿದರು.

ಪೌರ ಕಾರ್ಮಿಕರಿಗೆ ಎಲ್ಲರೂ ಗೌರವ ಕೊಡಬೇಕು, ಸಮಾಜದಲ್ಲಿ ಯಾರು ಮಾಡದ ಕೆಲಸವನ್ನು ಅವರು ಮಾಡುತ್ತಾರೆ. ಪ್ರಧಾನಮಂತ್ರಿಗಳೇ ಪೌರ ಕಾರ್ಮಿಕರ ಪಾದ ಪೂಜೆ ಮಾಡಿ ಅವರಿಗೆ ಗೌರವ ಸಲ್ಲಿಸಿದ್ದಾರೆ ಮತ್ತು ರಾಜ್ಯದ ಮುಖ್ಯಮಂತ್ರಿಗಳು ಪೌರ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಒತ್ತು ನೀಡುತ್ತಿದ್ದಾರೆ. ಹಾಗಾಗಿ ಸಮಾಜದಲ್ಲಿ ಅವರಿಗೆ ಗೌರವಯುತವಾಗಿ ನೋಡಿಕೊಳ್ಳಬೇಕೆಂದು ಹೇಳಿದರು.

ಪೌರ ಕಾರ್ಮಿಕರ ಹಣ ಪಾವತಿಯ ನಂತರ ಸ್ಯಾಲರಿ ಸ್ಲಿಪ್ ಕೊಡಬೇಕು ಮತ್ತು ಎಸ್.ಬಿ.ಐ. ಲೈಫ್ ಇನ್ಸೂರೆನ್ಸ್ ಅನ್ನು ಅವರಿಗೆ ಕಡ್ಡಾಯವಾಗಿ ಮಾಡಿಸಬೇಕು. ಪೌರ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕೆ ಬೇಕಾಗುವ ಸವಲತ್ತುಗಳನ್ನು ಕೊಡಬೇಕು ಮತ್ತು ಅವರ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕು ಹಾಗೂ ಅವರಿಗೆ ಕೆಲಸ ಮಾಡಿದ ನಂತರ ವಿಶ್ರಾಂತಿ ತೆಗೆದುಕೊಳ್ಳಲು ಒಳ್ಳೆಯ ವಿಶ್ರಾಂತಿ ಗೃಹಗಳನ್ನು ನಿರ್ಮಿಸಬೇಕೆಂದರು.

ನಾನು ಯಾವುದೇ ಜಿಲ್ಲೆಗೆ ಹೋದರೆ ಮೊದಲು ಪೌರ ಕಾರ್ಮಿಕರ ಸಮಸ್ಯೆಗಳನ್ನು ಕೇಳಿ ಅಧಿಕಾರಿಗಳ ಸಭೆ ನಡೆಸುತ್ತೇನೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಅವರ ಸಮಸ್ಯೆಗಳನ್ನು ಗಮನಕ್ಕೆ ತಂದು ಕ್ರಮವಹಿಸಲು ನಿರ್ದೇಶನ ನೀಡುತ್ತೇನೆ. ಪೌರ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ, ಅವರು ಒಳ್ಳೆಯ ಉದ್ಯೋಗವನ್ನು ಪಡೆಯುವಂತಾಗಬೇಕು. ಯಾವುದೇ ಸಮಸ್ಯೆಗಳಿದ್ದರೆ ವಾಟ್ಸಾಪ್ ಮೂಲಕ ದೂರುಗಳನ್ನು ಆಯೋಗಕ್ಕೆ ಕಳಿಸಬಹುದಾಗಿದೆ ಎಂದು ಸಲಹೆ ನೀಡಿದರು.

ಮೃತಪಟ್ಟ ಪೌರ ಕಾರ್ಮಿಕರಿಗೆ 10 ಲಕ್ಷ ರೂಪಾಯಿ ಪರಿಹಾರ: ಮ್ಯಾನುವೆಲ್ ಸ್ಕ್ಯಾವೆಂಜರ್‌ಗಳು ತಮ್ಮ ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೆಕು, ಈ ಹಿಂದೆ ರಾಮನಗರ ಮತ್ತು ಕಲಬುರಗಿ ಸೇರಿದಂತೆ ರಾಜ್ಯದ ಇತರೆ ಕಡೆ ಮೃತಪಟ್ಟ ಪೌರ ಕಾರ್ಮಿಕರಿಗೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗಿದೆ. ತಮ್ಮ ಜಿಲ್ಲೆಯಲ್ಲಿ ಪೌರ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಪರಿಕರಗಳನ್ನು ಕೊಟ್ಟಿಲ್ಲ ಮತ್ತು ಕಸ ಗೂಡಿಸಲು ಪೊರಕೆಗಳನ್ನು ಕೊಡುತ್ತಿಲ್ಲವೆಂದು ಕಾರ್ಮಿಕರು ಹೇಳುತ್ತಿದ್ದಾರೆ. ಹಾಗಾಗಿ ನಿರ್ಲಕ್ಷ್ಯ ವಹಿಸುವ ಯಾವುದೇ ಅಧಿಕಾರಿಯಾದರೂ ಅವರ ವಿರುದ್ಧ ಆಯೋಗದಿಂದ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಪೌರ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು. ಅದಕ್ಕಾಗಿಯೇ ಈ ಹಿಂದೆ ನಮ್ಮ ದೇಶದ ಪಂಜಾಬ್, ಹರಿಯಾಣ, ಒಡಿಶಾ ಮತ್ತು ತಮಿಳುನಾಡಿನಲ್ಲಿ ಪೌರ ಕಾರ್ಮಿಕರಿಗೆ ನೀಡುವ ಸೌಲಭ್ಯಗಳಂತೆ ನಮ್ಮಲ್ಲೂ ಕೊಡಬೇಕು, ಒಡಿಶಾ ರಾಜ್ಯದಲ್ಲಿ ಪೌರ ಕಾರ್ಮಿಕರಿಗೆ ಒಳ್ಳೆಯ ರೀತಿಯಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಕಳೆದ ಕೆಲವು ದಿನಗಳ ಹಿಂದೆ 17 ಜನರು ಪೌರ ಕಾರ್ಮಿಕರನ್ನೊಳಗೊಂಡ ತಂಡವನ್ನು ಸಿಂಗಾಪೂರಕ್ಕೆ ಕಳುಹಿಸಲಾಗಿದ್ದು ಅಲ್ಲಿ ಯಾವ ರೀತಿಯಲ್ಲಿ ಸ್ವಚ್ಚತೆ ಮಾಡಲಾಗುತ್ತದೆ ಎಂಬುವುದರ ಕುರಿತು ಅಧ್ಯಯನ ಮಾಡದ್ದಾರೆ, ಬೀದರ್ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿರುವುದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಿವಣ್ಣ ಹೇಳಿದರು.

ಶೇ 20% ಪ್ರತಿಶತ ಅನುದಾನವನ್ನು ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಮೀಸಲು: ಪೌರ ಕಾರ್ಮಿಕರಿಗಾಗಿಯೇ ನಗರಸಭೆ ಮತ್ತು ಪುರಸಭೆ, ಪಟ್ಟಣ ಪಂಚಾಯತಗಳಲ್ಲಿ ಶೇ.20% ಪ್ರತಿಶತ ಅನುದಾನವನ್ನು ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿಯೇ ಮೀಸಲಿರಿಸಲಾಗುತ್ತದೆ ಮತ್ತು ಬೀದರ ನಗರಸಭೆ, ಪುರಸಭೆ ಅಧಿಕಾರಿಗಳು ಅದಕ್ಕೆ ಹಣ ಮೀಸಲಿಡದೇ ಖರ್ಚು ತೊರಿಸಿ ಸಭೆಗೆ ಸರಿಯಾಗಿ ಮಾಹಿತಿ ನೀಡದೆ ನಿರ್ಲಕ್ಷ ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಹಾಗೂ ಜಿಲ್ಲಾಭಿವೃದ್ಧಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ, ನಗರಸಭೆ ಮತ್ತು ಪುರಸಭೆ ಅಧಿಕಾರಿಗಳ ವಿರುದ್ಧ ಸಫಾಯಿ ಕರ್ಮಚಾರಿ ಆಯೋಗದಿಂದ ಸೋಮೋಟೋ ಕೇಸ್ ದಾಖಲು ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದರು.

ನಾನು ನಡೆಸಿದ ಇಂದಿನ ಅಧಿಕಾರಿಗಳ ಸಭೆಯಲ್ಲಿ ಯಾವ ಅಧಿಕಾರಿಯೂ ಸರ್ಮಪಕವಾಗಿ ಮಾಹಿತಿ ನೀಡದೆ ಇರುವುದರಿಂದ ಪೌರ ಕಾರ್ಮಿಕರ ಬಗ್ಗೆ ನಿಷ್ಕಾಳಜಿತನ ತೋರಿದ್ದಾರೆ ಹಾಗಾಗಿ ಇವರ ವಿರುದ್ಧ ಆಯೋಗದಿಂದ ಶಿಸ್ತು ಕ್ರಮ ಜರುಗಿಸಲು ಕ್ರಮ ತೆಗೆದುಕೊಳ್ಳುತ್ತೇನೆ ಮತ್ತು ಈ ಕುರಿತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಿಲ್ಪಾಂ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಗಿರೀಶ ರಂಚೋಳಕರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮೋತಿಲಾಲ ಕೃಷ್ಣ ಲಮಾಣಿ, ನಗರಸಭೆ ಪೌರಾಯುಕ್ತರಾದ ಪ್ರಬುದ್ಧ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಭಾಷ ಸೇರಿದಂತೆ ನಗರಸಭೆ, ಪುರಸಭೆ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಆಗಮಿಸಿದ ಪೌರ ಕಾರ್ಮಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಔರಾದ ಪಟ್ಟಣವನ್ನು ಪ್ರವಾಸಿ ತಾಣವಾಗಿಸಲು ಪಣ: ಸಚಿವ ಪ್ರಭು ಚವ್ಹಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.