ETV Bharat / state

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆ ತೀರ್ಮಾನಿಸುವಂತೆ ಬೆಂಗಳೂರು ಡಿಸಿಗೆ ಹೈಕೋರ್ಟ್ ಸೂಚನೆ

author img

By ETV Bharat Karnataka Team

Published : Sep 20, 2023, 9:00 PM IST

High Court
ಹೈಕೋರ್ಟ್

ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸೆ.22ರಿಂದ 24ರ ವರೆಗೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಅವಕಾಶ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿದರು.

ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸುವ ಸಂಬಂಧ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಮನವಿ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ನಗರ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ಮೌಖಿಕವಾಗಿ ಸೂಚನೆ ನೀಡಿದೆ.

ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಪರ ವಕೀಲ ಶ್ರೀಧರ ಪ್ರಭು, ಬುಧವಾರ ಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಗಣೇಶ್ ಚತುರ್ಥಿ ಮುಗಿದು ಎರಡು ದಿನ ಆಗಿದೆ. ಸೆ.18 ರಂದು ಹಬ್ಬ ಇದೆ ಎಂದು ಬಹಳ ಹಿಂದೆ ದಿನ ನಿಗದಿಯಾಗಿತ್ತು. ಈ ವಿಚಾರ ನಿಮಗೆ ಗೊತ್ತಿರಲಿಲ್ಲ ಎಂದು ಹೇಳುವಂತಿಲ್ಲ. ಅಧಿಕ ಮಾಸದ ಕಾರಣಕ್ಕೆ ಕೆಲವು ಕಡೆ ಸೆ.19ಕ್ಕೆ ಹಬ್ಬ ಆಚರಿಸಲಾಗಿದೆ. ಏನೇ ಇರಲಿ ಹಬ್ಬ ಮುಗಿದ ಎರಡು ದಿನಗಳ ನಂತರ ವಿಳಂಬವಾಗಿ ಕೋರ್ಟ್‌ಗೆ ಯಾಕೆ ಬಂದಿದ್ದಿರಿ, ಮುಂಚಿತವಾಗಿ ಬಂದಿದ್ದರೆ ಏನಾದರೊಂದು ಪರಿಹಾರ ಸೂಚಿಸಬಹುದಿತ್ತು ಎಂದು ಒಕ್ಕೂಟದ ಪರ ವಕೀಲರನ್ನು ಪ್ರಶ್ನಿಸಿತು.

ಈ ವೇಳೆ ಅರ್ಜಿದಾರ ಪರ ವಕೀಲರು, ನಾವು ಆಚರಿಸುತ್ತಿರುವುದು ಸಾರ್ವಜನಿಕ ಗಣೇಶ ಉತ್ಸವ. ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರುವುದು ನಮ್ಮ ಉದ್ದೇಶವಾಗಿದೆ. ಕನ್ನಡ ರಾಜ್ಯೋತ್ಸವ ನವೆಂಬರ್ 1ಕ್ಕೆ ಇರುತ್ತದೆ. ಆದರೆ, ತಿಂಗಳಡೀ ಆಚರಿಸಲಾಗುತ್ತದೆ. ಅದೇ ರೀತಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸೆ.22ರಿಂದ 24ರ ವರೆಗೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ನಿರ್ಧರಿಸಿದೆ ಎಂದು ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

ಅಂತಿಮವಾಗಿ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದೀರಾ ಎಂದು ನ್ಯಾಯಪೀಠ ವಕೀಲರನ್ನು ಪ್ರಶ್ನಿಸಿತು. ನಗರ ಜಿಲ್ಲಾಧಿಕಾರಿಗಳಿಗೆ ಸೆ.13ರಂದು ಮನವಿ ಕೊಡಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಆಗಿಲ್ಲ ಎಂದು ವಕೀಲರು ತಿಳಿಸಿದರು. ಆಗಲಿ, ನಿಮ್ಮ ಮನವಿ ಸರ್ಕಾರಿ ವಕೀಲರಿಗೆ ಕೊಡಿ. ಅವರು ನಗರ ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೀಠ ಮೌಖಿಕವಾಗಿ ಸೂಚಿಸಿತು.

ಅರ್ಜಿದಾರರ ಮನವಿ ಏನು ? ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ದಸರಾ, ಶಿವರಾತ್ರಿ, ಗಣೇಶ ಉತ್ಸವ, ಕನ್ನಡ ರಾಜ್ಯೋತ್ಸವ, ಕ್ರೀಡೆಗಳು ಆಯೋಜಿಸುವ ಸಂಬಂಧ 2006ರ ಸೆ.19ರಂದು ಅಂದಿನ ಸಚಿವರು, ಶಾಸಕರು ಪಾಲಿಕೆ ಸದಸ್ಯರು, ವಿವಿಧ ಪಕ್ಷಗಳ ಮುಖಂಡರ ಸಮಕ್ಷಮ ಚಾಮರಾಜಪೇಟೆ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿತ್ತು. ಅಲ್ಲದೇ 2022ರ ಆ.25ರಂದು ಈ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಸರ್ಕಾರ ಮತ್ತು ಬಿಬಿಎಂಪಿಗೆ ಅವಕಾಶ ನೀಡಿದ್ದ ಹೈಕೋರ್ಟ್, ಆಟದ ಮೈದಾನ ಮತ್ತು ಮುಸ್ಲಿಂ ಸಮುದಾಯಕ್ಕೆ ವರ್ಷದಲ್ಲಿ ಎರಡು ಬಾರಿ (ರಂಜಾನ್ ಮತ್ತು ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಅವಕಾಶ ಮುಂದುವರಿಸುವಂತೆ ಆದೇಶ ನೀಡಿತ್ತು.

ಈ ಆದೇಶವನ್ನು ಮಾರ್ಪಡಿಸಿದ್ದ ಹೈಕೋರ್ಟ್, ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಆಚರಿಸಲು ಅನುಮತಿ ನೀಡಿತ್ತು. ಈಗ ಸೆ.22ರಿಂದ 24ರ ವರೆಗೆ ಸಾರ್ವಜನಿಕ ಗಣೇಶ ಉತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸೆ.13ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈ ಮನವಿ ಪರಿಗಣಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಇಂದು ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.