ETV Bharat / state

ಚಾಮರಾಜನಗರ: 9 ವರ್ಷದ ಬಾಲಕನ ಮೇಲೆ ಚಿರತೆ ದಾಳಿ

author img

By

Published : Jul 25, 2023, 10:30 PM IST

Updated : Jul 26, 2023, 6:27 AM IST

leopard attack in chamarajanagara
ಚಿರತೆ

ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಚಾಮರಾಜನಗರದ ಯಳಂದೂರು ತಾಲೂಕಿನ ಮಲ್ಲಿಗೆ ಹಳ್ಳಿಯಲ್ಲಿ ನಡೆದಿದೆ.

ಚಾಮರಾಜನಗರ: ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಚಾಮರಾಜನಗರದ ಯಳಂದೂರು ತಾಲೂಕಿನ ಮಲ್ಲಿಗೆ ಹಳ್ಳಿಯಲ್ಲಿ ನಡೆದಿದೆ. ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಮಲ್ಲಿಗೆಹಳ್ಳಿ ಗ್ರಾಮದ ಹರ್ಷಿತ್ (9) ದಾಳಿಗೊಳಗಾದ ಬಾಲಕ.

ಗ್ರಾಮದ ಪ್ರಾಥಮಿಕ ಶಾಲೆ ಮುಂಭಾಗದಿಂದ ಮನೆಗೆ ತೆರಳುವಾಗ ಅವಿತು ಕುಳಿತಿದ್ದ ಚಿರತೆ ಬಾಲಕನ ಮೇಲೆ ದಾಳಿ ಮಾಡಿದೆ. ಇದನ್ನು ಕಂಡ ಜನರು ಚೀರಾಟಿ ಕೂಗಾಡಿದ್ದಾರೆ. ಜನರ ಕಿರುಚಾಟಕ್ಕೆ ಬೆದರಿದ ಚಿರತೆ ಬಾಲಕನ್ನು ಬಿಟ್ಟು ಗದ್ದೆಗಳತ್ತ ಓಡಿದೆ. ಹರ್ಷಿತ್​ನ ಮುಖ, ಗಂಟಲು, ಕಾಲು, ಹೊಟ್ಟೆಯ ಭಾಗಕ್ಕೆ ಚಿರತೆ ಗೀರಿ ಕಚ್ಚಿ ಗಾಯಗೊಳಿಸಿದ್ದು, ಯಳಂದೂರು ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.

4 ದಿನಗಳಿಂದ ಓಡಾಟ ನಡೆಸಿದ್ದ ಚಿರತೆ: ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹಾಗಾಗಿ ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ.

ಇದನ್ನೂ ಓದಿ: ಪಂಪ್ ಹೌಸ್​ನಲ್ಲಿ ಅಡಗಿ ಕುಳಿತಿದ್ದ ಚಿರತೆ: ಕೂದಲೆಳೆ ಅಂತರದಲ್ಲಿ ಚಿರತೆ ದಾಳಿಯಿಂದ ರೈತ ಬಚಾವ್​

ಚಿರತೆ ದಾಳಿಗೊಳಗಾಗಿದ್ದ ಬಾಲಕಿ ಸಾವು: ಇನ್ನು ಕೆಲವು ದಿನಗಳ ಹಿಂದೆಯಷ್ಟೇ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು.‌ ಬಾಲಕಿ 15 ದಿನಗಳ ಕಾಲ ಚಿಕಿತ್ಸೆ ಪಡೆದರೂ ಫಲಕಾರಿಯಾಗದೇ ಅಸುನೀಗಿದ್ದಳು.

ಕಳೆದ ಜೂ‌.26 ರಂದು ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಸುಶೀಲಾ ಮೇಲೆ ಚಿರತೆ ದಾಳಿ ನಡೆಸಿತ್ತು. ಚಿರತೆ ಹೊತ್ತೊಯ್ಯುವ ವೇಳೆ ಬಾಲಕಿ ಜೋರಾಗಿ ಬೊಬ್ಬೆ ಹಾಕಿದ್ದು, ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಜನರನ್ನು ಕಂಡ ಚಿರತೆ ಬಾಲಕಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿತ್ತು. ಬಾಲಕಿ ಮೇಲೆ ಇದ್ದಕ್ಕಿದ್ದಂತೆ ಎರಗಿದ ಚಿರತೆ ಸುಶೀಲಳನ್ನು ಸುಮಾರು 200 ಮೀಟರ್ ದೂರಕ್ಕೆ ಎಳೆದೊಯ್ದಿತ್ತು. ಗ್ರಾಮಸ್ಥರು ಸ್ಥಳಕ್ಕೆ ತಲುಪುವಷ್ಟರಲ್ಲಿ ಚಿರತೆ ಬಾಲಕಿಯನ್ನು ಗಂಭೀರವಾಗಿ ಗಾಯಗೊಳಿಸಿತ್ತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೆಲವು ದಿನಗಳ ಹಿಂದೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: Bear attack: ಪಾವಗಡದಲ್ಲಿ ರೈತನ ಮೇಲೆ ಕರಡಿ ದಾಳಿ.. ತೀವ್ರ ಗಾಯಗೊಂಡ ರೈತ ಆಸ್ಪತ್ರೆಗೆ ದಾಖಲು

Last Updated :Jul 26, 2023, 6:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.