ಚಿಕ್ಕಬಳ್ಳಾಪುರ: ಆಪೆ ರಿಕ್ಷಾ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿ, 7 ಮಂದಿ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಗೌರಿಬಿದನೂರು- ಮಧುಗಿರಿ ಮಾರ್ಗದ ಗುಂಡಾಪುರ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯತ್ರಿಯಮ್ಮ ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಧನಲಕ್ಷೀ, ಶಾಂತಮ್ಮ, ಹರಿತಾ, ಗಿರಿಜಾ, ಉಮಾದೇವಿ, ಲಕ್ಷ್ಮಮ್ಮ, ಹಾಗೂ ಮಂಜುಳಾ ಎಂಬವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೇಮೇಂಡ್ಸ್ ಗಾರ್ಮೆಂಟ್ಸ್ ಕಾರ್ಖಾನೆಯಿಂದ ವಾಪಸ್ ಬರುವ ವೇಳೆ ಅಪಘಾತ ನಡೆದಿದ್ದು, ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.