ETV Bharat / state

ಆರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ!

author img

By ETV Bharat Karnataka Team

Published : Dec 15, 2023, 11:18 AM IST

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ
ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

ಡಿ.22 ರಿಂದ ಡಿ.26ರ ವರೆಗೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದೆ.

ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಪ್ರವಾಸಿ ತಾಣಗಳಿಗೆ 6 ದಿನಗಳ ಕಾಲ ನಿಷೇಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೌದು, ಡಿಸೆಂಬರ್ 22 ರಿಂದ 26ರ ವರೆಗೆ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರಮುಖ ತಾಣಗಳಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ಡಿ.17 ರಿಂದ 26 ರವರೆಗೆ ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯದಾರ, ಸೀತಾಳ್ಳಯ್ಯನಗಿರಿ ಸೇರಿದಂತೆ ಹಲವು ತಾಣಗಳಿಗೆ ಜಿಲ್ಲಾಡಳಿತ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಈ ಬಾರಿಯ ದತ್ತ ಜಯಂತಿ ನಾಡ ಉತ್ಸವದಂತೆ ಆಚರಿಸಲು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋ ಬಸ್ತ್ ಇರಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ನಿಗಾ ವಹಿಸಿದೆ. ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಚಿಕ್ಕಮಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಕಿರಿದಾದ ರಸ್ತೆಗಳಲ್ಲಿ ವಾಹನಗಳು ಸಿಲುಕಿ ಪ್ರವಾಸಿಗರು ಪರದಾಡುವ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿರುವ ಬಜರಂಗದಳ ಪ್ರಾಂತ ಸಂಚಾಲಕ ಸುನೀಲ್, ಪ್ರತಿ ವರ್ಷದಂತೆ ಈ ವರ್ಷವೂ ದತ್ತಜಯಂತಿ ಅದ್ದೂರಿಯಾಗಿ ನಡೆಯಲಿದೆ. ವಿಶ್ವ ಹಿಂದೂ ಪರಿಷತ್​, ಬಜರಂಗದಳ ನೇತೃತ್ವದಲ್ಲಿ ನಿರಂತರ ಹೋರಾಟದ ಫಲವಾಗಿ ಇಂದು ದತ್ತಪೀಠದಲ್ಲಿ ತ್ರೀಕಾಲ ಪೂಜೆ ನಡೆಯುತ್ತಿದೆ. ಧಾರ್ಮಿಕ ಆಚರಣೆಗಳು ನಡೆಯುತ್ತಿವೆ.

ಈ ಬಾರಿ ದತ್ತಜಯಂತಿಯನ್ನು ಚಿಕ್ಕಮಗಳೂರಿನ ನಾಡ ಉತ್ಸವದಂತೆ ಆಚರಣೆ ಮಾಡಲು ಚಿಂತನೆ ಮಾಡಲಾಗಿದೆ. ಪ್ರತಿಯೊಬ್ಬ ಹಿಂದೂ ಸಮಾಜದ ಪ್ರತಿಯೊಬ್ಬರು ಇದರಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ನಾಡಹಬ್ಬವಾಗಿ ಆಚರಿಸಲು ಯೋಜಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳಿಂದಲೂ ದತ್ತ ಮಾಲಾಧಾರಿಗಳು ಮತ್ತು ಭಕ್ತರು ಈ ಬಾರಿಯ ಜಯಂತಿಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಪ್ರತಿವರ್ಷದಂತೆ ಈ ಬಾರಿಯೂ ದತ್ತ ಪೀಠದಲ್ಲಿ ದಿ.24ರಂದು ಅನಸೂಯ ಪೂಜೆ ನಡೆಯಲಿದೆ ಎಂದು ತಿಳಿಸಿದರು.

ಕಳೆದ ತಿಂಗಳು ದತ್ತ ಮಾಲಾಧಾರಣೆ ಹಿನ್ನೆಲೆ ಬಿಕ್ಷಾಟನೆ ಅಭಿಯಾನ ಮಾಡಲಾಗಿತ್ತು. ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ನೇತೃತ್ವದಲ್ಲಿ 15ಕ್ಕೂ ಹೆಚ್ಚು ಮಾಲಾಧಾರಿಗಳು ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡಿದ್ದರು. ದತ್ತ ಮಾಲಾಧಾರಿಗಳು ರಾಜ್ಯಾದ್ಯಂತ ಭಿಕ್ಷಾಟನೆ ನಡೆಸಿದ್ದು, ಇದರಿಂದ ಬಂದ ಪಡಿ ಅಂದರೆ ಅಕ್ಕಿ, ಬೇಳೆ, ಬೆಲ್ಲ ಸೇರಿದಂತೆ ಎಲ್ಲ ವಸ್ತುಗಳನ್ನು ಬಡವರಿಗೆ ನೀಡಲಾಗಿತ್ತು.

ಇದನ್ನೂ ಓದಿ: ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್​ಗೆ ಅದ್ದೂರಿ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು, ಜನ ಮನಸೆಳೆದ ಗಂಗಾರತಿ...

ETV Bharat Logo

Copyright © 2024 Ushodaya Enterprises Pvt. Ltd., All Rights Reserved.